ಕರಾವಳಿ

ಮಕ್ಕಳ ಸಹಾಯವಾಣಿ ಜಾಗೃತಿ ಕಾರ್ಯಕ್ರಮಗಳ ಮಾಹಿತಿ ನೀಡಿ- ಜಿಲ್ಲಾಧಿಕಾರಿ

Pinterest LinkedIn Tumblr

ಉಡುಪಿ: ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯದಿಂದ ರಕ್ಷಿಸುವ ಸಲುವಾಗಿ ಮತ್ತು ಮಕ್ಕಳ ಸಹಾಯವಾಣಿಯ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಮಾಹಿತಿಯನ್ನು 10 ದಿನಗಳೊಳಗೆ ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚನೆ ನೀಡಿದರು.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಕ್ಕಳ ಸಹಾಯವಾಣಿಯ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿ, ಮಕ್ಕಳ ಸಹಾಯವಾಣಿಯ ಕುರಿತು ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸುವ ಮಕ್ಕಳು ಹಾಗೂ ಪೋಷಕರಿಗೆ ಜಾಗೃತಿ ಮೂಡಿಸುವ ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಗೋಡೆ ಬರಹ, ಪೋಸ್ಟರ್‍ಗಳನ್ನು ಅಂಟಿಸುವುದು, ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡಿ ಜಾಗೃತಿ ಮೂಡಿಸುವುದು, ಸಾರಿಗೆ ಸಂಪರ್ಕ ವ್ಯವಸ್ಥೆಗಳಾದ ಆಟೋ ರಿಕ್ಷಾ, ಬಸ್‍ಗಳಲ್ಲಿ ಮಕ್ಕಳ ಸಹಾಯವಾಣಿಯ ಜಾಗೃತಿ ಮೂಡಿಸುವ ಪೋಸ್ಟರ್‍ಗಳನ್ನು ಅಂಟಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬಹುದು ಎಂದರು.

ಪ್ರತೀ ತಿಂಗಳು ಗ್ರಾಮ ಮಟ್ಟದಲ್ಲಿ ಮಕ್ಕಳ ಸಭೆಯನ್ನು ಮಾಡಿ, ಸಹಾಯವಾಣಿಗೆ ಬಂದಂತಹ ಕರೆಗಳ ಬಗ್ಗೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚೆ ಮಾಡಬೇಕು. ಬಳಿಕ ಈ ಬಗ್ಗೆ ತಾಲೂಕು ಮಟ್ಟದಲ್ಲಿ ನಡೆಯುವ ಸಭೆಯಲ್ಲಿ ಚರ್ಚಿಸಬೇಕು ಎಂದರು. ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳು ಜೊತೆಯಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಕರೆ ನೀಡಿದರು.ಆರೋಗ್ಯ ಇಲಾಖೆ ಮತ್ತು ಸಂಬಂಧಿಸಿದ ಇತರ ಇಲಾಖೆ ಸೇರಿದಂತೆ ಯಾವುದೇ ಇಲಾಖೆಯ ಕಾರ್ಯಕ್ರಮಗಳಲ್ಲಿ ಮಕ್ಕಳ ಸಹಾಯವಾಣಿಯ ಲೋಗೋವನ್ನು ಬಳಸಬೇಕು. ಗ್ರಾಮ ಮಟ್ಟದಲ್ಲಿ ಒಂದೊಂದು ಪ್ರದೇಶದಲ್ಲಿ ಓರ್ವ ಮಕ್ಕಳ ನಾಯಕನನ್ನು ಗುರುತಿಸಿ ಮಕ್ಕಳ ಸಹಾಯವಾಣಿಯ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಆಗಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಮಾತನಾಡಿ, ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಯಾವುದೇ ಪ್ರಕರಣದಲ್ಲಿ ಮಕ್ಕಳ ಹೇಳಿಕೆಗೆ ಆದ್ಯತೆ ನೀಡಿ ಸಮಗ್ರ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಉಡುಪಿ ಜಿಲ್ಲಾ ಸಹಾಯವಾಣಿಯ ಕಾರ್ಯಕ್ಷಮತೆ ಕೋ-ಆರ್ಡಿನೇಟರ್ ಅರವಿಂದ್ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಮಾರ್ಚ್‍ನಿಂದ ಈವರೆಗೆ 22 ಕರೆಗಳು ಬಂದಿದ್ದು, ಎಲ್ಲಾ ಕರೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿದ್ದು, ಸಹಾಯವಾಣಿ ಕಾರ್ಯ ನಿರ್ವಹಣೆಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವಂತೆ ಮತ್ತು ಗ್ರಾಮ ಮಟ್ಟದಲ್ಲಿ ನಡೆಯುವ ಗ್ರಾಮ ಸಭೆಗೆ ಚೈಲ್ಡ್‍ಲೈನ್ ಸಂಯೋಜಕರನ್ನು ಆಹ್ವಾನಿಸುವುದು, ಮಕ್ಕಳ ಸಹಾಯವಾಣಿ ಫಲಕವನ್ನು ಪ್ರದರ್ಶಿಸಲು ನಿರ್ದೇಶನ ನೀಡುವುದು, ಮಕ್ಕಳ ರಕ್ಷಣಾ ನೀತಿಯನ್ನು ಎಲ್ಲಾ ಶಾಲೆಗಳಲ್ಲಿ ವ್ಯವಸ್ಥಿತವಾಗಿ ಅಳವಡಿಸಿಕೊಳ್ಳುವುದು, ಶಾಲಾ ಕಾಲೇಜುಗಳಲ್ಲಿ ಚೈಲ್ಡ್‍ಲೈನ್ 1098 ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಬಾಲ್ಯ ವಿವಾಹ, ಬಾಲ ಕಾರ್ಮಿಕ ಹಾಗೂ ಇನ್ನಿತರ ಸಮಸ್ಯೆಗಳ ಕುರಿತು ಮಾಹಿತಿ ಕಾರ್ಯಗಾರವನ್ನು ನಡೆಸುವುದು, ಮಕ್ಕಳ ರಕ್ಷಣೆ ಮತ್ತು ಪೋಷಣೆಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳು ಅಗತ್ಯ ಸಹಕಾರ ನೀಡಬೇಕು. ಸಂಬಂದಪಟ್ಟ ಇಲಾಖೆಗಳು ಪ್ರತೀ ತಿಂಗಳಿಗೊಮ್ಮೆ ಕಡ್ಡಾಯವಾಗಿ ಭಿಕ್ಷಾಟನೆಯಲ್ಲಿ ನಿರತರಾದವರ ರಕ್ಷಣಾ ಕಾರ್ಯಚರಣೆ ಹಮ್ಮಿಕೊಳ್ಳುವಂತೆ ಮನವಿ ಮಾಡಿಕೊಂಡರು.

ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ಲೇಲೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ, ಚೈಲ್ಡ್ ಇಂಡಿಯಾ ಫೌಂಡೇಶನ್ ಚೆನೈನ ಹಿರಿಯ ಕಾರ್ಯಕ್ರಮ ಸಂಯೋಜಕಿ ಚಿತ್ರಾ ಆಂಚನ್, ಚೈಲ್ಡ್ ಲೈನ್ ನಿರ್ದೇಶಕ ರಾಮಚಂದ್ರ ಉಪಾಧ್ಯಾಯ, ಮಕ್ಕಳ ಕಲ್ಯಾಣ ಸಮಿತಿ ಮಾಜಿ ಅಧ್ಯಕ್ಷ ನಾರಾಯಣ ಬಿ.ಕೆ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು, ಸ್ವಯಂ ಸೇವಾ ಸಮಿತಿಯ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Comments are closed.