ಕರಾವಳಿ

ಕೋವಿಡ್-19 ನಿರ್ವಹಣೆಯಲ್ಲಿ ಲೋಪವಾಗದಂತೆ ಕಾರ್ಯ ನಿರ್ವಹಿಸಿ :ಎಂ.ಮಹೇಶ್ವರ ರಾವ್

Pinterest LinkedIn Tumblr

ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುತ್ತಿದ್ದು, ಸೋಂಕಿತರ ಚಿಕಿತ್ಸೆಯಲ್ಲಿ ಯಾವುದೇ ಲೋಪ ಹಾಗೂ ಸೌಲಭ್ಯಗಳ ಕೊರತೆಯದಂತೆ ಯೋಜನೆಯನ್ನು ರೂಪಿಸಿ, ಕಾರ್ಯ ನಿರ್ವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್ ತಿಳಿಸಿದ್ದಾರೆ.

ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಕೋವಿಡ್19 ನ ಇತ್ತೀಚಿನ ವಸ್ತುಸ್ಥಿತಿ ಕುರಿತು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೋವಿಡ್-19 ಪ್ರಕರಣಗಳು ಹೆಚ್ಚಳವಾಗುತ್ತಿರುವುದರಿಂದ ಸೋಂಕಿತರರಿಗೆ ಆಸ್ಪತ್ರೆಯಲ್ಲಿ ಬೆಡ್ ಗಳ ಕೊರತೆಯಾದಂತೆ , ಹೆಚ್ಚಿನ ಸಂಖ್ಯೆಯಲ್ಲಿ ಬೆಡ್ ಗಳು ಲಭ್ಯವಿರುವಂತೆ ನೋಡಿಕೊಳ್ಳಿ, ಪ್ರಕರಣಗಳ ಸಮರ್ಪಕ ನಿರ್ವಹಣೆಗಾಗಿ ಯೋಜನೆ ರೂಪಿಸಿ ಅದರಂತೆ ಕಾರ್ಯನಿರ್ವಹಿಸಿ, ಯಾವುದೇ ಕಾರಣಕ್ಕೂ ಸೋಂಕಿತರ ಚಿಕಿತ್ಸೆ ಮತ್ತು ಬೆಡ್ ಗಳ ಕೊರತೆ ಕುರಿತಂತೆ ಸಾರ್ವಜನಿಕರಿಂದ ದೂರು ಬಾರದಂತೆ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಸಿದ್ದವಾಗಿಟ್ಟುಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸೂಚಿಸಿದರು.

ಜಿಲ್ಲೆಯಲ್ಲಿ ಐಎಲ್‌ಐ ಮತ್ತು ಸಾರಿ ಪ್ರಕರಣಗಳಲ್ಲಿ ಹೆಚ್ಚಿನ ಸೋಂಕು ಕಂಡುಬರುತ್ತಿರುವುದರ ಕುರಿತು ಪರಿಶೀಲಿಸಿ, ಮಡಿಕಲ್ ಶಾಪ್ ಗಳಲ್ಲಿ ಔಷಧ ಪಡೆದವರ ವಿವರಗಳನ್ನು ದಾಖಲಿಸಿ, ಅವರ ಆರೋಗ್ಯದ ಮಾಹಿತಿಯನ್ನು ಪಡೆಯಿರಿ, ಇತರೆ ರೋಗಿಗಳನ್ನು ಆಸ್ಪತ್ರೆ ದಾಖಲಿಸಿಕೊಳ್ಳುವಾಗ ಕೋವಿಡ್ ಪರೀಕ್ಷೆಗೆ ಒತ್ತಾಯಪಡಿಸದಂತೆ ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಿ ಎಂದು ಎಂ.ಮಹೇಶ್ವರರಾವ್ ಹೇಳಿದರು.

ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರನ್ನು ಆಸ್ಪತೆಗೆ ದಾಖಲಿಸಲು ಬೆಡ್ ಮೆನೆಜ್ ಮೆಂಟ್ ವ್ಯವಸ್ಥೆ ಮತ್ತು ಜಿಪಿಎಸ್ ಅಳವಡಿಸಿದ ಆಂಬುಲೆನ್ಸ್ ಟ್ರಾಕಿಂಗ್ ವ್ಯವಸ್ಥೆ ಇದ್ದು, ಪ್ರಾಕೃತಿಕ ವಿಕೋಪ ನಿಧಿಯಲ್ಲಿ ಹಣದ ಕೊರತೆ ಇಲ್ಲ, ಹೆಚ್ಚು ಪ್ರಕರಣಗಳು ಕಂಡುಬಂದಲ್ಲಿ ರೋಗಿಗಳ ಚಿಕಿತ್ಸಗೆ ಬೇಕಾದ ಅಗತ್ಯ ವೈದ್ಯಕೀಯ ಉಪಕರಣಗಳನ್ನು ಖರೀದಿ ಮತ್ತು ಇತರೆ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಕುರಿತು ಪರಿಶೀಲಿಸಿದ ಕಾರ್ಯದರ್ಶಿಗಳು ಕೃಷಿಗೆ ಭಿತ್ತನೆ ಬೀಜ ಹಾಗೂ ರಸಗೊಬ್ಬರ, ಕೀಟನಾಶಕದ ಯಾವುದೇ ಕೊರತೆಯಾಗದಂತೆ ಮುಂಜಾಗ್ರತೆ ವಹಿಸುವಂತೆ ಸೂಚಿಸಿದರು.

ಅಕ್ರಮ ಮರಳುಗಾರಿಕೆ ಕುರಿತಂತೆ ದೂರುಗಳು ಬರುತ್ತಿದ್ದು, ಜಿಪಿಎಸ್ ಉಲ್ಲಂಘನೆ, ಟ್ರಿಪ್ ಉಲ್ಲಂಘನೆ, ಧಕ್ಕೆ ನಿಯಮಗಳ ಉಲ್ಲಂಘನೆ ಕುರಿತಂತೆ ಪ್ರಕರಣ ದಾಖಲಿಸಿ ಹಾಗೂ ಚೆಕ್‌ಪೋಸ್ಟ್ ಗಳಲ್ಲಿ ಮರಳು ಸಾಗಾಟ ಮಾಡುವ ವಾಹನಗಳಿಗೆ ಜಿ.ಪಿಎಸ್. ಅಳವಡಿಸಿರುವ ಕುರಿತಂತೆ ಪರಿಶೀಲನೆ ನಡೆಸುವಂತೆ ಮತ್ತು ರಾತ್ರಿ ವೇಳೆ ಹೆಚ್ಚು ನಿಗಾವಹಿಸುವಂತೆ ಪೊಲೀಸ್ ಇಲಾಖೆಗೆ ಕಾರ್ಯದರ್ಶಿ ಸೂಚಿಸಿದರು.

ಜಿಲ್ಲೆಯಲ್ಲಿನ ಕೋವಿಡ್ ಪ್ರಸಕ್ತ ಸ್ಥಿತಿಗತಿ ಕುರಿತು ಕೋವಿಡ್-19 ಜಿಲ್ಲಾ ನೋಡೆಲ್ ಅಧಿಕಾರಿ ಪ್ರಶಾಂತ್ ಭಟ್ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋತ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.