ಕರಾವಳಿ

ದ.ಕ.ಜಿಲ್ಲೆ : ಆಗಸ್ಟ್ 10 ರಿಂದ 15ರವರೆಗೆ ಇಂದ್ರಧನುಷ್ ಲಸಿಕಾ ಅಭಿಯಾನ

Pinterest LinkedIn Tumblr

ಮಂಗಳೂರು ಆಗಸ್ಟ್ 7 : ಆಗಸ್ಟ್ 10 ರಿಂದ 15ರವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಥಮ ಸುತ್ತಿನ ಮತ್ತು ಪಾಲಿಕೆ ವ್ಯಾಪ್ತಿಯಲ್ಲಿ ಎರಡನೇ ಸುತ್ತಿನ 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಇಂದ್ರಧನುಷ್ ಲಸಿಕೆಯನ್ನು ನೀಡುವ ಕಾರ್ಯಕ್ರಮವನ್ನ್ತು ಹಮ್ಮಿ ಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ರಾವ್ ತಿಳಿಸಿದರು.

ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಇಂದ್ರಧನುಷ್ ನಗರ ಲಸಿಕಾ ಅಭಿಯಾನದ ಸಭೆಯಲ್ಲಿ ಮಾತನಾಡುತ್ತಿದ್ದರು.

ಈ ಕಾರ್ಯಕ್ರಮದಲ್ಲಿ ಎಲ್ಲಾ ವೈದ್ಯಕೀಯ, ನರ್ಸಿಂಗ್ ಕಾಲೇಜು ವಿಧ್ಯಾರ್ಥಿಗಳನ್ನು ಎನ್ ಜಿ ಓ ಸಂಸ್ಥೆಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಂಗನವಾಡಿ ಕಾರ್ಯಕರ್ತೆಯರನ್ನು, ಆಶಾ ಕಾರ್ಯಕರ್ತರನ್ನು ಬಳಸಿಕೊಂಡು ಕಾರ್ಯಕ್ರಮ ಯಶಸ್ವಿ ಗೊಳಿಸಲು ಸಹಕರಿಸುವಂತೆ ಅಪರ ಜಿಲ್ಲಾಧಿಕಾರಿ ಕುಮಾರ್ ಸೂಚಿಸಿದರು.

ಎಲ್ಲಾ ತಾಲೂಕು ಆರೋಗ್ಯಾಧಿಕಾರಿಗಳು ಆಯಾ ತಾಲೂಕು ತಹಶೀಲ್ದಾರರ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ಖಾತರಿ ಪಡಿಸಿಕೊಳ್ಳಲು ಅಪರ ಜಿಲ್ಲಾಧಿಕಾರಿಗಳು ಹೇಳಿದರು.

ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿಗಳು ಸಾರ್ವಜನಿಕ ಸ್ಥಳಗಳಲ್ಲಿ ಇಂದ್ರಧನುಷ್ ಕಾರ್ಯಕ್ರಮದ ಬಿತ್ತಿಪತ್ರ ಗಳನ್ನು ಪ್ರದರ್ಶಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಆರ್ ಸಿ ಹೆಚ್ ಅಧಿಕಾರಿ ಡಾ. ಅಶೋಕ್ ಅತಿಥಿಗಳನ್ನು ಸ್ವಾಗತಿಸಿ, ಇಂದ್ರಧನುಷ್ ಕಾರ್ಯಕ್ರಮದ ರೂಪುರೇಷೆಗಳನ್ನು ಸಭೆಗೆ ತಿಳಿಸಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರು, ಎಲ್ಲಾ ತಾಲೂಕು ಆರೋಗ್ಯಾಧಿಕಾರಿಗಳು, ಎಲ್ಲಾ ವೈದ್ಯಕೀಯ, ನರ್ಸಿಂಗ್ ಕಾಲೇಜಿನ ಪದಾಧಿಕಾರಿಗಳು, ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Comments are closed.