ಕರಾವಳಿ

ಬಾಳಿಗ ಹತ್ಯೆ ಪ್ರಕರಣದ ಜಾಮೀನು ವಿವಾದ : ನರೇಶ್ ಶೆಣೈಗೆ ಸುಪ್ರೀಂ ಕೋರ್ಟ್‌ನಿಂದ ನೋಟಿಸ್ ಜಾರಿ

Pinterest LinkedIn Tumblr

Baliga_naresh_shenoy

ಮಂಗಳೂರು : ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನರೇಶ್ ಶೆಣೈಗೆ ಹೈಕೋರ್ಟ್ ಜಾಮೀನು ನೀಡಿರುವುದರ ವಿರುದ್ಧ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ ಎಂದು ವಿಚಾರವಾದಿ ಸಂಘದ ರಾಷ್ಟ್ರೀಯ ಅಧ್ಯಕ್ಷ ನರೇಂದ್ರ ನಾಯಕ್ ತಿಳಿಸಿದ್ದಾರೆ.

ಬಾಳಿಗಾ ಹತ್ಯೆ ಪ್ರಕರಣದ ತನಿಖೆ ಪೂರ್ಣಗೊಳ್ಳುವ ಮೊದಲೇ ನರೇಶ್ ಶೆಣೈಯನ್ನು ಹೈಕೋರ್ಟ್ ಜಾಮೀನು ಮೇಲೆ ಬಿಡುಗಡೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಬಾಳಿಗಾ ಅವರ ತಂದೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಬಾಳಿಗಾ ಕುಟುಂಬವು ಸುಪ್ರೀಂ ಕೋರ್ಟ್ಗೆ ಹಾಕಿದ್ದ ಅರ್ಜಿಯನ್ನು ಕೋರ್ಟ್ ಇಂದು ಸ್ವೀಕಾರ ಮಾಡಿದ್ದು, ಕೋರ್ಟ್ ನರೇಶ್ ಶೆಣೈಗೆ ನೋಟಿಸ್ ಜಾರಿ ಮಾಡಿದೆ ಎಂದು ನರೇಂದ್ರ ನಾಯಕ್ ತಿಳಿಸಿದ್ದಾರೆ.

ಮಾ.21ರಂದು ಮುಂಜಾನೆ 5.30ರ ಸುಮಾರಿಗೆ ನಗರದ ಬೆಸೆಂಟ್ ಕಾಲೇಜಿನ ಸಮೀಪ ಪಿವಿಎಸ್ ಕಲಾಕುಂಜಾದ ಬಳಿಯ ತಮ್ಮ ನಿವಾಸದಿಂದ ದೇವಸ್ಥಾನಕ್ಕೆ ಹೊರಡುತ್ತಿದ್ದ ವೇಳೆ ಮನೆಯ ಸಮೀಪದಲ್ಲೇ ಬಾಳಿಗ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ್ದರು.

ಅಂದು ಬೆಳಿಗ್ಗೆ ವಿನಾಯಕ ಪಾಂಡುರಂಗ ಬಾಳಿಗರವರು ಎಂದಿನಂತೆ ಬೆಳಿಗ್ಗೆ 05-45 ಗಂಟೆಗೆ ವೆಂಕಟರಮಣ ದೇವಸ್ಥಾನಕ್ಕೆ ಹೋಗಲು ತನ್ನ ಸ್ಕೂಟರ್ ಹೋಂಡಾ ಪ್ಲೆಸರ್ ಕೆ.ಎ.19.ಇ.ಡಿ 3098 ರಲ್ಲಿ ಮನೆಯಿಂದ ಹೊರಟು ಸುಮಾರು 75 ಮೀಟರ್ ದೂರ ಹೋಗುವಷ್ಟರಲ್ಲಿ ವಿನಾಯಕ ಪಾಂಡುರಂಗ ಬಾಳಿಗರನ್ನು ತಡೆದು ನಿಲ್ಲಿಸಿದ ಮೂವರು ವ್ಯಕ್ತಿಗಳು ಯದ್ವಾತದ್ವಾ ತಲವಾರಿನಿಂದ ಕಡಿದು ಅವರು ಬಂದ ಬೈಕ್ ನಲ್ಲಿ ಪರಾರಿಯಾಗಿದ್ದರು.

ಗಂಭೀರ ಗಾಯಗೊಂಡ ವಿನಾಯಕ ಪಾಂಡುರಂಗ ಬಾಳಿಗರನ್ನು ಜ್ಯೋತಿಯ ಕೆ.ಎಂ.ಸಿ ಆಸ್ಪತ್ರೆಗೆ ಚಿಕಿತ್ಸೆಗೆಂದು ತಲುಪಿಸಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ವಿನಾಯಕ ಪಾಂಡುರಂಗ ಬಾಳಿಗರವರು ಮೃತಪಟ್ಟಿರುವುದಾಗಿ ತಿಳಿಸಿದರು. ಈ ಬಗ್ಗೆ ವಿನಾಯಕ ಪಾಂಡುರಂಗ ಬಾಳಿಗರವರ ತಂಗಿಯಾದ ಅನುರಾಧ ಬಾಳಿಗರವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿತ್ತು.ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣದ ಪ್ರಮುಖ ಆರೋಪಿ ನರೇಶ್ ಶೆಣೈ ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದರು.

Comments are closed.