ಕರಾವಳಿ

ರಾಜ್ಯದಲ್ಲೇ ಉಡುಪಿಯಲ್ಲಿ ಪ್ರಥಮವಾಗಿ ಆರಂಭ- ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ‘ಸಖಿ ವನ್ ಸ್ಟಾಪ್ ಸೆಂಟರ್’

Pinterest LinkedIn Tumblr

ಉಡುಪಿ: ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಕಡೆ ಆರೋಗ್ಯ, ಕಾನೂನು, ವಸತಿ ಮತ್ತು ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಸಖಿ ವನ್ ಸ್ಟಾಪ್ ಸೆಂಟರ್ ಪ್ರಾರಂಭಿಸಲಾಗಿದ್ದು, ಈ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಮಾಹಿತಿ ನೀಡುವ ಮೂಲಕ, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ನೆರವು ಒದಗಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.ಅವರು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರಾಜ್ಯದಲ್ಲಿ ಸಖಿ ಒನ್ ಸ್ಟಾಪ್ ಸೆಂಟರ್, ಸಖಿ ಟಾಸ್ಕ್ ಫೊರ್ಸ್ ಯೋಜನೆಯ ಜಿಲ್ಲಾಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯದಲ್ಲೇ ಪ್ರಪ್ರಥಮವಾಗಿ ಉಡುಪಿ ಜಿಲ್ಲೆಯಲ್ಲಿ ಸಖಿ ವನ್ ಸ್ಟಾಪ್ ಸೆಂಟರಿಗೆಂದೇ ನಿಟ್ಟೂರಿನಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದ್ದು, ಜಿಲ್ಲೆಯ ನೊಂದ ಮಹಿಳೆಯರಿಗೆ ಒಂದೇ ಸ್ಥಳದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡುವ ಈ ಕೇಂದ್ರದ ಕುರಿತಂತೆ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಗ್ರಾಮಸಭೆ ಮತ್ತು ಮಹಿಳಾ ಗ್ರಾಮಸಭೆಗಳಲ್ಲಿ, ಶಿಶು ಅಭಿವೃಧ್ದಿ ಯೋಜನಾಧಿಕಾರಿಗಳು, ಮೇಲ್ವಿಚಾರಕಿಯರು ಮತ್ತು ಸಖೀ ಕೇಂದ್ರದ ಸಿಬ್ಬಂದಿ ಮಾಹಿತಿ ನೀಡುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಎಲ್ಲಾ ಗ್ರಾಮ ಪಂಚಾಯತ್ಗಳಲ್ಲಿ ಪೋಸ್ಟರ್ಗಳು ಮತ್ತು ಕರಪತ್ರಗಳ ಮೂಲಕ ಸಹ ಮಾಹಿತಿ ನೀಡುವಂತೆ ಸೂಚಿಸಿದರು.
ಪ್ರಸಕ್ತ ಸಾಲಿನಲ್ಲಿ ಸಖಿ ಕೇಂದ್ರದಲ್ಲಿ ಜುಲೈನಿಂದ ನವೆಂಬರ್ವರೆಗೆ, ಕೌಟುಂಬಿಕ ದೌರ್ಜನ್ಯದ 13, ಲೈಂಗಿಕ ಕಿರುಕುಳ 1 ಮತ್ತು ಇತರೆ 7 ಸೇರಿದಂತೆ, 21 ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 6 ಪ್ರಕರಣ ಇತ್ಯರ್ಥಗೊಂಡಿದ್ದು, 8 ಪ್ರಕರಣ ನ್ಯಾಯಾಲಯದಲ್ಲಿದ್ದು, 7 ಪ್ರಕರಣಗಳು ಸಮಾಲೋಚನೆಯ ಹಂತದಲ್ಲಿದ್ದು, ನೊಂದ ಮಹಿಳೆಯರಿಗೆ ಸಾಂತ್ವನ ನೀಡುವ ಕಾರ್ಯ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಪೊಲೀಸ್ ಇಲಾಖೆಯಲ್ಲಿ ದಾಖಲಾಗುವ ಮಹಿಳಾ ದೌರ್ಜನ್ಯ ಪ್ರಕರಣ ಬಗ್ಗೆ, ಮಾಹಿತಿ ಪಡೆದು, ದೌರ್ಜನ್ಯಕ್ಕೆ ಒಳಗಾದ ಮಹಿಳೆಗೆ ಸಖಿ ಕೇಂದ್ರದ ಮೂಲಕ ನೆರವು ಒಗದಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ಜಿಲ್ಲಾ ಸರಕಾರಿ ಅಭಿಯೋಜಕಿ ಶಾಂತಿ ಬಾಯಿ, ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಶೋಭಾ.ಜಿ.ಪುತ್ರನ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಭಾರ ಉಪನಿರ್ದೇಶಕಿ ವೀಣಾ ವಿವೇಕಾನಂದ, ಡಿ.ವೈ.ಎಸ್.ಪಿ ಜೈ ಶಂಕರ್, ಡಿ.ಡಿ.ಪಿ.ಐ ಶೇಷಶಯನ ಕಾರಿಂಜ ಮತ್ತಿತರರು ಉಪಸ್ಥಿತರಿದ್ದರು.

Comments are closed.