ಕರಾವಳಿ

ಉಡುಪಿ-ಮಣಿಪಾಲದಲ್ಲಿ ಪಾರ್ಕಿಂಗ್, ನೋ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸಲು ಡಿಸಿ ಸೂಚನೆ

Pinterest LinkedIn Tumblr

ಉಡುಪಿ: ಉಡುಪಿ-ಮಣಿಪಾಲದಲ್ಲಿ ಪಾರ್ಕಿಂಗ್ ಮತ್ತು ಸಂಚಾರ ಸಮಸ್ಯೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ಪಾರ್ಕಿಂಗ್ ಮತ್ತು ನೋ ಪಾರ್ಕಿಂಗ್ ವ್ಯವಸ್ಥೆಯನ್ನು ಕ್ರಮಬದ್ದಗೊಳಿಸಲು ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಗರದ ಹಲವೆಡೆ ರಸ್ತೆ ಬದಿಯಲ್ಲಿಯೇ ವಾಹನಗಳ ಪಾರ್ಕಿಂಗ್ ನಿಂದಾಗಿ ಪಾದಾಚಾರಿಗಳಿಗೆ ಮತ್ತು ಇತರ ವಾಹನಗಳ ಸುಗಮ ಸಂಚಾರಕ್ಕೆ ತೊಡಕಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ವಾಹನಗಳ ಪಾರ್ಕಿಂಗ್ ಗೆ ಸೂಕ್ತ ಸ್ಥಳಾವಕಾಶ ಇಲ್ಲದಿರುವುದು ಇದಕ್ಕೆ ಮುಖ್ಯ ಕಾರಣ. ಈ ಹಿನ್ನೆಲೆಯಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿಯ ಪ್ರಮುಖ ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್ ನಿಷೇಧಿಸಲು ಅಧಿಸೂಚನೆ ಹೊರಡಿಸಬೇಕಾಗಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ವಾಹನಗಳನ್ನು ಪಾರ್ಕ್ ಮಾಡಲು ಸ್ಥಳವನ್ನು ಗುರುತಿಸಬೇಕು ಹಾಗೂ ಸಾಧ್ಯವಾದಲ್ಲಿ ಬಹು ಹಂತದ ಪಾರ್ಕಿಂಗ್ ಕಟ್ಟಡವನ್ನು ನಿರ್ಮಿಸಬೇಕು ಎಂದ ಜಿಲ್ಲಾಧಿಕಾರಿ, ಈ ನಿಟ್ಟಿನಲ್ಲಿ ನಗರಸಭೆ, ಆರ್.ಟಿ.ಒ ಹಾಗೂ ಪೋಲೀಸ್ ಇಲಾಖೆ ಜಂಟಿಯಾಗಿ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಪದೇ ಪದೇ ಅಫಘಾತಗಳುಂಟಾಗುತ್ತಿರುವ ಕಪ್ಪು ಚುಕ್ಕೆ ಸ್ಥಳಗಳನ್ನು ಗುರುತಿಸಿ ಅಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಅಫಘಾತ ಪ್ರಮಾಣ ಕಡಿಮೆ ಆಗುವಂತೆ ಕ್ರಮ ಕೈಗೊಳ್ಳಲು ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಅನಧಿಕೃತವಾಗಿ ರಸ್ತೆ ವಿಭಾಜಕವನ್ನು ತುಂಡರಿಸಿ ವಾಹನ ತಿರುಗುವ ಸ್ಥಳಗಳನ್ನು ಗುರುತಿಸಿ ಅವುಗಳನ್ನು ಮುಚ್ಚಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಹೆದ್ದಾರಿ ಹಾಗೂ ಪ್ರಮುಖ ರಸ್ತೆಗಳಲ್ಲಿ ದಾರಿದೀಪಗಳು ಇಲ್ಲದಿರುವುದರಿಂದ ರಾತ್ರಿ ವೇಳೆ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ತೊಂದರೆಗಳಾಗುತ್ತಿದ್ದು, ಆದಷ್ಟು ಬೇಗನೆ ದಾರಿ ದೀಪ ಅಳವಡಿಸುವ ಕಾರ್ಯ ಕೈಗೊಳ್ಳಬೇಕೆಂದು ಪೌರಾಡಳಿತಕ್ಕೆ ಸೂಚಿಸಿದರು. ಉಡುಪಿ-ಹೆಬ್ರಿ-ಕಾರ್ಕಳ ರಸ್ತೆ ಸೇರಿದಂತೆ ಪ್ರಮುಖ ಹೆದ್ದಾರಿಗಳಲ್ಲಿ ಹೊಂಡ-ಗುಂಡಿಗಳಿದ್ದು ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ಆದ್ಯತೆಯ ಮೇರೆಗೆ ಗುಂಡಿಮುಚ್ಚುವಂತೆ ಲೋಕೋಪಯೋಗಿ ಇಲಾಖಾಧಿಕಾರಿಗಳಿಗೆ ಆದೇಶಿಸಿದರು.
ಹದಿನೆಂಟು ವರ್ಷಕ್ಕಿಂತ ಕೆಳಗಿನ ಮಕ್ಕಳು ರಸ್ತೆ ಸುರಕ್ಷತೆ ಕಾನೂನುಗಳನ್ನು ಮೀರಿ ಶಾಲೆಗಳಿಗೆ ವಾಹನಗಳನ್ನು ತಾವೇ ಚಲಾಯಿಸುವಂತಹ ಘಟನೆಗಳು ಕಂಡುಬರುತ್ತಿದ್ದು, ಇಂತಹ ಪ್ರಕರಣಗಳು ಪತ್ತೆಯಾದಲ್ಲಿ ವಿದ್ಯಾರ್ಥಿಯು ಕಲಿಯುತ್ತಿರುವಂತಹ ವಿದ್ಯಾಸಂಸ್ಥೆಗಳ ವಿರುದ್ಧವೆ ಕಾನೂನು ಕ್ರಮ ಕೈಗೊಳ್ಳಲು ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಸಿಗ್ನಲ್ ಲೈಟ್ಗಳನ್ನು ಅಳವಡಿಸಲು ಜಂಕ್ಷನ್ಗಳನ್ನು ಗುರುತಿಸಲಾಗಿದೆ ಮತ್ತು ಪಾರ್ಕಿಂಗ್ ವ್ಯವಸ್ಥೆಗಾಗಿ ಸ್ಥಳ ಗುರುತಿಸುವ ಕೆಲಸವನ್ನು ಸರ್ವೆ ಮೂಲಕ ನಡೆಸಲಾಗಿದೆ ಎಂದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಸಭೆಯಲ್ಲಿ ತಿಳಿಸಿದರು.
ಜಿಲ್ಲೆಯಲ್ಲಿ ರಸ್ತೆ ಸುರಕ್ಷತಾ ಕಾರ್ಯಕ್ರಮದ ಅಂಗವಾಗಿ ಇದುವರೆಗೂ 20 ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಇಲಾಖೆಗಳ ಸಹಭಾಗಿತ್ವದೊಂದಿಗೆ ನಿಗದಿತ ಶಾಲೆಗಳಲ್ಲಿ ತಿಂಗಳಲ್ಲಿ ಒಂದು ದಿನ ಶಾಲಾ ಮಕ್ಕಳಿಂದಲೇ ಇಂತಹ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಪರ್ಕಳ-ಮಲ್ಪೆ ಹೆದ್ದಾರಿ ಬದಿ ಇರುವ ಮರಗಳನ್ನು ಕಡಿಯದೆ ಅವುಗಳನ್ನು ಮರು ನೆಡಲು ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಸಾಧ್ಯವೆ ಎನ್ನುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ನಗರಸಭೆ ಪೌರಾಯುಕ್ತ ಡಾ.ಆನಂದ್ ಕಲ್ಲೋಳಿಕರ್, ಆರ್.ಟಿ.ಒ ಅಧಿಕಾರಿಗಳು. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು

Comments are closed.