ಮಂಗಳೂರು,ಜೂ 9: ಮಾಹಿತಿಹಕ್ಕು ಕಾರ್ಯಕರ್ತ ವಿನಾಯಕ್ ಬಾಳಿಗರ ಹತ್ಯೆ ಪ್ರಕರಣದ ಪ್ರಮುಖ ಶಖಿತ ಆರೋಪಿ ನಮೋ ಬ್ರಿಗೇಡ್ ಮುಖ್ಯಸ್ಥ ನರೇಶ್ ಶೆಣೈ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ರದ್ದುಪಡಿಸಿದೆ.
ಎರಡೂವರೆ ತಿಂಗಳ ಹಿಂದೆ ಆರ್ಟಿಐ ಕಾರ್ಯಕರ್ತ ವಿನಾಯಕ್ ಬಾಳಿಗರ ಹತ್ಯೆ ನಡೆದ ನಂತರ ನಮೋ ಬ್ರಿಗೇಡ್ ಮುಖ್ಯಸ್ಥ ನರೇಶ್ ಶೆಣೈ ತಲೆಮರೆಸಿಕೊಂಡಿದ್ದು. ದ.ಕ. ಜಿಲ್ಲಾ ನ್ಯಾಯಾಲಯದಲ್ಲಿ ಈತ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದನು. ಜಿಲ್ಲಾ ನ್ಯಾಯಾಲಯ ಇತ್ತೀಚೆಗೆ ಈತನಿಗೆ ನಿರೀಕ್ಷಣಾ ಜಾಮೀನು ರದ್ದುಪಡಿಸಿತ್ತು.
ತದನಂತರ ಹೈಕೋರ್ಟ್ ಮೆಟ್ಟಿಲೇರಿದ್ದ ನರೇಶ್ ಶೆಣೈ ಪರ ವಕೀಲರು ಈತನಿಗೆ ನಿರೀಕ್ಷಣಾ ಜಾಮೀನು ನೀಡುವಂತೆ ವಾದ ಮಾಡಿದ್ದರು. ಆದರೆ ವಿಚಾರಣೆ ನಡೆಸಿದ ಹೈಕೋರ್ಟ್ ನರೇಶ್ ಶೆಣೈಗೆ ನಿರೀಕ್ಷಣಾ ಜಾಮೀನು ರದ್ದುಗೊಳಿಸಿದೆ.
ಹೈಕೋರ್ಟ್ ನ್ಯಾಯಧೀಶ ಫಣೀಂದ್ರ ಈ ಆದೇಶವನ್ನು ನೀಡಿದ್ದಾರೆ. ನರೇಶ್ ಶೆಣೈಗೆ ನಿರೀಕ್ಷಣಾ ಜಾಮೀನು ನೀಡುವುದನ್ನು ವಿರೋಧಿಸಿ ವಿನಾಯಕ್ ಬಾಳಿಗಾ ಕುಟುಂಬದ ಪರ ವಕೀಲ ರವೀಂದ್ರ ಕಾಮತ್ ಮತ್ತು ಪಬ್ಲಿಕ್ ಪ್ರಾಸಿಕ್ಯೂಟರ್ ನವಾಝ್ ವಾದ ಮಂಡಿಸಿದ್ದರು.
ಮಾರ್ಚ್ 21ರಂದು ಮಂಗಳೂರು ನಗರದ ಬೆಸೆಂಟ್ ಕಾಲೇಜಿನ ಸಮೀಪ, ಪಿ.ವಿ.ಎಸ್.ಕಲಾಕುಂಜದ ಎದುರಿನ ಓಣಿಯೊಂದರಲ್ಲಿ ವಿನಾಯಕ ಪಾಂಡುರಂಗ ಬಾಳಿಗರನ್ನು ಅವರ ನಿವಾಸದ ಎದುರೆ ದುಷ್ಕರ್ಮಿಗಳು ಹತ್ಯೆಗೈದಿದ್ದರು.
ಅಂದು ವಿನಾಯಕ ಪಾಂಡುರಂಗ ಬಾಳಿಗರವರು ಪ್ರತೀ ದಿನದಂತೆ ಬೆಳಿಗ್ಗೆ 05-45 ಗಂಟೆಗೆ ವೆಂಕಟರಮಣ ದೇವಸ್ಥಾನಕ್ಕೆ ಹೋಗಲು ತನ್ನ ಸ್ಕೂಟರ್ ಹೋಂಡಾ ಪ್ಲೆಸರ್ ಕೆ.ಎ.19.ಇ.ಡಿ 3098 ರಲ್ಲಿ ಮನೆಯಿಂದ ಹೊರಟು ಸುಮಾರು 75 ಮೀಟರ್ ದೂರ ಹೋಗುವಷ್ಟರಲ್ಲಿ ವಿನಾಯಕ ಪಾಂಡುರಂಗ ಬಾಳಿಗರನ್ನು ತಡೆದು ನಿಲ್ಲಿಸಿದ ಮೂವರು ವ್ಯಕ್ತಿಗಳು ಯದ್ವಾತದ್ವಾ ತಲವಾರಿನಿಂದ ಕಡಿದು ಅವರು ಬಂದ ಬೈಕ್ ನಲ್ಲಿ ಪರಾರಿಯಾಗಿದ್ದರು,
ಈ ಕೃತ್ಯಕ್ಕೆ ಸಂಬಂಧಿಸಿ ಮಂಗಳೂರು ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ವಿನಿತ್ ಪೂಜಾರಿ, ನಿಶಿತ್ ದೇವಾಡಿಗ, ಶಿವ @ ಶಿವಪ್ರಸಾದ್, ಶೈಲೇಶ್ @ ಶೈಲು ಹಾಗೂ ಪ್ರಕರಣದ ಪ್ರಮುಖ ಶಂಕಿತ ಆರೋಪಿ ನರೇಶ್ ಶೆಣೈ ಬಲಗೈ ಬಂಟ ಎಂದು ಹೇಳಲಾದ ಕೆ ಮಂಜುನಾಥ್ ಶೆಣೈ ಯಾನೆ ಮಂಜು ನಿರೇಶ್ವಾಲ್ಯ ಎಂಬವರನ್ನು ಬಂಧಿಸಿತ್ತು. ಈ ಐವರಲ್ಲಿ ಮಂಜುನಾಥ್ ಶೆಣೈ ಈಗಾಗಲೇ ಜಾಮೀನು ಮೇಲೆ ಬಿಡುಗಡೆಗೊಂಡಿದ್ದಾರೆ. ಪ್ರಕರಣದಲ್ಲಿ ಉಳಿದ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.
Comments are closed.