ಕರಾವಳಿ

ಎತ್ತಿನಹೊಳೆ ಯೋಜನೆ ವಿರುದ್ಧ ನಿಲ್ಲದ ಹೋರಾಟ :ಫೆ.10ರಂದು ಮಂಗಳೂರಿನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ

Pinterest LinkedIn Tumblr

ಮಂಗಳೂರು,ಫೆಬ್ರವರಿ.6: ಕರಾವಳಿಯ ಜೀವನದಿ ಎತ್ತಿನಹೊಳೆ ಯೋಜನೆ ವಿರುದ್ಧ ಈಗಾಗಲೇ ಹಲವಾರು ಪ್ರತಿಭಟನೆಗಳು ನಡೆದಿದ್ದು, ಈ ಬಗ್ಗೆ ಸರಕಾರ ಯಾವೂದೇ ನಿರ್ಧಾರಕ್ಕೆ ಬರದ ಹಿನ್ನೆಲೆಯಲ್ಲಿ ಇದೀಗ ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿಯು ಆಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದೆ.

ನಗರದಲ್ಲಿಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿಯ ಮುಖಂಡ ಎಸ್.ಗಣೇಶ್ ರಾವ್ ಅವರು, ಕರಾವಳಿಯ ಜನತೆಯ ಪಾಲಿಗೆ ಮರಣ ಶಾಸನ ಬರೆಯಲು ಹೊರಟ ಎತ್ತಿನಹೊಳೆ ಯೋಜನೆಯನ್ನು ಸ್ಥಗಿತಕ್ಕೆ ಒತ್ತಾಯಿಸಿ ಜಿಲ್ಲೆಯ ಜನತೆ ಹಲವಾರು ರೀತಿಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಿದರೂ ಸರಕಾರ ಯಾವ ಕೂಗಿಗೂ ಸ್ಪಂದಿಸಲಿಲ್ಲ. ಆ ಹಿನ್ನೆಲೆಯಲ್ಲಿ ಎತ್ತಿನಹೊಳೆ ಯೋಜನೆ ವಿರುದ್ಧ ಫೆ.10ರಂದು ದ.ಕ.ಜಿಲ್ಲಾಧಿಕಾರಿ ಕಚೇರಿ ಎದುರು ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಉಪವಾಸ ಸತ್ಯಾಗ್ರಹವು ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆಯಲಿದ್ದು, ಫೆ.10ರಂದು ಬೆಳಗ್ಗೆ 9:45ಕ್ಕೆ ಪುರಭವನ ಬಳಿಯ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು. 10:15ಕ್ಕೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಉಪವಾಸ ಕೂರಲಾಗುವುದು. 11:30ಕ್ಕೆ ಪ್ರತಿಭಟನಾ ಸಭೆ ನಡೆಸಲಾಗುವುದು. ಇದು ರಾಜಕೀಯರಹಿತ, ಪಕ್ಷಾತೀತ, ಧರ್ಮಾತೀತ, ಜಾತ್ಯತೀತ ಹೋರಾಟವಾಗಿದೆ. ಹಾಗಾಗಿ ಎಲ್ಲ ಪಕ್ಷಗಳ ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು, ಧರ್ಮಗುರುಗಳು, ವಿದ್ಯಾರ್ಥಿ-ಕಾರ್ಮಿಕ ಸಂಘಟನೆಗಳ ಪ್ರಮುಖರು ಇದರಲ್ಲಿ ಭಾಗವಹಿಸಬೇಕು ಎಂದು ಗಣೇಶ್ ರಾವ್ ಮನವಿ ಮಾಡಿದರು.

ಸಮಿತಿಯ ಮುಖಂಡರಾದ ಸತ್ಯರಾಜ್ ಸುರತ್ಕಲ್, ಶಶಿರಾಜ್ ಶೆಟ್ಟಿ ಕೊಳಂಬೆ, ಎಂ.ಜಿ.ಹೆಗಡೆ, ಹನೀಫ್ ಖಾನ್ ಕೊಡಾಜೆ, ರಘುವೀರ್ ಸೂಟರ್ ಪೇಟೆ ಹಾಗೂ ವಿದ್ಯಾರ್ಥಿ ಮುಖಂಡ ದಿನಕರ ಶೆಟ್ಟಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Comments are closed.