ಬೆಂಗಳೂರು: ಬಯಲುಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜನಪ್ರತಿನಿಧಿಗಳೊಂದಿಗೆ ಗುರುವಾರ ವಿಧಾನಸೌಧದಲ್ಲಿ ಚರ್ಚೆ ನಡೆಸಿದರು.
ಯೋಜನೆಗೆ ಕರಾವಳಿ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಪರಿಸರ ಹೋರಾಟಗಾರರಿಂದ ತೀವ್ರ ವಿರೋಧ ವ್ಯಕ್ತವಾಗಿರುವುದರಿಂದ ಯೋಜನೆಯ ಒಟ್ಟಾರೆ ಉದ್ದೇಶದ ಬಗ್ಗೆ ಚರ್ಚಿಸಲು ಸಿದ್ದರಾಮಯ್ಯ ಅವರು ಈ ಸಭೆ ಕರೆದಿದ್ದರು.
ಸಭೆಯಲ್ಲಿ ಭಾಗವಹಿಸಿದ್ದವರ ಮನವೊಲಿಸಲು ಮುಖ್ಯಮಂತ್ರಿ ಯಶಸ್ವಿಯಾಗಿದ್ದಾರೆ ಎಂದು ಗೊತ್ತಾಗಿದೆ. ಯೋಜನೆಯನ್ನು ಬಲವಾಗಿ ವಿರೋಧಿಸುತ್ತಿರುವ ಪರಿಸರ ಹೋರಾಟಗಾರರನ್ನು ಮನವೊಲಿಸುವ ನಿಟ್ಟಿನಲ್ಲಿ ಶೀಘ್ರವಾಗಿ ಸಭೆ ಕರೆಯುವಂತೆ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಅವರಿಗೆ ಸಿದ್ದರಾಮಯ್ಯ ಸೂಚಿಸಿದರು ಎನ್ನಲಾಗಿದೆ.
ಕೋಲಾರ, ತುಮಕೂರು ಸೇರಿದಂತೆ ಬಯಲುಸೀಮೆ ಜಿಲ್ಲೆಗಳ ಜನರಿಗೆ ಕುಡಿಯುವ ನೀರು ಒದಗಿಸುವುದಕ್ಕೆ ತಮ್ಮ ವಿರೋಧವೇನೂ ಇಲ್ಲ. ಆದರೆ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಜನರ ಹಿತಾ ಸಕ್ತಿಗೆ ಯಾವುದೇ ಧಕ್ಕೆಯಾಗಬಾರದು ಎಂಬ ಅಭಿಪ್ರಾಯವನ್ನು ಜಿಲ್ಲೆಗಳ ಜನ ಪ್ರತಿನಿಧಿಗಳು ವ್ಯಕ್ತಪಡಿಸಿದರು.
‘ನೇತ್ರಾವತಿ ತಿರುವು ಯೋಜನೆಗೂ, ಎತ್ತಿನಹೊಳೆ ಯೋಜನೆಗೂ ಸಂಬಂಧವಿಲ್ಲ. ಮಳೆಗಾಲದಲ್ಲಿ (ಜೂನ್ನಿಂದ ಅಕ್ಟೋಬರ್ವರೆಗೆ) ಹರಿಯುವ ಹೆಚ್ಚುವರಿ 24 ಟಿಎಂಸಿ ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಬಯಲು ಸೀಮೆ ಜಿಲ್ಲೆಗಳಿಗೆ ಪೂರೈಕೆ ಮಾಡುವುದಕ್ಕಾಗಿ ಏಳು ಕಡೆಗಳಲ್ಲಿ ನೀರು ಪಂಪ್ ಮಾಡಲಾಗುತ್ತದೆ. ಇದರಿಂದ ಪರಿಸರಕ್ಕೆ ತೊಂದರೆ ಇಲ್ಲ. ನೇತ್ರಾವತಿ ನದಿ ಪಾತ್ರಕ್ಕೂ ಹಾನಿಯಾಗದು’ ಎಂದು ಮುಖ್ಯಮಂತ್ರಿ ಸ್ಪಷ್ಟ ಪಡಿಸಿದರು ಎಂದು ಗೊತ್ತಾಗಿದೆ.
ಸಾಕಷ್ಟು ಮಳೆ ಬೀಳುತ್ತಿದ್ದರೂ ಟ್ಯಾಂಕರ್ನಲ್ಲಿ ನೀರು ಪೂರೈಕೆ ಮಾಡಬೇಕಾದ ಪರಿಸ್ಥಿತಿ ಕರಾವಳಿ ಭಾಗದಲ್ಲಿ ಇದೆ. ಎರಡೂ ಜಿಲ್ಲೆಗಳಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಕಾಳಜಿ ತೋರಬೇಕು ಎಂಬ ಒತ್ತಾಯವೂ ಸಭೆಯಲ್ಲಿ ಕೇಳಿ ಬಂತು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು ಎಂದು ಗೊತ್ತಾಗಿದೆ.
‘ಯೋಜನೆಯ ಬಗ್ಗೆ ಎರಡು ಜಿಲ್ಲೆಗಳ ಜನರಿಗೆ ಮತ್ತು ಜನಪ್ರತಿನಿಧಿಗಳಿಗೆ ಹಲವಾರು ಸಂಶಯಗಳಿದ್ದವು. ಇಂದಿನ ಸಭೆಯಲ್ಲಿ ಅವುಗಳೆಲ್ಲ ಬಗೆ ಹರಿದಿವೆ. ಜಿಲ್ಲೆಗಳ ವಿವಿಧ ಕಡೆಗಳಲ್ಲಿ ಚೆಕ್ ಡ್ಯಾಮ್ಗಳನ್ನು ನಿರ್ಮಿಸಲು ₨400 ಕೋಟಿ ಬಿಡುಗಡೆ ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ’ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ತಿಳಿಸಿದರು.
ಸ್ಪಷ್ಟನೆ ಕೇಳಿದ್ದೇವೆ: ‘ಯೋಜನೆ ಕುರಿತ ವರದಿಗಳಲ್ಲಿ ಉಲ್ಲೇಖಿಸಲಾಗಿರುವ ಕೆಲವು ವಿಚಾರಗಳ ಬಗ್ಗೆ ಸ್ಪಷ್ಟನೆ ಕೇಳಿದ್ದೇವೆ. ಈ ಯೋಜನೆಯನ್ನು ನೇತ್ರಾವತಿ ತಿರುವು ಯೋಜನೆಯೊಂದಿಗೆ ಹೋಲಿಸುವುದನ್ನು ಬಿಡಬೇಕು ಎಂದು ಖಂಡತುಂಡವಾಗಿ ಹೇಳಿದ್ದೇವೆ. ಎರಡು ಜಿಲ್ಲೆಗಳ ಜನರಿಗೆ ತೊಂದರೆಯಾಗುವ ಯಾವುದೇ ಯೋಜನೆಗಳನ್ನು ನಾವು ವಿರೋಧಿಸುತ್ತೇವೆ. ಸಭೆಯಲ್ಲಿ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದೇವೆ’ ಎಂದು ವಿಧಾನಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್ ಮಾಹಿತಿ ನೀಡಿದರು.
ಸಚಿವರಾದ ಟಿ.ಬಿ. ಜಯಚಂದ್ರ, ರಮಾನಾಥ ರೈ, ವಿನಯಕುಮಾರ ಸೊರಕೆ, ಯು.ಟಿ. ಖಾದರ್, ಶಾಸಕರಾದ ವಸಂತ ಬಂಗೇರ, ಬಿ.ಎ. ಮೊಯಿದ್ದೀನ್ ಬಾವಾ, ಜೆ.ಆರ್. ಲೋಬೊ, ಗೋಪಾಲ ಪೂಜಾರಿ, ಐವನ್ ಡಿಸೋಜಾ, ಪ್ರತಾಪ ಚಂದ್ರ ಶೆಟ್ಟಿ ಸಭೆಯಲ್ಲಿ ಭಾಗವಹಿಸಿದ್ದರು.