
ಮಂಗಳೂರು : ರಫೇಲ್ ಯುದ್ಧ ವಿಮಾನದ ಒಪ್ಪಂದದ ಬಗ್ಗೆ ಸುಪ್ರಿಂಕೊರ್ಟ್ ತೀರ್ಪು ನೀಡಿದರೂ ಕಾಂಗ್ರೆಸ್ ಅಪಪ್ರಚಾರ ನಡೆಸುತ್ತಿದೆ ಎಂದು ಆರೋಪಿಸಿ ಬಿಜೆಪಿ ದ.ಕ ಜಿಲ್ಲಾ ಘಟಕದ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನ ಸಭೆಯನ್ನುದ್ದೇಶಿಸಿ ಮಾತನಾಡಿದ ವಿಧಾನಸಭೆಯ ಮಾಜಿ ಉಪ ಸಭಾಪತಿ ಎನ್.ಯೋಗೀಶ್ ಭಟ್ ಅವರು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಷಡ್ಯಂತ್ರದ ಭಾಗವಾಗಿ ಕಾಂಗ್ರೆಸ್ ಪಕ್ಷವು ರಫೇಲ್ ಯುದ್ಧ ವಿಮಾನ ಖರೀದಿ ಬಗ್ಗೆ ಅಪಪ್ರಚಾರದಲ್ಲಿ ತೊಡಗಿವೆ ಎಂದು ಆರೋಪಿಸಿದರು.

ರಫೇಲ್ ಯುದ್ಧ ವಿಮಾನ ಖರೀದಿ ಪಾರದರ್ಶಕವಾಗಿ ನಡೆದಿದೆ. ಸರ್ವೋಚ್ಛ ನ್ಯಾಯಾಲಯ ಕೂಡಾ ರಫೇಲ್ ಖರೀದಿ ಒಪ್ಪಂದವು ನ್ಯಾಯಯುತವಾಗಿದೆ ಎಂದಿದೆ. ಹಾಗಿದ್ದರೂ ಕೂಡ ಕಾಂಗ್ರೆಸ್ ಪಕ್ಷವು ಕೇಂದ್ರದ ಎನ್ಡಿಎ ಸರಕಾರದ ಮೇಲೆ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದೆ ಎಂದು ಯೋಗೀಶ್ ಭಟ್ ಹೇಳಿದರು.
ಪ್ರತಿಭಟನ ಸಭೆಯನ್ನುದ್ದೇಶಿಸಿ ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿಶಂಕರ ಮಿಜಾರ್ ಹಾಗೂ ಜಿಲ್ಲಾ ಕೋಶಾಧಿಕಾರಿ ಸಂಜಯ ಪ್ರಭು ಮಾತನಾಡಿದರು.
ಪಕ್ಷದ ಪ್ರಮುಖರಾದ ಗಣೇಶ್ ಹೊಸಬೆಟ್ಟು, ಸತೀಶ್ ಪ್ರಭು, ಬಾಸ್ಕರಚಂದ್ರ ಶೆಟ್ಟಿ, ಸಂತೋಷ್ ಕುಮಾರ ರೈ, ರಮೆಶ್ ಕಂಡೆಟ್ಟ್ತು, ಪ್ರೇಮಾನಂದ ಶೆಟ್ಟಿ,ರಾಜೇಂದ್ರ ಕುಮಾರ್, ಪೂರ್ಣಿಮಾ, ಅಶೋಕ್ ಕಾಟಿಪಳ್ಳ, ಮೋಹನ್ ರಾಜ್, ದಿನಕರ ಶೆಟ್ಟಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಪ್ರತಿಭಟನೆಯ ಬಳಿಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿದ ನಿಯೋಗದಿಂದ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು.
Comments are closed.