ಮಂಗಳೂರು, ಅ. 31: ನಗರದ ಪಾಂಡೇಶ್ವರದ ಓಲ್ಡ್ ಕೆಂಟ್ ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಜಿಲ್ಲಾ ಅಲ್ಪಸಂಖ್ಯಾತರ ಭವನವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಅಲ್ಪಸಂಖ್ಯಾತರ ಮತ್ತು ವಕ್ಫ್ ಸಚಿವ ತನ್ವೀರ್ ಸೇಠ್ ಅವರು ರವಿವಾರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಅಲ್ಪಸಂಖ್ಯಾತರಿಗೆ ಸಂಬಂಧಿಸಿದ ಇಲಾಖೆಗಳಿಗೆ ಜನರ ಅಲೆದಾಟ ತಪ್ಪಿಸಲು ಹಾಗೂ ಇಲಾಖೆಗಳು ಒಂದೇ ಸೂರಿನಡಿ ಕಾರ್ಯ ನಿರ್ವಹಿಸಬೇಕೆಂಬ ಸದುದ್ದೇಶದಿಂದ ಈ ಭವನ ನಿರ್ಮಿಸಲಾಗಿದೆ.ರಾಜ್ಯದಲ್ಲಿರುವ ಅಲ್ಪಸಂಖ್ಯಾತರ ಭವನಗಳಲ್ಲಿ ಮಾಹಿತಿ ಕೇಂದ್ರವನ್ನು ಸ್ಥಾಪಿಸಿ ಈ ಮೂಲಕ ಉದ್ಯೋಗ, ಶೈಕ್ಷಣಿಕ ಸೌಲಭ್ಯ ಮತ್ತು ಇತರ ಸರಕಾರಿ ಸೌಲಭ್ಯಗಳ ಬಗ್ಗೆ ಅಲ್ಪ ಸಂಖ್ಯಾತರಿಗೆ ಮಾಹಿತಿ ನೀಡುವ ಮಾಹಿತಿ ಕೇಂದ್ರವನ್ನು ಸ್ಥಾಪಿಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.
ಕಳೆದ ಕೆಲವು ತಿಂಗಳುಗಳಿಂದ ವಕ್ಫ್ ಆಸ್ತಿಗಳ ಬಗ್ಗೆ ಗೊಂದಲ ಏರ್ಪಟ್ಟಿದ್ದು, ಚರ್ಚೆಗೆ ಗ್ರಾಸವಾಗುತ್ತಿದೆ. ವಕ್ಫ್ ಆಸ್ತಿ ದೇವರ ಆಸ್ತಿಯಾಗಿದ್ದು, ಅದನ್ನು ಸಂರಕ್ಷಿಸುವುದು ನಮ್ಮ ಕರ್ತವ್ಯ ಎಂಬುದನ್ನು ಭಾವಿಸಬೇಕು. ಈಗಾಗಲೇ ವಕ್ಫ್ ಆಸ್ತಿಯ ಬಗ್ಗೆ ಸರಕಾರ ಸರ್ವೆ ನಡೆಸಿದೆ. ಶೇ. 60ರಷ್ಟು ಸರ್ವೆ ಕಾರ್ಯ ಮುಗಿದಿದ್ದು, ಶೇ. 40 ಸರ್ವೆ ಆಗಬೇಕಿದೆ. ಸರ್ವೆ ಕಾರ್ಯದ ವರದಿಯ ಅಂಶಗಳನ್ನು ಪರಿಗಣಿಸಲಾಗಿದೆ. ವಕ್ಫ್ ಆಸ್ತಿಯ ದುರುಪಯೋಗ ಮಾಡಿದಾತನಿಗೆ ಕ್ಷಮೆ ನೀಡಲು ಸಾಧ್ಯವಿಲ್ಲ ಎಂದು ಸಚಿವರು ಎಚ್ಚರಿಕೆ ನೀಡಿದರು.
ರಾಜ್ಯ ಸರಕಾರದಿಂದ ಅನೇಕರ ಜಯಂತಿ ಆಚರಿಸುವಂತೆ ಟಿಪ್ಪು ಸುಲ್ತಾನ್ರ ಜಯಂತಿಯೂ ಆಚರಿಸುವಂತಾಗಬೇಕು. ಜನರ ನಂಬಿಕೆ ಮತ್ತು ವಿಶ್ವಾಸಕ್ಕೆ ಧಕ್ಕೆ ತರುವ ಕೆಲಸ ಯಾರೂ ಮಾಡಬಾರದು. ಟಿಪ್ಪು ಓರ್ವ ಆದರ್ಶ ವ್ಯಕ್ತಿ. ಆತನನ್ನು ಕಾರ್ಯಕ್ರಮಕ್ಕೆ ಸೀಮಿತಗೊಳಿಸದೆ, ಆತನ ಆದರ್ಶವನ್ನು ಜನರ ಮುಂದಿಡುವ ಕೆಲಸವಾಗಬೇಕು. ಆಸ್ತಿ-ಪಾಸ್ತಿ ರಕ್ಷಣೆಗೆ ಟಿಪ್ಪು ಕೊಡುಗೆ ಆಪಾರವಾಗಿದೆ. ರಾಜ್ಯದ ಕೆಲವು ದೇವಸ್ಥಾನಗಳ ರಕ್ಷಣೆಯಲ್ಲೂ ಆತನ ಪಾತ್ರವಿತ್ತು ಎಂಬುದನ್ನು ಇತಿಹಾಸ ಹೇಳುತ್ತದೆ. ಹೀಗಿರುವಾಗ ಆತನ ಬಗ್ಗೆ ಅಪಪ್ರಚಾರ ನಡೆಸುವುದು ಸರಿಯಲ್ಲ ಎಂದು ಸಚಿವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಹಾಗೂ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಅಧ್ಯಕ್ಷ ಜೆ.ಆರ್.ಲೋಬೊ ವಹಿಸಿದ್ದರು. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಆಹಾರ ಸಚಿವ ಯು.ಟಿ.ಖಾದರ್, ಶಾಸಕ ಮೊದಿನ್ ಬಾವ, ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮೋನು, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ನಿರ್ದೇಶಕ ಅಕ್ರಂ ಪಾಶ, ದ.ಕ. ಜಿಲ್ಲಾ ವಕ್ಫ್ ಸಲಹಾ ಸಮ್ತಿಯ ಅಧ್ಯಕ್ಷ ಎಸ್.ಎಂ.ರಶೀದ್ ಹಾಜಿ, ಹಮೀದ್ ಕಂದಕ್, ಜಿ.ಪಂ. ಸದಸ್ಯ ಶಾಹುಲ್ ಹಮೀದ್, ಮನಪಾ ಕಾರ್ಪೊರೇಟರ್ ಅಬ್ದುಲ್ಲತೀಫ್ ಕಂದಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Comments are closed.