ಮಂಗಳೂರು / ಬೆಳ್ತಂಗಡಿ ,ನ.07: ನ.18 ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ನಡೆಯಲಿದ್ದು ಕರ್ನಾಟಕ ರಾಜ್ಯಪಾಲ ವಜುಭಾಯಿ ರುಡಭಾಯಿ ವಾಲಾ ಅವರು ನ. 21 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. ನ. 18 ರಂದು ರಾಜ್ಯಮಟ್ಟದ ವಸ್ತು ಪ್ರದರ್ಶನವನ್ನು ಜಿಲ್ಲಾಧಿಕಾರಿ ಎ. ಬಿ. ಇಬ್ರಾಹಿಂ ಅವರು ಉದ್ಘಾಟಿಸಲಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದಾರೆ.
ನ. 21 ರಂದು ನಡೆಯುವ ಸರ್ವಧರ್ಮ ಸಮ್ಮೇಳನವನ್ನು ರಾಜ್ಯಪಾಲ ವಜುಭಾಯಿ ವಾಲಾ ಅವರು ಉದ್ಘಾಟಿಸಲಿದ್ದಾರೆ. ಆದಿಚುಂಚನಗಿರಿ ಕ್ಷೇತ್ರದ ಶ್ರೀ ನಿರ್ಮಲಾನಂದ ಸ್ವಾಮೀಜಿ ಅಧ್ಯಕ್ಷತೆವಹಿಸಲಿದ್ದಾರೆ. ಉಪನ್ಯಾಸಕರಾಗಿ ಮಂಗಳೂರಿನ ಸೈಂಟ್ ಜೋಸೆಫ್ ಸೆಮಿನರಿಯ ಆಧ್ಯಾತ್ಮಿಕ ನಿರ್ದೇಶಕ ಫಾ. ಕ್ಲಿಫರ್ಡ್ ಫೆರ್ನಾಂಡಿಸ್, ಬೆಂಗಳೂರಿನ ಮಹಾಬೋಧಿ ಸೊಸೈಟಿ ನಿರ್ದೇಶಕ ಡಾ. ಬಿ. ವಿ. ರಾಜಾರಾಮ್, ಸುಧಾ ವಾರಪತ್ರಿಕೆ ಸಹಾಯಕ ಸಂಪಾದಕ ಬಿ.ಎಂ. ಹನೀಫ್ ಭಾಗವಹಿಸಲಿದ್ದಾರೆ.
ನ.22 ರಂದು ಸಾಹಿತ್ಯ ಸಮ್ಮೇಳನ ನಡೆಯಲಿದ್ದು ಇದರ ಉದ್ಘಾಟನೆಯನ್ನು ಐಟಿಬಿಟಿ ಸಚಿವ ಎಸ್. ಆರ್. ಪಾಟೀಲ್ ನೆರವೇರಿಸಲಿದ್ದಾರೆ. ಧಾರವಾಡದ ಖ್ಯಾತ ಸಾಹಿತಿ ಡಾ. ಸಿದ್ಧಲಿಂಗ ಪಟ್ಟಣಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಉಪನ್ಯಾಸಕರಾಗಿ ಬೆಂಗಳೂರಿನ ನಿವೃತ್ತ ಐಎಎಸ್ ಅಧಿಕಾರಿ ಡಾ. ಸಿ. ಸೋಮಶೇಖರ್, ಮೈಸೂರಿನ ನಿವತ್ತ ಪ್ರಾಧ್ಯಾಪಕ ಡಾ. ಪಿ. ಕೆ. ರಾಜಶೇಖರ್, ಮೈಸೂರಿನ ಪೊಲೀಸ್ ಉಪನಿರ್ದೇಶಕಿ ಡಾ. ಧರಣೀದೇವಿ ಮಾಲಗತ್ತಿ ಆಗಮಿಸಲಿದ್ದಾರೆ.