ಕರಾವಳಿ

ಮಂಗಳೂರಿನಿಂದ ಹೊರಟಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್‌ ಹಾಸನ ಸಮೀಪ ಬೆಂಕಿಗಾಹುತಿ

Pinterest LinkedIn Tumblr

ಮಂಗಳೂರು, ನವೆಂಬರ್,22:ಮಂಗಳೂರಿನಿಂದ ಹೊರಟಿದ್ದ ಖಾಸಗಿ ಬಸ್ಸೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಬಸ್ ಸುಟ್ಟು ಸಂಪೂರ್ಣ ಕರಕಲಾಗಿರುವ ಘಟನೆ ಹಾಸನ ಜಿಲ್ಲೆಯ ಹೊರವಲಯದಲ್ಲಿ ಸಂಭವಿಸಿದೆ. ಹಾಸನ ಸಮೀಪದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕೆಂಚಟಹಳ್ಳಿ ಗ್ರಾಮದ ಬಳಿ ನಿನ್ನೆ ತಡರಾತ್ರಿ ಈ ಅವಘಡ ಸಂಭವಿಸಿದೆ.

ಖಾಸಗಿ ಸ್ಲೀಪರ್ ಕೋಚ್ ಬಸ್‌ನಲ್ಲಿ ಈ ಅವಘಡ ಸಂಭವಿಸಿದ್ದು, ಇದು ಮಂಗಳೂರಿನಿಂದ ಬೆಂಗಳೂರಿಗೆ ಕಡೆಗೆ ತೆರಳುತಿತ್ತು. ಬಸ್‌ನಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ತಕ್ಷಣವೇ ಚಾಲಕರ ಗಮನಕ್ಕೆ ಬಂದಿದೆ. ಕೂಡಲೇ ಅವರು ಬಸ್ಸನ್ನು ರಸ್ತೆಯ ಪಕ್ಕಕ್ಕೆ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಆದ್ದರಿಂದ ಈ ಅವಘಡದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಈ ಘಟನೆ ಸಂಬಂಧಿಸಿದಂತೆ ಹಾಸನ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಾಂತ್ರಿಕ ದೋಷದಿಂದ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Comments are closed.