ಬೆಂಗಳೂರು: ನಗರದ ಕೇಂದ್ರ ವಿಭಾಗದ ವ್ಯಾಪ್ತಿಯ 80 ರೌಡಿಗಳ ಮನೆಗಳ ಮೇಲೆ ಪೊಲೀಸರು ಗುರುವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ಮಾಡಿದರು.
ರೌಡಿಗಳ ಮನೆ ಮೇಲೆ ನಸುಕಿನಲ್ಲೇ ಏಕಕಾಲಕ್ಕೆ ದಾಳಿ ನಡೆಸಿದ ಪೊಲೀಸರು ನಾಲ್ಕು ತಾಸಿಗೂ ಹೆಚ್ಚು ಕಾಲ ತಪಾಸಣೆ ಮಾಡಿದರು. ನಂತರ ರೌಡಿಗಳನ್ನು ಠಾಣೆಗೆ ಕರೆದುಕೊಂಡು ಬಂದು ಹೆಚ್ಚಿನ ವಿಚಾರಣೆ ನಡೆಸಿದರು.
‘ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಮತ್ತು ರೌಡಿಗಳ ಚಲನವಲನದ ಮೇಲೆ ನಿಗಾ ಇಡುವ ಉದ್ದೇಶದಿಂದ ಅವರ ಮನೆಗಳ ಮೇಲೆ ದಿಢೀರ್ ದಾಳಿ ನಡೆಸಲಾಯಿತು’ ಎಂದು ಕೇಂದ್ರ ವಿಭಾಗದ ಡಿಸಿಪಿ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ರೌಡಿಗಳ ಭಾವಚಿತ್ರ, ವಿಳಾಸ, ಮೊಬೈಲ್ ಸಂಖ್ಯೆಯ ವಿವರಗಳನ್ನು ಸಂಗ್ರಹಿಸಲಾಯಿತು. ಅಲ್ಲದೇ, ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಅವರಿಗೆ ಎಚ್ಚರಿಕೆ ನೀಡಿ ಮುಚ್ಚಳಿಕೆ ಪತ್ರ ಬರೆಸಿಕೊಂಡು ವಾಪಸ್ ಕಳುಹಿಸಲಾಯಿತು ಎಂದು ಹೇಳಿದ್ದಾರೆ.