ಬೆಂಗಳೂರು: ಗಣರಾಜ್ಯೋತ್ಸವ ದಿನವಾದ ಜನವರಿ 26ರಂದು ರಾಜ್ಯದ ಸಾವಿರ ಗ್ರಾಮಗಳನ್ನು ‘ಬಯಲು ಬಹಿರ್ದೆಸೆ ಮುಕ್ತ ಗ್ರಾಮ’ಗಳೆಂದು ಘೋಷಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.
ವಿಧಾನಸೌಧದಲ್ಲಿ ಶುಕ್ರವಾರ ನಡೆದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಉಪಕಾರ್ಯದರ್ಶಿಗಳು ಮತ್ತು ಮುಖ್ಯ ಲೆಕ್ಕಾಧಿಕಾರಿಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವರಿ 25ರ ಒಳಗಾಗಿ ಈ ಗ್ರಾಮಗಳಿಗೆ ಸಾಮಾಜಿಕ ಲೆಕ್ಕಪರಿಶೋಧನಾ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಲಿದೆ. ಶೌಚಾಲಯ ನಿರ್ಮಾಣದಲ್ಲಿ ಶೇಕಡ 100ರಷ್ಟು ಪ್ರಗತಿ ಸಾಧಿಸಿರುವ ಗ್ರಾಮಗಳನ್ನು ಗುರುತಿಸಿ, ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳೆಂದು ಘೋಷಿಸಲಾಗುವುದು ಎಂದರು.
10 ಲಕ್ಷ ಶೌಚಾಲಯ ನಿರ್ಮಾಣ ಖಚಿತ: 2018ರ ಒಳಗಾಗಿ ಕರ್ನಾಟಕವನ್ನು ‘ಬಯಲು ಬಹಿರ್ದೆಸೆ ಮುಕ್ತ’ ರಾಜ್ಯವನ್ನಾಗಿ ಮಾಡುವ ಗುರಿ ಹೊಂದಲಾಗಿದೆ. ಈ ವರ್ಷ ರಾಜ್ಯದಾದ್ಯಂತ ನಿರ್ಮಿಸಲು 10 ಲಕ್ಷ ಶೌಚಾಲಯಗಳ ನಿರ್ಮಿಸುವ ಗುರಿ ತಲುಪುವ ವಿಶ್ವಾಸ ವ್ಯಕ್ತಪಡಿಸಿದರು.
‘ಒಂಬತ್ತು ತಿಂಗಳ ಅವಧಿಯಲ್ಲಿ 5.1 ಲಕ್ಷ ಶೌಚಾಲಯಗಳನ್ನು ನಿರ್ಮಿಸಲಾಗಿದ್ದು, ಉಳಿದ ಶೌಚಾಲಯಗಳ ಕಾಮಗಾರಿಗಳು ಪ್ರಗತಿಯಲ್ಲಿವೆ. ಮೂರು ತಿಂಗಳಲ್ಲಿ ಅವುಗಳೂ ಪೂರ್ಣಗೊಳ್ಳಲಿವೆ’ ಎಂದು ಹೇಳಿದರು.
ಗ್ರಾಮಪಂಚಾಯತಿ ನೌಕರರ ಕಾಯಂ: ‘ಬೆಂಗಳೂರಿನಲ್ಲಿ ನಡೆದಿದ್ದ ವಿಧಾನ ಮಂಡಲ ಅಧಿವೇಶನದಲ್ಲಿ ಗ್ರಾಮಪಂಚಾಯಿತಿ ನೌಕರರ ಸೇವೆಯನ್ನು ಕಾಯಂಗೊಳಿಸುವುದಾಗಿ ಭರವಸೆ ನೀಡಿದ್ದೆ. ಅದೇ ರೀತಿ 27 ಸಾವಿರ ನೌಕರರ ಸೇವೆ ಕಾಯಂಗೊಳಿಸಲಾಗಿದೆ’ ಎಂದು ಅವರು ಹೇಳಿದರು.
ಶೈಕ್ಷಣಿಕ ಅರ್ಹತೆ ಸೇರಿದಂತೆ ಬೇರೆ ಬೇರೆ ಕಾರಣಗಳಿಗೆ ನೌಕರರ ಸೇವೆಯನ್ನು ಕಾಯಂಗೊಳಿಸಲು ಸಾಧ್ಯವಾಗಿರಲಿಲ್ಲ. ಈ ವಿಚಾರದಲ್ಲಿ ವಿವೇಚನೆಯಿಂದ ವರ್ತಿಸಿ, ಶೈಕ್ಷಣಿಕ ಅರ್ಹತೆ ಸೇರಿದಂತೆ ಕೆಲವು ನಿಯಮಗಳಿಗೆ ವಿನಾಯಿತಿ ನೀಡಲಾಗಿದೆ ಎಂದರು.
ಈಗಾಗಲೇ 11,648 ನೌಕರರ ಸೇವೆ ಕಾಯಂಗೊಳಿಸಲಾಗಿದೆ. 11,239 ನೌಕರರಿಗೆ ಕನಿಷ್ಠ ಕೂಲಿ ನೀಡಲು ಅನುಮೋದನೆ ನೀಡಲಾಗಿದೆ ಎಂದರು.
ಡಾಟಾ ಎಂಟ್ರಿ ಆಪರೇಟರ್ ನೇಮಕ: ‘ಶೈಕ್ಷಣಿಕ ಅರ್ಹತೆಯ ಕಾರಣಕ್ಕೆ ಡಾಟಾ ಎಂಟ್ರಿ ಆಪರೇಟರ್ಗಳ ನೇಮಕಕ್ಕೂ ಅಡಚಣೆಯಾಗಿತ್ತು. ಈ ಸಭೆಯಲ್ಲಿ ಇದಕ್ಕೂ ಸ್ಪಷ್ಟನೆ ನೀಡಿ ನಾಲ್ಕು ಸಾವಿರ ಡಾಟಾ ಎಂಟ್ರಿ ಆಪರೇಟರ್ಗಳನ್ನು ನೇಮಿಸಲು ಒಪ್ಪಿಗೆ ಸೂಚಿಸಲಾಗಿದೆ’ ಎಂದರು.
ಅನುದಾನ ಕಡಿತ ಮಾಡದಂತೆ ಒತ್ತಾಯ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗಾಗಿ ರಾಜ್ಯಕ್ಕೆ ನೀಡುವ ಅನುದಾನದಲ್ಲಿ ಈ ವರ್ಷ ರೂ 1,200 ಕೋಟಿ ಕಡಿತ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಉದ್ಯೋಗ ನೀಡಲು, ಅಭಿವೃದ್ಧಿ ಕೆಲಸಗಳಿಗೆ ತೊಂದರೆಯಾಗಲಿದೆ ಎಂದು ಸಚಿವ ಎಚ್.ಕೆ. ಪಾಟೀಲ ಕಳವಳ ವ್ಯಕ್ತ ಪಡಿಸಿದರು.
ನೆರೆಯ ಆಂಧ್ರಪ್ರದೇಶಕ್ಕೆ ರೂ4,200 ಕೋಟಿಯಷ್ಟು ಪೂರ್ಣ ಅನುದಾನ ನೀಡಲು ಕೇಂದ್ರ ಸರ್ಕಾರ ಒಪ್ಪಿದೆ. ರಾಜ್ಯಕ್ಕೆ ಈ ವರ್ಷ ರೂ3,150 ಕೋಟಿ ನೀಡಬೇಕಿತ್ತು. ಆದರೆ, ಕಾರಣವಿಲ್ಲದೆ ರೂ 1,200 ಕೋಟಿ ಕಡಿತ ಮಾಡಲು ಹೊರಟಿದೆ. ಜನವರಿ 3 ಅಥವಾ 4ರಂದು ದೆಹಲಿಯಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಚೌಧರಿ ಬೀರೇಂದರ್ ಸಿಂಗ್ ಅವರನ್ನು ಭೇಟಿ ಮಾಡಿ ಕೇಂದ್ರ ಅನುಸರಿಸುತ್ತಿರುವ ಮಲತಾಯಿ ಧೋರಣೆಯನ್ನು ಅವರ ಗಮನಕ್ಕೆ ತರಲಾಗುವುದು ಎಂದು ಹೇಳಿದರು.
ಜನವರಿ 6ರಂದು ತಿರುವನಂತಪುರದಲ್ಲಿ ಎಲ್ಲ ರಾಜ್ಯಗಳ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಸಭೆ ನಡೆಯಲಿದ್ದು, ಅಲ್ಲೂ ಈ ವಿಷಯ ಪ್ರಸ್ತಾಪಿಸಲಾಗುವುದು ಎಂದು ಸಚಿವರು ತಿಳಿಸಿದರು.