ಕರಾವಳಿ

ಮಹಿಳಾ ಅಭಿವೃದ್ಧಿ ನಿಗಮದ ಗುರಿ ಹೆಚ್ಚಳಕ್ಕೆ ಕ್ರಮ : ಶಶಿಕಲಾ ಜೊಲ್ಲೆ

Pinterest LinkedIn Tumblr

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧೀನದಲ್ಲಿನ, ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಮಹಿಳೆಯರ ಅಭಿವೃದ್ದಿಗೆ ರೂಪಿಸಿರುವ ವಿವಿಧ ಯೋಜನೆಗಳಲ್ಲಿನ ಗುರಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಆಹಾರ ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖಾ ಸಚಿವೆ ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ. ಅವರು ಗುರುವಾರ, ಉಡುಪಿಯ ಜಿಲ್ಲಾ ಪಂಚಾಯತ್‍ನ ಡಾ. ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿನ ಪ್ರಗತಿ ಕುರಿತು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ತೆರಳಿ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದು, ಈ ಸಭೆಗಳಲ್ಲಿ ಮಹಿಳಾ ಅಭಿವೃದ್ಧಿ ನಿಗಮದ ಮೂಲ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಕುರಿತು ಪ್ರತಿ ಜಿಲ್ಲೆಗೆ ನೀಡಲಾಗಿರುವ ಗುರಿಯ ಪ್ರಮಾಣ ಕಡಿಮೆ ಇದ್ದು, ಇದನ್ನು ಹೆಚ್ಚಿಸುವಂತೆ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ, ಯೋಜನೆಗಳ ಗುರಿಯನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು.

ರಾಜ್ಯದಲ್ಲಿ 2013 ರಿಂದ 2017 ರ ಅವಧಿಯಲ್ಲಿ ವಿವಿಧ ಕಾರಣದಿಂದ ಭಾಗ್ಯಲಕ್ಷ್ಮಿ ಯೋಜನೆಯಿಂದ ವಂಚಿತರಾದವರಿಗೆ ಯೋಜನೆಯ ಸೌಲಭ್ಯವನ್ನು ಒಗದಿಸಲು ಮತ್ತು ಮಹಿಳಾ ಸಾಂತ್ವನ ಕೇಂದ್ರಗಳಿಗೆ ಸ್ವಂತ ಕಟ್ಟಡ ಒದಗಿಸುವ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಸಚಿವರು ಹೆಳಿದರು.
ಉಡುಪಿ ಜಿಲ್ಲೆಯು ಬಾಕಿ ಜಿಲ್ಲೆಗಳಿಗೆ ಹೋಲಿಸಿದರೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಎಲ್ಲಾ ಇಲಾಖೆಯ ಅಧಿಕಾರಿಗಳು, ಪ್ರತಿನಿಧಿಗಳೊಂದಿಗೆ ಶಾಸಕರು ಹಾಗೂ ಸಾರ್ವಜನಿಕರು ಸೂಕ್ತ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ 98 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಇದರಲ್ಲಿ ವಲಸೆ ಕಾರ್ಮಿಕರ ಸಂಖ್ಯೆ ಹೆಚ್ಚಾಗಿದ್ದು, ಈ ಬಗ್ಗೆ ಗಮನ ಹರಿಸಬೇಕು. ಭಾಗ್ಯಲಕ್ಷ್ಮೀ ಯೋಜನೆ ಹಾಗೂ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಮರಣ ಪರಿಹಾರ ಅನುದಾನ ಬಿಡುಗಡೆಯಾಗಿದೆ. ಸ್ವಾಧಾರ್ ಯೋಜನೆಗೆ ಹಾಗೂ ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆಗೆ ಅನುದಾನ ಬಿಡುಗಡೆ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದ ಎಲ್ಲಾ ಅಂಗನವಾಡಿಗಳಿಗೆ ಹೈಟೆಕ್ ಸ್ಪರ್ಶ ನೀಡಿ, ಮಕ್ಕಳಿಗೆ ಡಿಜಿಟಲ್ ಪುಸ್ತಕಗಳನ್ನು ಒದಗಿಸಿ ಅವರಲ್ಲಿ ಕಲಿಕೆಯ ಆಸಕ್ತಿಯನ್ನು ಹೆಚ್ಚಿಸುವ ಕಾರ್ಯವಾಗಬೇಕು. ಹಾಗೂ ಇಲಾಖೆಯ ವತಿಯಿಂದಲೆ ಅಂಗನವಾಡಿ ಶಿಕ್ಷಕಿಯರಿಗೆ ತರಬೇತಿ ಕೊಡಲಾಗುವುದು. ಪ್ರಥಮ ಆದ್ಯತೆಯಲ್ಲಿ ಹೊಸ ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾರ್ಯಕೈಗೊಳ್ಳಲಾಗುತ್ತಿದ್ದು, ಎರಡನೇ ಹಂತದಲ್ಲಿ ಶಿಥಿಲವಾಗಿರುವ ಕಟ್ಟಡಗಳನ್ನೂ ದುರಸ್ತಿಗೊಳಿಸಲಾಗುವುದು. ಎಂದರು.  ಜಿಲ್ಲಾ ವಿಶೇಷ ಚೇತನರ ಹಾಗೂ ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಣಾ ಕಾರ್ಯ ನಡೆಯುತ್ತಿದೆ. ಹಿರಿಯ ನಾಗರಿಕರಿಗೆ ಅವಶ್ಯಕವಿರುವ ಶ್ರವಣ ಸಾಧನ, ಹಲ್ಲು ಸೆಟ್, ಊರುಗೋಲು, ಕನ್ನಡಕ, ಪಿಂಚಣಿ ಮತ್ತು ಬಸ್ ಪಾಸ್ ಇತ್ಯಾದಿಗಳನ್ನು ನೀಡುವ ಯೋಜನೆ ಇದ್ದು, ವಿಶೇಷಚೇತನ ಮಕ್ಕಳಿಗೂ ಇಲಾಖೆ ವತಿಯಿಂದ ಸೂಕ್ತ ಸೌಲಭ್ಯಗಳನ್ನು ನೀಡಲಾಗುವುದು.

ಉಡುಪಿಯಲ್ಲಿ 2019-20 ನೇ ಸಾಲಿನಲ್ಲಿ ಡಿಸೆಂಬರ್ 2019 ರ ಅಂತ್ಯಕ್ಕೆ ಶಿಶು ಅಭಿವೃದ್ಧಿ ಯೋಜನೆಯಡಿ ಒಟ್ಟು 1191 ಅಂಗನವಾಡಿ ಕೇಂದ್ರಗಳು ಮಂಜೂರಾಗಿದ್ದು, ಇದರಲ್ಲಿ 1030 ಸ್ವಂತ ಕಟ್ಟಡ, 14 ಪಂಚಾಯತ್, 22 ಸಮುದಾಯ, ಯುವಕ ಮಂಡಲ ಹಾಗೂ ಮಹಿಳಾ ಮಂಡಲದಿಂದ 5 ಮತ್ತು 4 ಕಟ್ಟಡಗಳು, 81 ಶಾಲೆ, 10 ಪರ್ಯಾಯ ವ್ಯವಸ್ಥೆ, 25 ಬಾಡಿಗೆ ಕಟ್ಟಡಗಳು ಸೇರಿದ್ದು, ಎಲ್ಲಾ ಕೇಂದ್ರಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಅಂಗನವಾಡಿಯಲ್ಲಿ 66446 ಫಲಾನುಭವಿಗಳ ಗುರಿ ನಿಶ್ಚಿತವಾಗಿದ್ದು, 52105 ಸಾಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ. ಕೆ.ಶೆಟ್ಟಿ, ಶಾಸಕ ಕೆ.ರಘುಪತಿ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹಲೋತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್.ಶೇಷಪ್ಪ ಮತ್ತಿತರರು ಉಪಸ್ಥಿತರಿದ್ದರು.

Comments are closed.