ಕುಂದಾಪುರ: ನಮ್ಮ ನೆಲ, ಜಲ ಹಾಗೂ ಭಾಷೆಯನ್ನು ಗೌರವಿಸುವುದರಿಂದ ನಮ್ಮ ಸಂಸ್ಕೃತಿ ಹಾಗೂ ನಾಡು ಅಭಿವೃದ್ದಿಯಾಗಲು ಸಾಧ್ಯ. ಭಾಷೆ ಹಾಗೂ ನಾಡಿನ ಬಗ್ಗೆ ಗೌರವವನ್ನು ಬೆಳೆಸಿಕೊಳ್ಳುವುದರಿಂದ ನಾವು ಬೆಳೆಯಲು ಸಾಧ್ಯ. ದೇಶ ಅಭಿವೃದ್ಧಿಯ ಪಥದಲ್ಲಿ ಸಾಗಲು ಯುವಕರ ಪಾತ್ರ ಮಹತ್ತರವಾದದ್ದು. ಪರಸ್ಪರ ಗೌರವದಿಂದ ಕಾಣುವ ಮನೋಭಾವಗಳು ನಮ್ಮಲ್ಲಿ ಹೆಚ್ಚಾಗಬೇಕು. ಸಾಹಿತ್ಯ, ಶಿಕ್ಷಣ, ಕ್ರೀಡೆ, ಕಲೆ ಸೇರಿದಂತೆ ಸಮಾಜದ ಹಲವು ಕ್ಷೇತ್ರಗಳಲ್ಲಿ ಪ್ರತಿಭಾನ್ವೀತರನ್ನು ಗುರುತಿಸುವ ಕೆಲಸವಾಗಬೇಕು. ಸರ್ಕಾರ ಹಾಗೂ ಇಲಾಖೆಗಳು ಸಾಮಾಜಿಕವಾಗಿ ಸ್ಪಂದಿಸುತ್ತಿದ್ದು, ತಾಲೂಕಿನಲ್ಲಿ ಒಂದು ಸಾವಿರಕ್ಕೂ ಮಿಕ್ಕಿ ವಸತಿ ಕಲ್ಪಿಸಿಕೊಡಲಾಗಿದೆ ಎಂದು ಕುಂದಾಪುರದ ಕಂದಾಯ ಸಹಾಯಕ ಆಯುಕ್ತೆ ಚಾರುಲತಾ ಸೋಮಾಲ್ ನುಡಿದಿದ್ದಾರೆ.
ನಗರದ ಗಾಂಧಿ ಮೈದಾನದಲ್ಲಿ 66ನೇ ಗಣರಾಜ್ಯೋತ್ಸವದ ಸಂದರ್ಭ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗೋಪಾಲ ಶೆಟ್ಟಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕುಂದಾಪುರ ತಹಸೀಲ್ದಾರ್ ಗಾಯತ್ರಿ ಎಸ್, ನಾಯ್ಕ, ಕುಂದಾಪುರ ಪುರಸಭೆಯ ಅಧ್ಯಕ್ಷೆ ಕಲಾವತಿ ಯು.ಎಸ್, ಜಿಲ್ಲಾ ಶೀಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಮಾಜೀ ಅಧ್ಯಕ್ಷ ಗಣಪತಿ ಟಿ. ಶ್ರೀಯಾನ್, ಕುಂದಾಪುರ ಪೊಲೀಸ್ ಉಪವಿಭಾಗದ ಡಿವೈಎಸ್ಪಿ ಮಂಜುನಾಥ ಶೆಟ್ಟಿ, ಸರ್ಕಲ್ ಇನ್ಸ್ಪೆಕ್ಟರ್ ದಿವಾಕರ ಪಿ.ಎಂ, ಪುರಸಭೆಯ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ಪುರಸಭಾ ಸದಸ್ಯ ರಾಜೇಶ್ ಕಾವೇರಿ, ಶ್ರೀಧರ ಶೆರೆಗಾರ್, ಪುಷ್ಪಾ ಶೇಟ್, ಗುಣರತ್ನ, ಕ್ಷೇತ್ರ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಸೀತಾರಾಮ ಶೆಟ್ಟಿ, ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ದಿನಕರ ಶೆಟ್ಟಿ, ಪುರಸಭೆಯ ಪರಿಸರ ಅಭಿಯಂತರ ರಾಘವೇಂದ್ರ, ಮೊದಲಾದವರು ಇದ್ದರು. ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ ಬೀಜಾಡಿ ನಿರೂಪಿಸಿದರು.
ಕುಂದಾಪುರ ಪೊಲೀಸ್ ಠಾಣೆಯ ಉಪ ನಿರೀಕ್ಷಕ ನಾಸಿರ್ ಹುಸೇನ್ ಅವರ ನೇತೃತ್ವದಲ್ಲಿ ಪೊಲೀಸ್, ಎನ್.ಸಿ.ಸಿ, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ ತಂಡದವರಿಂದ ಆಕರ್ಷಕ ಪಥ ಸಂಚಲನಾ ನಡೆಯಿತು. ವಿವಿಧ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಮನೋರಂಜನಾ ಕಾರ್ಯಕ್ರಮಗಳು ನಡೆಯಿತು.

















































