ಕರಾವಳಿ

ಸಫಾಯಿ ಕರ್ಮಚಾರಿಗಳಿಗೆ ಸೌಲಭ್ಯ ಒದಗಿಸಿ : ಜಗದೀಶ್ ಹಿರೇಮಣಿ

Pinterest LinkedIn Tumblr

ಉಡುಪಿ: ಜಿಲ್ಲೆಯಲ್ಲಿನ ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿ, ಅವರು ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ಅಭಿವೃದ್ಧಿಯಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸುವಂತೆ ರಾಷ್ಟ್ರಿಯ ಸಫಾಯಿ ಕರ್ಮಚಾರಿಗಳ ಆಯೋಗ ಸದಸ್ಯ ಜಗದೀಶ್ ಹಿರೇಮಣೆ ಹೇಳಿದರು. ಅವರು ಶುಕ್ರವಾರ, ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ, ಜಿಲ್ಲೆಯ ನಗರ ಸ್ಥಳಿಯ ಸಂಸ್ಥೆಗಳು ಮತ್ತು ವಿವಿಧ ಇಲಾಖೆಗಳಲ್ಲಿ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಸಫಾಯಿ ಕರ್ಮಚಾರಿಗಳ ಮತ್ತು ಅವರ ಅವಲಂಬಿತರ ವೈದ್ಯಕೀಯ ವೆಚ್ವವನ್ನು ಸಂಬಂದಪಟ್ಟ ನಗರ ಸ್ಥಳೀಯ ಸಂಸ್ಥೆಗಳಿಂದಲೇ ಭರಿಸುವಂತೆ ಸೂಚಿಸಿದ ಜಗದೀಶ್ ಹಿರೇಮಣಿ, ಕೆಲಸದ ಸಂದರ್ಭದಲ್ಲಿ ಸುರಕ್ಷತಾ ಸಾಧನಗಳನ್ನು ಬಳಸುವಂತೆ ಅವರಿಗೆ ಪ್ರೇರೇಪಿಸಬೇಕು, ಅಂಬೇಡ್ಕರ್ ಅಭಿವೃಧ್ದಿ ನಿಗಮ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಫಾಯಿ ಕರ್ಮಚಾರಿಗಳು ವಿವಿಧ ಸೌಲಭ್ಯ ಪಡೆಯಲು ಪ್ರಮಾಣಪತ್ರದ ಅಗತ್ಯ ವಿರುವುದನ್ನು ಮನಗಂಡ ಜಗದೀಶ ಹಿರೇಮಣಿ, ಎಲ್ಲಾ ಸ್ಥಳಿಯ ಸಂಸ್ಥೆಗಳು ತಮ್ಮಲ್ಲಿ ಕೆಲಸ ಮಾಡುವ ಸಫಾಯಿ ಕರ್ಮಚಾರಿಗಳಿಗೆ, ಅವರ ಕುಟುಂಬ ಸದಸ್ಯರ ಹೆಸರನ್ನು ಸೇರಿಸಿ ಪ್ರಮಾಣಪತ್ರ ವಿತರಿಸುವಂತೆ ಮತ್ತು ಜಿಲ್ಲೆಯಲ್ಲಿ ಖಾಲಿ ಇರುವ ಪೌರ ಕಾರ್ಮಿಕ ಹುದ್ದೆಗಳನ್ನು ಜಿಲ್ಲಾ ಹಂತದಲ್ಲೇ ನೇಮಕಾತಿ ಮಾಡುವಂತೆ ಸೂಚಿಸಿದರು.

ಸಫಾಯಿ ಕರ್ಮಚಾರಿಗಳಿಗೆ ವಸತಿ ವ್ಯವಸ್ಥೆ ಒದಗಿಸುವಂತೆ ಸೂಚಿಸಿದ ಅವರು, ಉಡುಪಿಯ ಪೌರಕಾರ್ಮಿಕರ ವಸತಿಗೃಹದಲ್ಲಿ ವಾಸವಿರುವವರಿಗೆ, ಸದ್ರಿ ವಸತಿ ಗೃಹಗಳನ್ನು ಅವರ ಹೆಸರಿಗೆ ನೊಂದಣಿ ಮಾಡಿಕೊಡುವಂತೆ ಹಾಗೂ ಪಂಚಾಯತ್‍ಗಳಲ್ಲಿ ಕಾರ್ಯ ನಿರ್ವಹಿಸುವ ಸಫಾಯಿ ಕರ್ಮಚಾರಿಗಳಿಗೂ ಸಹ ನಿಯಮಾನುಸಾರ ಕನಿಷ್ಠ ವೇತನ ನೀಡುವ ಕುರಿತಂತೆ ಕ್ರಮ ಕೈಗೊಳ್ಳಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ತಿಳಿಸಿದರು.

ನಗರ ಪ್ರದೇಶದಲ್ಲಿ ಮ್ಯಾನ್ಯುಯಲ್ ಸ್ಕಾವೆಂಜರ್ ಇಲ್ಲದಿದ್ದರೂ ಸಹ ಗ್ರಾಮೀಣ ಪ್ರದೇಶಗಳಲ್ಲಿ ಈಗಲೂ ಇದು ನಡೆಯುತ್ತಿದೆ, ಈ ಬಗ್ಗೆ ಎಲ್ಲ ಪಿಡಿಓ ಗಳಿಗೆ ಕಾರ್ಯಾಗಾರ ಏರ್ಪಡಿಸಿ ಅರಿವು ಮೂಡಿಸಿ, ಮ್ಯಾನ್ಯುಯಲ್ ಸ್ಕಾವೆಂಜರ್ ಕಂಡುಬಂದಲ್ಲಿ ಈ ಕಾರ್ಯ ಮಾಡುವ ವ್ಯಕ್ತಿ, ಆ ಕಾರ್ಯಕ್ಕೆ ನಿಯೋಜಿಸಿದವರು ಮತ್ತು ಸಂಬಂದಪಟ್ಟ ಅಧಿಕಾರಿಗಳು ಸಹ ಶಿಕ್ಷಾರ್ಹರು. ಗ್ರಾಮೀಣ ಪ್ರದೇಶದಲ್ಲಿನ ಮ್ಯಾನ್ಯುಯಲ್ ಸ್ಕಾವೆಂಜರ್‍ಗಳನ್ನು ಗುರುತಿಸಿ ಅವರಿಗೆ ಸಕ್ಕಿಂಗ್ ಯಂತ್ರ ಖರೀದಿಸಲು ಮುದ್ರಾ ಯೋಜನೆ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಬ್ಯಾಂಕ್ ಸಾಲ ಒದಗಿಸಿ, ಕನಿಷ್ಠ ಜಿಲ್ಲೆಯ ಎಲ್ಲ ಹೋಬಳಿಗಳಲ್ಲಿ ಒಂದು ಸಕ್ಕಿಂಗ್ ಯಂತ್ರಗಳಿದ್ದಲ್ಲಿ ಮ್ಯಾನ್ಯುಯಲ್ ಸ್ಕಾವೆಂಜರ್‍ಗಳಿಗೆ ಪರ್ಯಾಯ ಉದ್ಯೋಗ ಒದಗಿಸಲು ಹಾಗೂ ಗ್ರಾಮೀಣ ಪ್ರದೇಶದಲ್ಲೂ ಈ ಪದ್ಧತಿ ಕೊನೆಗಾಣಿಸಲು ಸಾಧ್ಯ, ಈ ಕುರಿತಂತೆ ಜಿಲ್ಲಾ ಲೀಡ್ ಬ್ಯಾಂಕ್ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ 298 ಮಂದಿ ಸಫಾಯಿ ಕರ್ಮಚಾರಿಗಳಿದ್ದು, ಅವರ ವೈದ್ಯಕೀಯ ಸೌಲಭ್ಯಕ್ಕಾಗಿ 13.77 ಲಕ್ಷ, ಸುರಕ್ಷತಾ ಉಪಕರಣಗಳಿಗಾಗಿ 23.69 ಹಾಗೂ ಉಪಹಾರ ವೆಚ್ಚಕ್ಕಾಗಿ 15.20 ಲಕ್ಷ ಮೀಸಲಿಡಲಾಗಿದ್ದು, ಜಿಲ್ಲೆಯ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆ ಒದಗಿಸಲಾಗುತ್ತಿದ್ದು, ಅಗತ್ಯ ಸುರಕ್ಷತಾ ಉಪಕರಣಗಳನ್ನು ವಿತರಿಸಲಾಗಿದೆ, ಪೌರ ಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ 9 ಮನೆ ಮಂಜೂರಾಗಿದ್ದು, 4 ಮನೆ ಪೂರ್ಣಗೊಂಡಿವೆ, ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ವಿದ್ಯಾರ್ಥಿವೇತನ ಸಹ ನೀಡಲಾಗುತ್ತಿದೆ ಎಂದು ಜಿಲ್ಲಾ ನಗರಾಭಿವೃದ್ದಿ ಕೋಶದ ನಿರ್ದೇಶಕ ಅರುಣ ಪ್ರಭ ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹಲೋತ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಸಹಾಯಕ ಕಮಿಷನರ್ ರಾಜು, ಪೌರಾಯುಕ್ತ ಆನಂದ್ ಕಲ್ಲೋಳಿಕರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರಮೇಶ್, ವಿವಿಧ ಇಲಾಖೆಯ ಅಧಿಕಾರಿಗಳು, ಸಫಾಯಿ ಕರ್ಮಚಾರಿಗಳ ಜಿಲ್ಲಾ ಸಮಿತಿ, ಉಪವಿಭಾಗ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Comments are closed.