ಬೆಂಗಳೂರು: ‘ಕಾರ್ಮಿಕರ ಸುರಕ್ಷತೆ ಮತ್ತು ಪರಿಸರ ರಕ್ಷಣೆಯೂ ಕೈಗಾರಿಕೆಗಳ ಮಾಲೀಕರ ಜವಾಬ್ದಾರಿಯಾಗಿದೆ. ಕೆಲಸದ ಸ್ಥಳಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಂಡು ಜೀವಹಾನಿ ಆಗುವುದನ್ನು ತಪ್ಪಿಸಬೇಕು’ ಎಂದು ಕಾರ್ಮಿಕ ಸಚಿವ ಪಿ.ಟಿ. ಪರಮೇಶ್ವರ್ ನಾಯಕ್ ಅವರು ಹೇಳಿದರು.
ಕರ್ನಾಟಕ ರಾಜ್ಯ ಕಾರ್ಖಾನೆ, ಬಾಯ್ಲರ್, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯು ನಗರದಲ್ಲಿ ಗುರುವಾರ ನಡೆದ ‘ರಾಸಾಯನಿಕ ವಿಪತ್ತು ನಿವಾರಣಾ ದಿನಾಚರಣೆ’ಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಕೈಗಾರಿಕೆಗಳ ಆಡಳಿತ ಮಂಡಳಿಯು ರಾಸಾಯನಿಕ ಅನಿಲ ಅವಘಡಗಳ ಬಗ್ಗೆ ಕಾರ್ಮಿಕರಿಗೆ ಜಾಗೃತಿ ಮೂಡಿಸಬೇಕು. ಕಾರ್ಖಾನೆಗಳಲ್ಲಿ ಅಪಾಯಕಾರಿ ರಾಸಾಯನಿಕ ವಸ್ತುಗಳ ಉಪಯೋಗವನ್ನು ಕಡಿಮೆಗೊಳಿಸಬೇಕು. ವಿಪತ್ತಿನ ಸಂದರ್ಭದಲ್ಲಿ ಕಾರ್ಮಿಕರು ಯಾವ ರೀತಿ ಸುರಕ್ಷಾ ಕ್ರಮಗಳನ್ನು ಪಾಲಿಸಬೇಕು ಎನ್ನುವುದರ ಬಗ್ಗೆ ಕಡ್ಡಾಯವಾಗಿ ತರಬೇತಿ ನೀಡಬೇಕು’ ಎಂದು ಸಲಹೆ ನೀಡಿದರು.
‘ಅಧಿಕಾರಿಗಳು ಕಾಟಾಚಾರಕ್ಕೆ ಕೈಗಾರಿಕೆಗಳಲ್ಲಿನ ಬ್ಲಾಯರ್ಗಳ ಪರಿಶೀಲನೆ ನಡೆಸಬಾರದು. ಒಂದು ಸಣ್ಣ ನಿರ್ಲಕ್ಷ್ಯವು ದೊಡ್ಡ ಅನಾಹುತಕ್ಕೆ ಕಾರಣವಾಗುತ್ತದೆ. ಹೀಗಾಗಿ ಸದಾ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು’ ಎಂದು ನುಡಿದರು.
ಬಯೋಕಾನ್ ಸಂಸ್ಥೆಯ ಅಧ್ಯಕ್ಷೆ ಡಾ.ಕಿರಣ್ ಮಜುಮ್ದಾರ್ ಷಾ ಮಾತನಾಡಿ, ‘ಕೈಗಾರಿಕೆಯಲ್ಲಿ ಸುರಕ್ಷತೆ ಸಂಬಂಧಿಸಿದಂತೆ ದೇಶದಲ್ಲಿ ಸಾಕಷ್ಟು ಕಾನೂನುಗಳಿವೆ. ಆದರೆ, ಅವು ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ‘ಮೇಕ್ ಇನ್ ಇಂಡಿಯಾ’ ಅಭಿಯಾನದ ಜೊತೆಗೆ ‘ಸುರಕ್ಷತೆ ಅಭಿಯಾನವನ್ನು ಜಾರಿಗೊಳಿಸಬೇಕು’ ಎಂದು ಅಭಿಪ್ರಾಯಪಟ್ಟರು.
ಕನ್ನಡಿಗರಿಗೆ ಉದ್ಯೋಗ: ಮಾಹಿತಿ ಕಲೆ ಹಾಕಲಾಗುತ್ತಿದೆ
‘ಡಾ.ಸರೋಜಿನಿ ಮಹಿಷಿ ವರದಿ ಪ್ರಕಾರ ರಾಜ್ಯದ ಎಲ್ಲಾ ಕೈಗಾರಿಕೆ ಮತ್ತು ಕಾರ್ಖಾನೆಗಳಲ್ಲಿ ಉದ್ಯೋಗ ನೀಡುವಾಗ ಕನ್ನಡಿಗರಿಗೆ ಆದ್ಯತೆ ನೀಡಬೇಕು. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಯಾವ ಕಂಪೆನಿಗಳು ಎಷ್ಟು ಉದ್ಯೋಗ ನೀಡಿವೆ ಎಂಬ ಮಾಹಿತಿ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಈ ಸಲುವಾಗಿ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ’ ಎಂದು ಕಾರ್ಮಿಕ ಸಚಿವರು ಮಾಹಿತಿ ನೀಡಿದರು.