ಕರಾವಳಿ

ಎಂಟನೇ ದಿನಕ್ಕೆ ಕಾಲಿಟ್ಟ ಬೀಡಿ ಕಾರ್ಮಿಕರ ಪ್ರತಿಭಟನೆ : ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ತೀವ್ರಗೊಂಡ ಧರಣಿ

Pinterest LinkedIn Tumblr

ಮಂಗಳೂರು, ಆಗಸ್ಟ್.14: ಬೀಡಿ ಕಾರ್ಮಿಕರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸೌತ್ ಕೆನರಾ ಬೀಡಿ ವರ್ಕರ್ಸ್‌ ಫೆಡರಡೇಶನ್ (ಸಿಐಟಿಯು) ನೇತೃತ್ವದಲ್ಲಿ ಬೀಡಿ ಕಾರ್ಮಿಕರು ಮಂಗಳೂರಿನಲ್ಲಿ ಆರಂಭಿಸಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವು ಎಂಟನೇ ದಿನಕ್ಕೆ ಕಾಲಿಟ್ಟಿದೆ.

ಬೀಡಿ ಕಾರ್ಮಿಕರ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಮಳೆಯನ್ನು ಲೆಕ್ಕಿಸದೆ ಸುಮಾರು 200ಕ್ಕೂ ಅಧಿಕ ಬೀಡಿ ಕಾರ್ಮಿಕ ಮಹಿಳೆಯರು ಪ್ರತಿಭಟನೆಯಲ್ಲಿ ತೊಡಗಿದ್ದಾರೆ., ಕನಿಷ್ಟ ಕೂಲಿ 1 ಸಾವಿರ ಬೀಡಿಗೆ 210 ರೂ. ಜಾರಿಗೊಳಿಸಬೇಕು, ವಾರದಲ್ಲಿ 6 ದಿನ ಕೆಲಸ ನೀಡಬೇಕು, ಕೆಲಸ ನೀಡದ ದಿನದ ವೇತನ ನೀಡಬೇಕು, 2015ರ ಬಾಕಿ ತುಟ್ಟಿಭತ್ತೆಯನ್ನು ನೀಡಬೇಕು ಮುಂತಾದ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಸುಮಾರು 10 ಲಕ್ಷ ಕಾರ್ಮಿಕರು ಬೀಡಿ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಕಾರ್ಮಿಕರ ಕನಿಷ್ಟ ವೇತನವನ್ನು 2018ರ ಎಪ್ರಿಲ್ 1ರಿಂದ ಅನ್ವಯ ಆಗುವಂತೆ ಪರಿಷ್ಕರಿಸಿ ರಾಜ್ಯ ಸರಕಾರವು ಆದೇಶ ಹೊರಡಿಸಿದೆ. ಬೀಡಿ ಕಂಪೆನಿಯ ಮಾಲಕರು ಈ ಪರಿಷ್ಕೃತ ಆದೇಶದಂತೆ ವೇತನ ನೀಡದೆ ವಂಚಿಸುತ್ತಿರುವುದು ಖಂಡನೀಯ ಎಂದು ಪ್ರತಿಭಟನಕಾರರು ಆರೋಪಿಸಿದ್ದಾರೆ.

ಪ್ರತಿಭಟನೆಯಲ್ಲಿ ಸೌತ್ ಕೆನರಾ ಬೀಡಿ ವರ್ಕರ್ಸ್ ಫೆಡರೇಶನ್ (ಸಿಐಟಿಯು)ನ ಅಧ್ಯಕ್ಷ ವಸಂತ ಆಚಾರಿ, ಫೆಡರೇಶನ್‌ನ ಪ್ರಧಾನ ಕಾರ್ಯದರ್ಶಿ ಜೆ. ಬಾಲಕೃಷ್ಣ ಶೆಟ್ಟಿ, ಮುಖಂಡರಾದ ಯು.ಬಿ.ಲೋಕಯ್ಯ, ಬೀಡಿ ಕಾರ್ಮಿಕರ ಸಂಘಗಳ ನಾಯಕರಾದ ಪುಷ್ಪಾ ಶಕ್ತಿನಗರ, ವಿಲಾಸಿನಿ, ಸುಂದರ ಕುಂಪಲ, ಜಯರಾಮ, ಶ್ರೀನಿವಾಸ, ಜನಾರ್ದನ ಕುತ್ತಾರ್, ಪುಷ್ಪಾ ಕುಂಪಲ, ಮುನೀರ್ ಕಾಟಿಪಳ್ಳ, ಸದಾಶಿವ ದಾಸ್, ಗಂಗಯ್ಯ ಅಮೀನ್, ನೋಣಯ್ಯ ಗೌಡ, ಜಯಂತ ನಾಯ್ಕಿ, ಪದ್ಮಾವತಿ ಶೆಟ್ಟಿ, ಭಾರತಿ ಬೋಳಾರ, ವಸಂತಿ ಮತ್ತಿತರರು ಪಾಲ್ಗೊಂಡಿದ್ದರು.

Comments are closed.