ಮಂಗಳೂರು, ಸೆ.28: ಮಂಗಳೂರು ವಿಶ್ವವಿದ್ಯಾ ನಿಲಯ ಕಾಲೇಜಿನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವು ಮಂಗಳವಾರ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಿತು.
ಈ ಸಂದರ್ಭ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಅವರು ಕಾಲೇಜಿನ ಬಿಸಿ ಯೂಟ ಯೋಜನೆಗೆ ಚಾಲನೆ ನೀಡಿ ಬಳಿಕ ನೂತನ ಕೊಠಡಿಯನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಕಾಲೇಜಿನಲ್ಲಿ ಅರ್ಥ ಶಾಸ್ತ್ರದ ಸ್ನಾತಕೋತ್ತರ ವಿಭಾಗವನ್ನು ವೀರಪ್ಪ ಮೊಯ್ಲಿ ಅವರು ಸಾಂಕೇತಿಕವಾಗಿ ಉದ್ಘಾಟಿಸಿದರು. ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 2017ರಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನ 150ನೇ ವರ್ಷಾಚರಣೆಯನ್ನು ಆಚರಿಸಲಾಗುವುದು. ಈ ಸಂದರ್ಭ 1.83 ಕೋ.ರೂ. ವೆಚ್ಚ ದಲ್ಲಿ ಕಾಲೇಜಿನ ರವೀಂದ್ರ ಕಲಾಭವನ ವನ್ನು ನವೀಕರಿಸಲು ಯುಜಿಸಿ ಅನುದಾನ ಬಿಡುಗಡೆ ಮಾಡಿದೆ ಎಂದು ಮೊಯ್ಲಿ ಹೇಳಿದರು.
ಮೀಡಿಯಾ ಲ್ಯಾಬ್ ಕೊಠಡಿಯನ್ನು ಸಂಸದ ನಳಿನ್ ಕುಮಾರ್ ಕಟೀಲು ಉದ್ಘಾಟಿಸಿ ಶುಭ ಹಾರೈಸಿದರು. ವಿವಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಆರಂಭಿಸಲಾದ ಮಧ್ಯಾಹ್ನದ ಊಟದ ಯೋಜನೆಯನ್ನು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಉದ್ಘಾಟಿಸಿದರು.ಯೋಜನೆಗೆ ತಾನು ವೈಯಕ್ತಿವಾಗಿ 25 ಸಾವಿರ ರೂ. ದೇಣಿಗೆ ನೀಡುವುದಾಗಿ ಅವರು ಪ್ರಕಟಿಸಿದರು.
ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಕೆ.ಭೈರಪ್ಪ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿಗೆ 2017ರಲ್ಲಿ 150 ವರ್ಷ ತುಂಬಲಿದೆ. ಈ ಸಂದರ್ಭದಲ್ಲಿ ವರ್ಷವಿಡೀ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಅಲ್ಲದೆ ಕಾಲೇಜಿನ ಅಭಿವೃದ್ಧಿಗೆ ಸಂಬಂಧಿಸಿದಂತೆ 175 ವರ್ಷ ತುಂಬುವ ಕಾಲಾವಧಿಗೆ ಸೂಕ್ತ ವಾಗುವ ಯೋಜನೆಯನ್ನು ಈ ಸಂದರ್ಭದಲ್ಲಿ ತಯಾರಿಸಲಾಗುವುದು. ಜೊತೆಗೆ ಶೀಘ್ರದಲ್ಲಿ ರವೀಂದ್ರ ಕಲಾ ಭವನವನ್ನು ನವೀಕರಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಭೈರಪ್ಪ ಅವರು ಹೇಳಿದರು. ಈ ಸಂದರ್ಭದಲ್ಲಿ ಅವರು ಕಾಲೇಜಿನ ಬಿಸಿ ಯೂಟ ಯೋಜನೆಗೆ 25 ಸಾವಿರ ರೂ. ವೈಯ ಕ್ತಿಕ ದೇಣಿಗೆ ನೀಡುವುದಾಗಿ ತಿಳಿಸಿದರು.
ಮಂಗಳೂರು ವಿವಿಯ ಸಿಂಡಿಕೇಟ್ ಸದಸ್ಯರಾದ ಸುಂದರ ನಾಯ್ಕ, ಪ್ರಸನ್ನ ಕುಮಾರ್, ಮೋಹನ್ ನಂಬ್ಯಾರ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಧರ್ಮಣ್ಣ ನಾಯ್ಕಾ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎ. ಉದಯ ಕುಮಾರ್ ಸ್ವಾಗತಿಸಿದರು. ಜಯವಂತ್ ನಾಯ್ಕಾ ವಂದಿಸಿದರು.
Comments are closed.