ಕರಾವಳಿ

ಫೆ.9ರಂದು ಮಂಗಳೂರಿನಲ್ಲಿ”ಭಾರತ ಭಾಗ್ಯ ವಿಧಾತ”-ವಿನೂತನ ಶೈಲಿಯ ಧ್ವನಿ-ಬೆಳಕು ಕಾರ್ಯಕ್ರಮ

Pinterest LinkedIn Tumblr

ಮಂಗಳೂರು, ಫೆಬ್ರವರಿ.6 : ಸಂವಿಧಾನ ಶಿಲ್ಪಿ ಡಾ: ಬಿ.ಆರ್. ಅಂಬೇಡ್ಕರ್ ಅವರ 125 ನೇ ಜನ್ಮದಿನಾಚರಣೆಯ ವರ್ಷಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಅಂಬೇಡ್ಕರ್ ಅವರ ಜೀವನ ಸಾಧನೆಗಳನ್ನು ಬಿಂಬಿಸುವ ವಿನೂತನ ಧ್ವನಿ-ಬೆಳಕು ಕಾರ್ಯಕ್ರಮ ‘ಭಾರತ ಭಾಗ್ಯ ವಿಧಾತ’ ಫೆಬ್ರವರಿ 9 ರಂದು ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯಲಿದೆ.

“ಭಾರತ ಭಾಗ್ಯ ವಿಧಾತ” – ಇದು ಭಾರತದ ತಳ ಸಮುದಾಯಗಳ ಆತ್ಮಸ್ಥೈರ್ಯವನ್ನು ನೂರ್ಮುಡಿಗೊಳಿಸಿದ ಮಹಾ ಚೇತನದ ಜೀವನ ಚರಿತೆ. ನೊಂದವರ ನೋವಿಗೆ ದನಿಯಾಗಿ ನಿಂತ ಧೀಮಂತ ನಾಯಕನ ಆತ್ಮಕತೆ. ತನ್ನ ಪ್ರತಿಭೆ, ಪರಿಶ್ರಮಗಳಿಂದ ಜಗತ್ತಿನ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಪದವಿ ಪುರಸ್ಕಾರಗಳಿಸಿದ ಆರ್ಥಿಕ ತಜ್ಞನ ಯಶೋಗಾಥೆಯನ್ನು ಧ್ವನಿ ಮತ್ತು ಬೆಳಕಿನ ವೈಭವದಲ್ಲಿ ರೂಪಿಸಲಾಗುತ್ತಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಎನ್.ಆರ್. ವಿಶುಕುಮಾರ್ ಅವರ ಪರಿಕಲ್ಪನೆಯ ಈ ಕಾರ್ಯಕ್ರಮಕ್ಕೆ ನಿರ್ದೇಶನ ಮತ್ತು ಸಾಹಿತ್ಯವನ್ನು ಖ್ಯಾತ ಚಲನಚಿತ್ರ ನಿರ್ದೇಶಕ ಬಿ.ಎಂ. ಗಿರಿರಾಜ್, ಸಂಗೀತ ಪೂರ್ಣಚಂದ್ರ ತೇಜಸ್ವಿ, ರಂಗ ವಿನ್ಯಾಸ ಶಶಿಧರ ಅಡಪ, ವಸ್ತ್ರಾಲಂಕಾರ ಪ್ರಮೋದ್ ಶಿಗ್ಗಾವ್ ಹಾಗೂ ಡಾ: ಕೆ.ವೈ. ನಾರಾಯಣಸ್ವಾಮಿ ಅವರು ಗೀತ ರಚನೆ ಮಾಡಿದ್ದಾರೆ.

“ಕಣ್ತುಂಬಿಸುವ ಬೆಳಕಿನ ಲೋಕ, ಕಿವಿದುಂಬಿಸುವ ಹಿನ್ನೆಲೆ ಸಂಗೀತದೊಂದಿಗೆ ವೈಚಾರಿಕತೆಯ ಹಿನ್ನೋಟ” ಅಡಿಬರಹದಲ್ಲಿ ರೂಪುಗೊಂಡಿರುವ ಈ ವಿಶೇಷ ಕಾರ್ಯಕ್ರಮ ಫೆಬ್ರವರಿ 9 ರಂದು ಸಂಜೆ 7 ಮಂಗಳೂರು ನೆಹರು ಮೈದಾನದಲ್ಲಿ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಸುಮಾರು 80 ಕಲಾವಿದರು 15 ದಿನಗಳ ಕಾಲ ಖ್ಯಾತ ನಿರ್ದೇಶಕ ಬಿ.ಎಂ. ಗಿರಿರಾಜ್ ಅವರ ನಿರ್ದೇಶನದಲ್ಲಿ ರೂಪುಗೊಂಡಿರುವ ಈ ಕಾರ್ಯಕ್ರಮ ಕರ್ನಾಟಕದ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಪ್ರದರ್ಶನ ನಡೆಯುತ್ತಿದೆ. ಮಂಗಳೂರಿನಲ್ಲಿ ಧ್ವನಿ ಬೆಳಕಿನ ವೈಭವದಲ್ಲಿ ನಡೆಯುತ್ತಿರುವ ಅಪರೂಪದ ಸಾಂಸ್ಕೃತಿಕ ಕಾರ್ಯಕ್ರಮವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾವರ್ಜನಿಕರು ವೀಕ್ಷಿಸಲು ಜಿಲ್ಲಾ ವಾರ್ತಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Comments are closed.