ಉಡುಪಿ: ಗುಜರಿ ಅಂಗಡಿಯೊಂದಕ್ಕೆ ಬೆಂಕಿ ತಗುಲಿದ ಪರಿಣಾಮ ಅಂಗಡಿ ಸಂಪೂರ್ಣ ಭಸ್ಮವಾಗಿರುವ ಘಟನೆ ಉಡುಪಿ ಜಿಲ್ಲೆ ಬ್ರಹ್ಮಾವರದಲ್ಲಿ ನಡೆದಿದೆ.
ಮಹಮ್ಮದ್ ಮೂಸ ಮತ್ತು ಅವರ ಮಗ ಸಮೀರ್ ಗುಜರಿ ವ್ಯವಹಾರವನ್ನು ನಡೆಸುತ್ತಿದ್ದ ಅಂಗಡಿ ಇದಾಗಿದ್ದು ಬುಧವಾರ ತಡರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದ ಕಾಣಿಸಿಕೊಂಡ ಬೆಂಕಿ ಸಂಪೂರ್ಣ ಅಂಗಡಿಗೆ ಹತ್ತಿಕೊಂಡಿದೆ. ನೋಡ ನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಆವರಿಸಿಕೊಂಡಿದ್ದು ಸಂಪೂರ್ಣ ಅಂಗಡಿ ಹೊತ್ತಿ ಉರಿದಿದೆ.
ಬುಧವಾರ ಸಂಜೆ ವ್ಯಾಪಾರ ಮುಗಿಸಿ ಹೋಗಿದ್ದರು. ರಾತ್ರಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹತ್ತಿಕೊಂಡಿದೆ ಎನ್ನಲಾಗುತ್ತಿದೆ. ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು ಎರಡು ಅಗ್ನಿಶಾಮಕ ವಾಹನ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಪ್ರಯತ್ನಪಟ್ಟರು ಅಂಗಡಿಯಲ್ಲಿದ್ದ ವಸ್ತುಗಳೆಲ್ಲಾ ಸುಟ್ಟು ಕರಕಲಾಗಿವೆ.
ಅಂಗಡಿಯೊಳಗಿದ್ದ ಪ್ಲಾಸ್ಟಿಕ್, ಪೇಪರು- ಸಾವಿರಾರು ರಟ್ಟುಗಳಿಗೆ ಬೆಂಕಿ ಹತ್ತಿಕೊಂಡಿದ್ದರಿಂದ ಬೆಂಕಿ ನಂದಿಸಲು ಹರಸಾಹಸ ಪಡಬೇಕಾಯ್ತು. ಲಕ್ಷಾಂತರ ಮೌಲ್ಯದ ಗುಜರಿ ವಸ್ತುಗಳು ಅಂಗಡಿಯಲ್ಲಿದ್ದವು ಎಂಬ ಮಾಹಿತಿಯಿದೆ. ಬ್ರಹ್ಮಾವರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Comments are closed.