ಕರಾವಳಿ

ಉಡುಪಿಯಲ್ಲಿ ಮರದ ಸಾಮಾಗ್ರಿ ತಯಾರಿಕೆಗೆ ಫರ್ನಿಚರ್ ಕ್ಲಸ್ಟರ್ ಆರಂಭಿಸಲು ಜಾಗ ಗುರುತಿಸಿ: ಜಗದೀಶ್ ಶೆಟ್ಟರ್

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮರದ ಸಾಮಗ್ರಿಗಳನ್ನು ತಯಾರಿಸುವ ಫರ್ನಿಚರ್ ಕ್ಲಸ್ಟರ್ ಆರಂಭಿಸಲು ಸೂಕ್ತ ಜಾಗವನ್ನು ಗುರುತಿಸುವಂತೆ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.

ಅವರು ಶುಕ್ರವಾರ ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲೆಯ ಕೈಗಾರಿಕಾಭಿವೃದ್ದಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯದಲ್ಲಿ ಈಗಾಗಲೇ ಕೈಗಾರಿಕೆ ಅಭಿವೃದ್ಧಿಗಾಗಿ ವಿವಿಧ ಕ್ಲಸ್ಟರ್‌ಗಳನ್ನು ಆರಂಭಿಸಲು ಸೂಚನೆ ನೀಡಿದ್ದು, ಕೊಪ್ಪಳದಲ್ಲಿ ಆಟಿಕೆ ತಯಾರಿಕಾ ಕ್ಲಸ್ಟರ್ ಮತ್ತು ಯಾದಗಿರಿ-ರಾಯಚೂರಿನಲ್ಲಿ ಫಾರ್ಮಾ ಕ್ಲಸ್ಟರ್ ಆರಂಭ ಕುರಿತಂತೆ ಕಾರ್ಯಗಳು ನಡೆಯುತ್ತಿವೆ, ಉಡುಪಿ ಜಿಲ್ಲೆಯಲ್ಲಿ ಬಂದರು ಇರುವ ಕಾರಣ ವಿದೇಶಗಳಿಂದ ಉತ್ತಮ ಗುಣಮಟ್ಟದ ಮರಗಳನ್ನು ಆಮದು ಮಾಡಿಕೊಳ್ಳಲು ಮತ್ತು ತಯಾರಿಸಿದ ಪೀಠೋಪಕರಣಗಳನ್ನು ರಫ್ತು ಮಾಡಲು ಉತ್ತಮ ಅವಕಾಶಗಳಿದ್ದು, ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ದೊರಯಲಿದ್ದು, ಇದಕ್ಕಾಗಿ ಅಗತ್ಯ ಪ್ರಮಾಣದ ಭೂಮಿಯನ್ನು ಗುರುತಿಸುವಂತೆ ತಿಳಿಸಿದ ಸಚಿವ ಜಗದೀಶ್ ಶೆಟ್ಟರ್, ಕ್ಲಸ್ಟರ್ ಆರಂಭಕ್ಕೆ ಸರಕಾರದಿಂದ ಎಲ್ಲಾ ರೀತಿಯ ಅಗತ್ಯ ನೆರವು ನೀಡಲಾಗುವುದು ಎಂದರು.

ಉಡುಪಿ ಜಿಲ್ಲೆಯ ನಂದಿಕೂರು ಸೇರಿದಂತೆ ವಿವಿಧ ಕಲಕ್ಷಿ್ಮೀಕಾ ಪ್ರದೇಶದಲ್ಲಿ, ಉದ್ದಿಮೆ ಆರಂಭಿಸಲು ಕೈಗಾರಿಕೆಗಳು ಪಡೆದಿರುವ ಭೂಮಿಯು ಸಂಪೂರ್ಣ ಬಳಕೆಯಾಗಿರುವ ಬಗ್ಗೆ ಬೆಂಗಳೂರಿನಿಂದ ತಜ್ಞರ ತಂಡದಿಂದ ಪರಿಶೀಲಿಸಿ, ಅವರ ಮೂಲಕ ವರದಿ ಪಡೆಯಲಾಗುವುದು ಎಂದ ಸಚಿವರು, ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶ ನೀಡುವಂತೆ ಹಾಗೂ ಸರೋಜಿನಿ ಮಹಿಷಿ ವರದಿಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವಂತೆ ಕೈಗಾರಿಕೋದ್ಯಮಿಗಳಿಗೆ ಸೂಚಿಸಿದರು.
ರಾಜ್ಯದಲ್ಲಿ ಕೈಗಾರಿಕೆಗಳು ಒಂದೇ ಕಡೆ ಕೇಂದ್ರೀಕೃತವಾಗುವುದನ್ನು ತಪ್ಪಿಸುವ ಉದ್ದೇಶದಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಹೊರತುಪಡಿಸಿ ಇತರೆ ಟೈರ್ 1 ಮತ್ತು 2 ನಗರಗಳಲ್ಲಿ ಕೈಗಾರಿಕೆಗಳನ್ನು ಆರಂಬಿಸಲು ಅವಕಾಶ ನೀಡಿದ್ದು, ಇದರಿಂದ ಈ ನಗರಗಳಲ್ಲಿ ಉದ್ಯೋಗಾವಕಾಶಗಳು ಸೃಷ್ಠಿಯಾಗುತ್ತಿವೆ, ಬೇಲೆಕೇರಿ ಬಂದರನ್ನು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿಪಡಿಸಲು ಡಿಪಿಆರ್ ಮಾಡಲು ನಿರ್ದೇಶನ ನೀಡಲಾಗಿದೆ, ಕೈಗಾರಿಕಾ ನೀತಿಯಲ್ಲಿ ಹಲವು ಬದಲಾವಣೆ ಮಾಡಿ, ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ದಿಗೆ ಪೂರಕ ವಾತಾವರಣ ನಿರ್ಮಿಸಲಾಗುತ್ತಿದೆ ಎಂದು ಸಚಿವ ಶೆಟ್ಟರ್ ಹೇಳಿದರು.

ಮಣಿಪಾಲದ ಶಿವಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಅಗತ್ಯವಾಗಿ ಕೈಗೊಳ್ಳಬೇಕಾದ ಕಾಮಗಾರಿಗಳ ಕುರಿತು, ಗೋಡಂಬಿ ಉದ್ಯಮದ ಬೆಳವಣಿಗೆ ಅಗತ್ಯವಿರುವ ಬೆಂಬಲ ನೀಡುವಂತೆ ಹಾಗೂ ಜಿಲ್ಲೆಯ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಕೈಗಾರಿಕೋದ್ಯಮಿಗಳು ಸಚಿವರಿಗೆ ಮನವಿ ಸಲ್ಲಿಸಿದರು.

ಸಭೆಯಲ್ಲಿ ಮೀನುಗಾರಿಕೆ, ಬಂದರು ಮತ್ತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷಿ ಮಂಜುನಾಥ್, ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಶಾಸಕ ರಘುಪತಿ ಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಜಿಲ್ಲಾಧಿಕಾರಿ ಜಿ.ಜಗದೀಶ್, ಕೆಐಎಡಿಬಿಯ ಸಿಇಓ ಶಿವ ಶಂಕರ್ ಹಾಗೂ ಜಿಲ್ಲೆಯ ವಿವಿಧ ಕೈಗಾರಿಕೋದ್ಯಮಿಗಳು ಉಪಸ್ಥಿತರಿದ್ದರು.

Comments are closed.