
ಬೆಂಗಳೂರು, ಸೆಪ್ಟೆಂಬರ್ 15 : ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ಕೊಲೆ ಪ್ರಕರಣದ ಆರೋಪಿ ನರೇಶ್ ಶೆಣೈಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ. ಗುರುವಾರ ಕರ್ನಾಟಕ ಹೈಕೋರ್ಟ್ ನರೇಶ್ ಶೆಣೈಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜೂನ್ 26ರಂದು ಉಡುಪಿಯಲ್ಲಿ ನರೇಶ್ ಶೆಣೈ ಬಂಧಿಸಲಾಗಿತ್ತು. ಮಂಗಳೂರಿನ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಆಗಸ್ಟ್ 9ರಂದು ನರೇಶ್ ಶೆಣೈ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಆದ್ದರಿಂದ, ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು 2 ಲಕ್ಷ ರೂ.ಗಳ ಬಾಂಡ್, ಇಬ್ಬರ ಶ್ಯೂರಿಟಿ ಆಧಾರದ ಮೇಲೆ ಜಾಮೀನು ನೀಡಲಾಗಿದೆ.
ಸಾಕ್ಷಿಗಳನ್ನು ನಾಶ ಮಾಡಬಾರದು ಎಂದು ಷರತ್ತು ವಿಧಿಸಿದೆ. 2016ರ ಮಾರ್ಚ್ 21ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಬಳಿ ಆರ್ಟಿಐ ಕಾರ್ಯಕರ್ತ ವಿನಾಯಕ ಪಾಂಡುರಂಗ ಬಾಳಿಗ ಅವರ ಹತ್ಯೆ ನಡೆದಿತ್ತು. ಹತ್ಯೆಯ ಪ್ರಮುಖ ಆರೋಪಿ ನರೇಶ್ ಶೆಣೈ ಮೂರು ತಿಂಗಳಿನಿಂದ ತಲೆ ಮರೆಸಿಕೊಂಡಿದ್ದರು. ಜೂನ್ 26ರಂದು ಅವರನ್ನು ಬಂಧಿಸಲಾಗಿತ್ತು.
ಮಾರ್ಚ್ 21ರಂದು ಮಂಗಳೂರು ನಗರದ ಬೆಸೆಂಟ್ ಕಾಲೇಜಿನ ಸಮೀಪ, ಪಿ.ವಿ.ಎಸ್.ಕಲಾಕುಂಜದ ಎದುರಿನ ಓಣಿಯೊಂದರಲ್ಲಿ ವಿನಾಯಕ ಪಾಂಡುರಂಗ ಬಾಳಿಗರನ್ನು ಅವರ ನಿವಾಸದ ಎದುರೆ ದುಷ್ಕರ್ಮಿಗಳು ಹತ್ಯೆಗೈದಿದ್ದರು. ಅಂದು ವಿನಾಯಕ ಪಾಂಡುರಂಗ ಬಾಳಿಗರವರು ಪ್ರತೀ ದಿನದಂತೆ ಬೆಳಿಗ್ಗೆ 05-45 ಗಂಟೆಗೆ ವೆಂಕಟರಮಣ ದೇವಸ್ಥಾನಕ್ಕೆ ಹೋಗಲು ತನ್ನ ಸ್ಕೂಟರ್ ಹೋಂಡಾ ಪ್ಲೆಸರ್ ಕೆ.ಎ.19.ಇ.ಡಿ 3098 ರಲ್ಲಿ ಮನೆಯಿಂದ ಹೊರಟು ಸುಮಾರು 75 ಮೀಟರ್ ದೂರ ಹೋಗುವಷ್ಟರಲ್ಲಿ ವಿನಾಯಕ ಪಾಂಡುರಂಗ ಬಾಳಿಗರನ್ನು ತಡೆದು ನಿಲ್ಲಿಸಿದ ಮೂವರು ವ್ಯಕ್ತಿಗಳು ಯದ್ವಾತದ್ವಾ ತಲವಾರಿನಿಂದ ಕಡಿದು ಅವರು ಬಂದ ಬೈಕ್ ನಲ್ಲಿ ಪರಾರಿಯಾಗಿದ್ದರು, ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ನರೇಶ್ ಶೆಣೈ, ವಿನಿತ್ ಪೂಜಾರಿ, ನಿಶಿತ್ ದೇವಾಡಿಗ, ಶಿವ @ ಶಿವಪ್ರಸಾದ್, ಶೈಲೇಶ್ @ ಶೈಲು, ಕೆ ಮಂಜುನಾಥ್ ಶೆಣೈ ಯಾನೆ ಮಂಜು ನಿರೇಶ್ವಾಲ್ಯ,ಶ್ರೀಕಾಂತ್ ಎಂಬವರನ್ನು ಪೊಲೀಸರು ಬಂಧಿಸಿದ್ದರು. ಇವರಲ್ಲಿ ಮಂಜು ನಿರೇಶ್ವಾಲ್ಯರಿಗೆ ಈಗಾಗಲೇ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
Comments are closed.