ಮಂಗಳೂರು, ಅ.3: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ವತಿಯಿಂದ ಮಂಗಳೂರಿನ ಅತ್ತಾವರದಲ್ಲಿರುವ ಅಕಾಡೆಮಿ ಕಚೇರಿಯಲ್ಲಿ ಇಂದು ನಡೆದ ಬ್ಯಾರಿ ಭಾಷಾ ದಿನಾಚರಣೆ ಹಾಗೂ ಭಾಷಾ ಸಪ್ತಾಹ, ಪ್ರಚಾರ ಆಂದೋಲನ, ಪುಸ್ತಕ ಮಾರಾಟ ಜಾಥಾ ಕಾರ್ಯಕ್ರಮ ಗಳನ್ನು ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಎಸ್.ಎಂ.ಆರ್.ರಶೀದ್ ಹಾಜಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ಮದ್ರಸಗಳಲ್ಲಿ ಮತ್ತು ಮಸೀದಿಗಳಲ್ಲಿ ಶಿಕ್ಷಣ ಮತ್ತು ಧಾರ್ಮಿಕ ಉಪನ್ಯಾಸವನ್ನು ಬ್ಯಾರಿ ಭಾಷೆಯಲ್ಲೇ ನೀಡುವ ಮೂಲಕ ಬ್ಯಾರಿ ಭಾಷೆಯ ಅಭಿವೃದ್ಧಿಗೆ ಪ್ರಯತ್ನಗಳಾಗಬೇಕು ಎಂದು ಹೇಳಿದರು. ಮದ್ರಸಗಳಲ್ಲಿ ಮತ್ತು ಮಸೀದಿಗಳಲ್ಲಿ ಶಿಕ್ಷಣ ಮತ್ತು ಧಾರ್ಮಿಕ ಉಪನ್ಯಾಸವನ್ನು ಮಲಯಾಳಂ ಬದಲಿಗೆ ಬ್ಯಾರಿ ಭಾಷೆಯಲ್ಲೇ ನೀಡುವ ನಿಟ್ಟಿನಲ್ಲಿ ಈ ಹಿಂದೆಯೂ ಪ್ರಯತ್ನಪಡಲಾಗಿದ್ದು, ಇನ್ನು ಮುಂದೆಯೂ ಹೆಚ್ಚಿನ ಪ್ರಯತ್ನ ಮಾಡಲಾಗುವುದು ಎಂದರು.
ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷೆ ಜಾನಕಿ ಎಂ.ಬ್ರಹ್ಮಾವರ ಅವರು, ಬ್ಯಾರಿ ಪುಸ್ತಕ ಮಾರಾಟ ವಾಹನ ಜಾಥಕ್ಕೆ ಚಾಲನೆ ನೀಡಿದರು.
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ರಾಯ್ ಕ್ಯಾಸ್ತಲಿನೊ, ಅವರು, ಭಾಷಾ ಪ್ರಚಾರ ಆಂದೋಲನದ ಕರಪತ್ರ ಬಿಡುಗಡೆ ಮಾಡಿದರು.
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಹಿರಿಯ ಸಾಹಿತಿ ಪ್ರೊ.ಎ.ವಿ.ನಾವಡ ಮುಖ್ಯ ಅತಿಥಿಗಳಾಗಿದ್ದರು.
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ರಿಜಿಸ್ಟ್ರಾರ್ ಉಮರಬ್ಬ ಸ್ವಾಗತಿಸಿದರು. ಸದಸ್ಯ ಮುಹಮ್ಮದ್ ಝಕರಿಯ ಕಲ್ಲಡ್ಕ ವಂದಿಸಿದರು. ಸದಸ್ಯ ಅಬ್ದುಲ್ ಹಮೀದ್ ಗೋಳ್ತಮಜಲು ಕಾರ್ಯಕ್ರಮ ನಿರೂಪಿಸಿದರು.
Comments are closed.