ಉಡುಪಿ: ರಾಜ್ಯದಲ್ಲಿ ಆರೋಗ್ಯಕ್ಕಾಗಿ ಆರುಕೋಟಿಯಿಂದ 7 ಕೋಟಿ ರೂ.ಗಳನ್ನು ಮೀಸಲಿರಿಸಿದ್ದು, ಬಡವರ ಆರೋಗ್ಯ ಸರ್ಕಾರದ ಕಾಳಜಿ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.
ಅವರು ಭಾನುವಾರದಂದು ಉಡುಪಿಯ ಪುರಭವನದಲ್ಲಿ, ಜಿಲ್ಲಾಡಳಿತ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಬಿ ಆರ್ ಎಸ್ ಸ್ವಾಸ್ಥ್ಯ ಮತ್ತು ಸಂಶೋಧನಾ ಸಂಸ್ಥೆಯವರು ಸಹಭಾಗಿತ್ವದಲ್ಲಿ ನಿರ್ಮಾಣ ಮಾಡುತ್ತಿರುವ ಕರ್ನಾಟಕ ಸರ್ಕಾರಿ ಕೂಸಮ್ಮ ಶಂಭು ಶೆಟ್ಟು ಹಾಜಿ ಅಬ್ದುಲ್ಲಾ ಮೆಮೋರಿಯಲ್ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನೂತನ ಕಟ್ಟಡದ ಶಂಕುಸ್ಥಾಪನಾ ಸಮಾರಂಭದವನ್ನು ನೆರವೇರಿಸಿ ಮಾತನಾಡುತ್ತಿದ್ದರು.
ಜನರ ಆರೋಗ್ಯಕ್ಕಾಗಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 200 ಕೋಟಿ ರೂ.ಗಳನ್ನು ಖಾಸಗಿ ಆಸ್ಪತ್ರೆಗಳಿಗೆ ನೀಡುತ್ತಿದ್ದೇವೆ. ಬಡ ಜನರಿಗೆ ಉತ್ತಮ ಗುಣಮಟ್ಟದ ಆರೋಗ್ಯಕ್ಕಾಗಿ ಸರ್ಕಾರ ಪ್ರಥಮಾದ್ಯತೆ ನೀಡುತ್ತಿದೆ. ಖಾಸಗಿಯವರ ಸಹಭಾಗಿತ್ವದೊಂದಿಗೆ ರಾಜ್ಯದ ಅಭಿವೃದ್ಧಿ ಕಾಮಗಾರಿಗಳನ್ನು ಇನ್ನಷ್ಟು ಸಬಲಗೊಳಿಸಲು ಸರ್ಕಾರ ಬದ್ಧವಾಗಿದೆ ಎಂಬುದನ್ನು ಮುಖ್ಯಮಂತ್ರಿಗಳು ಸ್ಪಷ್ಟ ಪಡಿಸಿದರು. ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು 70 ಹಾಸಿಗೆಯಿಂದ 200 ಹಾಸಿಗೆಗೆ ಮೇಲ್ದರ್ಜೆಗೇರಿಸಿದ್ದು, ಯಾವುದೇ ಕಾರಣಕ್ಕೂ ಆರೋಗ್ಯ ಸೇವೆಯನ್ನು ಖಾಸಗೀಕರಣ ಗೊಳಿಸುವುದಿಲ್ಲ ಎಂಬ ಸ್ಪಷ್ಟಪಡಿಸಿದರು. ಈಗಾಗಲೇ ಅಧಿಕಾರ ಸ್ವೀಕರಿಸಿದಾಗ ನುಡಿದ ಮಾತಿನಂತೆ 80% ಭರವಸೆಗಳನ್ನು ಈಡೇರಿಸಲಾಗಿದೆ. ಎಲ್ಲ ಸಂದರ್ಭಗಳಲ್ಲೂ ಬಡವರಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ, ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ ಎಂಬುದನ್ನು ಮುಖ್ಯಮಂತ್ರಿಗಳು ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ ಆರ್ ರಮೇಶ್ ಕುಮಾರ್ ಅವರು ಸಭೆಯಲ್ಲಿ ಆಸ್ಪತ್ರೆ ಸಂಬಂಧ ಒಡಂಬಡಿಕೆ ಪತ್ರವನ್ನು ಹಸ್ತಾಂತರಿಸಿ ಮಾತನಾಡಿ, ಸರ್ಕಾರಿ ವೈದ್ಯಕೀಯ ಸೇವೆಯನ್ನು ಬಲಿಷ್ಠಗೊಳಿಸಿ, ಬಡವರಿಗೆ ಆರೋಗ್ಯ ನೀಡುವುದೇ ಇಲಾಖೆಯ ಧ್ಯೇಯವಾಗಿದೆ ಎಂದರು. ಎಲ್ಲ ತಾಲೂಕು ಕೇಂದ್ರಗಳಲ್ಲೂ ಐಸಿಯು, ಡಯಾಲಿಸಿಸ್ ಸೇವೆಯನ್ನು ಬಡವರಿಗೆ ಒದಗಿಸಲು ಕ್ರಮಕೈಗೊಳ್ಳಲಾಗಿದೆ. ಬಡವರ ಪರವಾಗಿ ಇಲಾಖೆ ಕೆಲಸ ಮಾಡುತ್ತಿದ್ದು, ಖಾಸಗೀಕರಣಕ್ಕೆ ಅವಕಾಶವಿಲ್ಲ ಎಂದು ಹೇಳಿದರು. ಇಲಾಖೆ ಸುಧಾರಣೆಗಾಗಿ ಹೋರಾಟವನ್ನೇ ನಡೆಸುತ್ತಿದ್ದು, ಗುಣಮಟ್ಟದ ಆರೋಗ್ಯವೇ ನಮ್ಮ ಧ್ಯೇಯವಾಕ್ಯವಾಗಿದೆ. ಅದಕ್ಕೋಸ್ಕರ ನಿವೃತ್ತ ನ್ಯಾಯಮೂರ್ತಿ ವಿಕ್ರಮ್ಜಿತ್ಸೇನ್ ಅವರ ಅಧ್ಯಕ್ಷತೆಯಲ್ಲಿ ಆರೋಗ್ಯ ಇಲಾಖೆ ವಿಸ್ತೃತ ವರದಿಯನ್ನು ತಯಾರಿಸುತ್ತಿದೆ.ಜಿಲ್ಲಾ ಉಸ್ತುವಾರಿ ಸಚಿವರ ಕೋರಿಕೆಯಂತೆ ಮುಂದಿನ ಎರಡು ದಿನಗಳೊಳಗಾಗಿ ಮೇಲ್ದರ್ಜೆಗೇರಿದ ಜಿಲ್ಲಾಸ್ಪತ್ರೆಗೆ ಹಾಜಿ ಅಬ್ದುಲ್ಲಾ ಅವರ ಹೆಸರನ್ನು ಇಡುವುದಾಗಿ ಅವರು ಈ ಸಂದರ್ಭದಲ್ಲಿ ಭರವಸೆ ನೀಡಿದರು.
ಅಧ್ಯಕ್ಷೀಯ ಭಾಷಣ ಹಾಗೂ ಸ್ವಾಗತ ಭಾಷಣದಲ್ಲಿ ಸರ್ಕಾರದ ಬದ್ಧತೆಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿದರು. ಬಿ ಆರ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಬೈಂದೂರು ಶಾಸಕ ಗೋಪಾಲ ಪೂಜಾರಿ, ವಿಧಾನಪರಿಷತ್ ಸದಸ್ಯ ಪ್ರತಾಪ್ಚಂದ್ರ ಶೆಟ್ಟಿ, ಮಾಜಿ ಸಚಿವರು ಹಾಗೂ ಮೂಡಬಿದ್ರೆ ಶಾಸಕ ಅಭಯಚಂದ್ರ ಜೈನ್, ರಾಜ್ಯ ಸರ್ಕಾರದ ಮುಖ್ಯ ಸಚೇತಕ ಐವಾನ್ ಡಿಸೋಜಾ, ನಗರಸಭೆ ಅಧ್ಯಕ್ಷ ಮೀನಾಕ್ಷಿ ಮಾಧವ ಬನ್ನಂಜೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನರಸಿಂಹ ಮೂರ್ತಿ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಗೋವಿಂದರಾಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಬಿ ಆರ್ ಎಸ್ ಸ್ವಾಸ್ಥ್ಯ ಮತ್ತು ಸಂಶೋಧನಾ ಸಂಸ್ಥೆ ಯ ಡಾ ಶ್ರೀಮತಿ ಸಿ ಆರ್ ಶೆಟ್ಟಿ, ಡಾ ಬಿ ಆರ್ ಶೆಟ್ಟಿ, ಜಿಲ್ಲಾಧಿಕಾರಿ ಟಿ ವೆಂಕಟೇಶ್, ಸಿಇಒ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಕುಂದಾಪುರ ಉಪ ವಿಭಾಗಾಧಿಕಾರಿ ಅಶ್ವಥಿ, ಪೊಲೀಸ್ ಅಧೀಕ್ಷಕ ಕೆ ಟಿ ಬಾಲಕೃಷ್ಣ, ಜಿಲ್ಲಾ ಸರ್ಜನ್ ಮಧುಸೂಧನ್ ನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ರೋಹಿಣಿ ಪಾಲ್ಗೊಂಡಿದ್ದರು.
Comments are closed.