ಕರಾವಳಿ

ವಿಧಾನಸಭೆ ಚುನಾವಣೆ: ಉತ್ತರ ಕನ್ನಡದಲ್ಲಿ ಜೆಡಿಎಸ್ ಗೆಲ್ಲಿಸುವ ಹೊಣೆ ಆನಂದ್ ಅಸ್ನೋಟಿಕರ್ ಹೆಗಲಿಗೆ!

Pinterest LinkedIn Tumblr


ಕಾರವಾರ: 2013ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಮೂರನೇ ಅತಿ ದೊಡ್ಜ ಪಕ್ಷವಾಗಿರುವ ಜೆಡಿಎಸ್ ಉತ್ತರ ಕನ್ನಡದಲ್ಲಿ ಹೇಳ ಹೆಸರಿಲ್ಲದಂತಾಗಿತ್ತು. ರಾಜ್ಯದಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಹವಣಿಸುತ್ತಿರುವ ಜೆಡಿಎಸ್ ಮಾಜಿ ಸಚಿವ ಅನಂದ್ ಅಸ್ನೋಟಿಕರ್ ಮೂಲತ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಾಬಲ್ಯ ಸಾಧಿಸಲು ಮುಂದಾಗಿದೆ.

ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಆನಂದ್ ಅಸ್ನೋಟಿಕರ್ 2013 ರ ವಿಧಾನಸಭೆ ಚುನಾವಣೆಯಲ್ಲಿ ಕಾರಾವಾರ-ಅಂಕೋಲಾ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸ್ವತಂತ್ರ್ಯ ಅಭ್ಯರ್ಥಿ ಸತೀಶ್ ಸೈಲ್ ವಿರುದ್ಧ ಸೋಲನುಭವಿಸಿದ್ದರು.

ಕಳೆದ ನಾಲ್ಕೂವರೆ ವರ್ಷದಿಂದ ಸಕ್ರಿಯ ರಾಜಕಾರಣದಿಂದ ದೂರವಿದ್ಜ ಅಸ್ನೋಟಿಕರ್ ಅವರನ್ನು ಬಿಜೆಪಿ ಇತ್ತೀಚೆಗಷ್ಟೆ ಪಕ್ಷದಿಂದ ಉಚ್ಚಾಟಿಸಿತ್ತು,ಇತ್ತೀಚೆಗೆ ಸಕ್ರಿಯ ರಾಜಕೀಯದಲ್ಲಿ ತೊಡಗಿಸಿಕೊಳ್ಳಲು ಬಯಸಿರುವ ಆಸ್ನೋಟಿಕರ್ ಬಿಜೆಪಿ ಟಿಕೆಟ್ ಪಡೆಯಲು ಯತ್ನಿಸಿದ್ದರು, ಆದರೆ ಅಲ್ಲಿ ಉತ್ತರ ಪ್ರತಿಕ್ರಿಯೆ ಸಿಗದಿದ್ದಾಗ ಜೆಡಿಎಸ್ ಸೇರ್ಪಡೆಗೊಂಡರು.

ತಮ್ಮ ಕ್ಷೇತ್ರದಲ್ಲಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ ಆಸ್ನೋಟಿಕರ್ ಅವರಿಗೆ ಮುಂಬರುವ ವಿಧಾನಸಭೆ ಚುನಾವಣೆ ಮೂಲಕ ಅವರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ, ಒಂದು ವೇಳೆ ಜೆಡಿಎಸ್ ಟಿಕೆಟ್ ನೀಡದಿದ್ದರೇ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದರು,. ಅಸ್ನೋಟಿಕರ್ ರಾಜಕೀಯ ಪ್ರವೇಶದಿಂದಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಜೆಡಿಎಸ್ ಖಾತೆ ತೆರೆಯುವ ಭರವಸೆಯಲ್ಲಿದೆ.

ಇತ್ತೀಚೆಗೆ ಜಿಲ್ಲೆಯಲ್ಲಿ 4 ದಿನಗಗಳ ಕಾಲ ಪ್ರವಾಸ ಮಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ .ಡಿ ಕುಮಾರಸ್ವಾಮಿ, ಪಕ್ಷವನ್ನು ಬಲಗೊಳಿಸುವ ಉದ್ದೇಶದಿಂದ ಎಲ್ಲಾ ಆರು ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ, ಜೊತೆಗೆ ಅವರನ್ನು ಗೆಲ್ಲಿಸುವ ಹೊಣೆಗಾರಿಕೆಯನ್ನು ಆನಂದ್ ಅಸ್ನೋಟಿಕರ್ ಅವರಿಗೆ ನೀಡಿದ್ದಾರೆ.

ಇತ್ತೀಚೆಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅನಂದ್ ಆಸ್ನೋಟಿಕರ್, ಎರಡು ರಾಷ್ಟ್ರೀಯ ಪಕ್ಷಗಳ ಆಡಳಿತದಿಂದ ಜನರು ಬೇಸತ್ತು ಹೋಗಿದ್ದಾರೆ, ಕುಮಾರಸ್ವಾಮಿ ಸಿಎಂ ಆಗಿದ್ದಾಗ ಆರಂಭಿಸಿದ್ದ ಅಭಿವೃದ್ಧಿ ಕಾರ್ಯಗಳನ್ನು ಇನ್ನೂ ಪೂರ್ಣಗೊಳಿಸಿಲ್ಲ, ರಾಷ್ಟ್ರೀಯ ಪಕ್ಷಗಳಿಗೆ ಬೆಂಬಲ ನೀಡಿದ್ದರಿಂದ ಕ್ಷೇತ್ರಕ್ಕೆ ಯಾವುದೇ ಲಾಭ ಆಗಲಿಲ್ಲ, ಹೀಗಾಗಿ ಜನ ಬದಲಾವಣೆ ಬಯಸಿದ್ದಾರೆ ಎಂದು ಹೇಳಿದ್ದಾರೆ,

ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ ಸತೀಶ್ ಸೈಲ್ ನಂತರ ಕಾಂಗ್ರೆಸ್ ಪಕ್ಷ ಸೇರಿದರು, ಆಧರೆ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ ಎಂದು ಆಸ್ನೋಟಿಕರ್ ದೂರಿದ್ದಾರೆ.

Comments are closed.