ಮಂಗಳೂರು, ಅ.30: ಬಂಟ್ವಾಳದಲ್ಲಿ ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಬಂಟ್ವಾಳ ತಾಲೂಕು ಬಂಟರ ಸಂಘದ ನೂತನ ಬಂಟರ ಭವನದ ಉದ್ಘಾಟನಾ ಸಮಾರಂಭ ರವಿವಾರ ನೇರವೇರಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ನೂತನ ಬಂಟರ ಭವನವನ್ನು ಉದ್ಘಾಟಿಸಿದರು. ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆರ್ಶೀರ್ವಚನ ನೀಡಿದರು. ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ವಿವೇಕ್ ಶೆಟ್ಟಿ ನಗ್ರಿ ಗುತ್ತು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಭಾಕಾರ್ಯಕ್ರಮವನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಉದ್ಘಾಟಿಸಿದರು.
ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಗೌರವ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಸಂದ್ರಭ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಬಂಟ ಸಮುದಾಯಕ್ಕೆ ಸೇರಿದವರು ರಾಜ್ಯಕ್ಕೆ ಮಾದರಿಯಾದ ಬಂಟರ ಭವನವನ್ನು ಬಂಟ್ವಾಳದಲ್ಲಿ ನಿರ್ಮಿಸಿದ್ದಾರೆ. ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಬಂಟರ ಭವನಕ್ಕೆ ರಾಜ್ಯ ಸರಕಾರದಿಂದ ಈಗಾಗಲೇ 50 ಲಕ್ಷ ರೂ. ಅನುದಾನ ನೀಡಲಾಗಿದ್ದು, ಮತ್ತೆ ಹೆಚ್ಚುವರಿಯಾಗಿ 50 ಲಕ್ಷ ರೂ. ಅನುದಾನ ನೀಡುವುದಾಗಿ ಭರವಸೆ ನೀಡಿದರು.
ಈಗಾಗಲೇ ದೇಶ ವಿದೇಶಗಳ ವಿವಿಧ ಕ್ಷೇತ್ರದಲ್ಲಿ ಬಂಟ ಸಮುದಾಯದ ವ್ಯಕ್ತಿಗಳು ಸಶಕ್ತರಾಗಿ ತಮ್ಮ ಸಾಧನೆಯನ್ನು ಮಾಡಿದ್ದಾರೆ. ಮಾನವ ಸಮಾಜಕ್ಕೆ ಸೇರಿದ ಎಲ್ಲಾ ಜಾತಿ, ಧರ್ಮದ ಸಮಾಜದವರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಶಕ್ತರಾದಾಗ ಅಭಿವೃದ್ಧಿ ಸಾಧ್ಯ ಈ ನಿಟ್ಟಿನಲ್ಲಿ ಆರ್ಥಿಕವಾಗಿ ಶ್ರೀಮಂತರಾಗಿರುವವರು ದುರ್ಬಲರ ಏಳಿಗೆಗೆ ಶ್ರಮಿಸಬೇಕಾಗಿದೆ ಎಂದು ಹೇಳಿದರು.
ಸಚಿವರಾದ ಬಿ.ರಮಾನಾಥ ರೈ, ಯು.ಟಿ.ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್, ಮುಂಬಯಿಯ ಸಂಸದ ಗೋಪಾಲ ಶೆಟ್ಟಿ, ಶಾಸಕರಾದ ಅಭಯ ಚಂದ್ರ ಜೈನ್, ಜೆ.ಆರ್.ಲೋಬೊ, ಶಕುಂತಲಾ ಶೆಟ್ಟಿ, ಮೊಯ್ದೀನ್ ಬಾವ, ಐವನ್ ಡಿಸೋಜ, ಮುಂಬಯಿ ಕ್ರಿಕೆಟ್ ಅಸೋಸಿಯೇಶನ್ನ ಕಾರ್ಯದರ್ಶಿ ಡಾ.ಪಿ.ವಿ.ಶೆಟ್ಟಿ, ಉದ್ಯಮಿ ಡಾ.ಶಶಿಕಿರಣ್ ಶೆಟ್ಟಿ, ಪಿ.ವಿ.ಶೆಟ್ಟಿ, ಡಾ.ಆರ್.ಎನ್.ಶೆಟ್ಟಿ, ಪ್ರಕಾಶ್ ಶೆಟ್ಟಿ, ಎ.ಜೆ.ಶೆಟ್ಟಿ, ಎ.ಸದಾನಂದ ಶೆಟ್ಟಿ, ರವಿ ಶೆಟ್ಟಿ ಕತರ್, ಏರ್ಯ ಲಕ್ಷ್ಮೀನಾರಾಯಣ ಆಳ್ವ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೆ ಬಾರದ ಸಚಿನ್ ತೆಂಡುಲ್ಕರ್ ; ಸಭೆಯಲ್ಲಿ ಚರ್ಚೆ
ಬಂಟ್ವಾಳ ತಾಲೂಕು ಬಂಟರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಬಹು ನಿರೀಕ್ಷೆಯಲ್ಲಿದ್ದ ರಾಜ್ಯ ಸಭಾ ಸದಸ್ಯ ಹಾಗೂ ಭಾರತ ಕ್ರಿಕೇಟ್ ತಂಡದ ಮಾಜಿ ನಾಯಕ ಸಚಿನ್ ತೆಂಡುಲ್ಕರ್ ಹಾಗೂ ಮಹಾರಾಷ್ಟ್ರದ ಮುಖ್ಯ ಮಂತ್ರಿ ದೇವೇಂದ್ರ ಫಡ್ನವೀಸ್ರವರ ಅನುಪಸ್ಥಿತಿ ಬಗ್ಗೆ ಸಭೆಯಲ್ಲಿ ಪ್ರಸ್ತಾಪವಾಯಿತು. ಇಬ್ಬರು ಅನಿವಾರ್ಯ ಕಾರಣಗಳಿಂದ ಭಾಗವಹಿಸಲು ಸಾಧ್ಯವಾಗಿಲ್ಲ ಎಂದು ಸಂಘಟಕರು ಸಭೆಗೆ ತಿಳಿಸಿದರು.
Comments are closed.