ಕೂಡ್ಲಿಗಿ (ಬಳ್ಳಾರಿ ಜಿಲ್ಲೆ): ‘ನಮ್ಮ ಸೂಚನೆ ಮೇರೆಗೇ ಸತೀಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ’ ಎಂದು ರಾಜಾನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮಿ ಗುರುವಾರ ಇಲ್ಲಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ವಾಲ್ಮೀಕಿ ಸಮಾಜವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಜಾರಕಿಹೊಳಿ ಅವರಿಗೆ ಅಬಕಾರಿ ಖಾತೆ ನೀಡಲಾಗಿದೆ. ಆದರೆ ಇದರಿಂದ ಸಮಾಜಕ್ಕೆ ಯಾವ ಕೊಡುಗೆಯನ್ನು ನೀಡಲು ಸಾಧ್ಯವಿಲ್ಲ. ಅದ್ದರಿಂದ ಸಮಾಜದ ಅಭಿವೃದ್ಧಿಗೆ ಪೂರಕವಾಗುವಂತಹ ಸಮಾಜ ಕಲ್ಯಾಣ ಅಥವಾ ಗ್ರಾಮೀಣಾಭಿವೃದ್ಧಿಯಂತಹ ಪ್ರಮುಖ ಖಾತೆ ನೀಡುವಂತೆ ಈ ಹಿಂದೆ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದೆವು.
ಇದಕ್ಕೆ ಅವರು ಸ್ಪಂದಿಸದ ಕಾರಣ ರಾಜೀನಾಮೆ ಸಲ್ಲಿಸುವಂತೆ ಸತೀಶ್ ಅವರಿಗೆ ಸೂಚಿಸಲಾಯಿತು’ ಎಂದರು. ‘ಪರಿಶಿಷ್ಟ ಪಂಗಡಕ್ಕೆ ಶೇ ೭.೫ರಷ್ಟು ಮೀಸಲಾತಿ ಕಲ್ಪಿಸುವಂತೆ ಎಂಟು ತಿಂಗಳಿನಿಂದಲೂ ಒತ್ತಾಯಿಸುತ್ತಿದ್ದೇವೆ. ಆದರೆ, ಯಾವ ಸರ್ಕಾರವೂ ನಮ್ಮ ಮನವಿ ಪರಿಗಣಿಸಿಲ್ಲ. ಸಿದ್ಧರಾಮಯ್ಯ ಮಂತ್ರಿ ಮಂಡಲದಲ್ಲಿ ಸಣ್ಣ ಪುಟ್ಟ ಜಾತಿಗಳಿಗೆ 2–3 ಮಂತ್ರಿ ಸ್ಥಾನ ನೀಡಲಾಗಿದೆ. ರಾಜ್ಯದಲ್ಲಿ ೪೫ ಲಕ್ಷ ಜನಸಂಖ್ಯೆ ಹೊಂದಿರುವ ವಾಲ್ಮೀಕಿ ಜನಾಂಗಕ್ಕೆ ಕೇವಲ ಒಂದು ಮಂತ್ರಿ ಸ್ಥಾನ ಮಾತ್ರ ನೀಡಲಾಗಿದೆ. ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಶೇ ೭.೫ಕ್ಕೆ ಹೆಚ್ಚಿಸಬೇಕು. ಮೇಲಾಗಿ ರಾಜಕೀಯ ಮೀಸಲಾತಿ ಅನ್ವಯ ಇನ್ನೂ ಮೂವರಿಗೆ ಸಚಿವ ಸ್ಥಾನ ನೀಡಿದರೆ ಸತೀಶ್ ಜಾರಕಿಹೊಳಿ ಅವರಿಗೆ ರಾಜೀನಾಮೆ ಹಿಂಪಡೆಯುವಂತೆ ಸೂಚಿಸಲಾಗುವುದು ಎಂದರು. ಇಲ್ಲವಾದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ೧೫ ವಿಧಾನಸಭಾ ಸದಸ್ಯರ ರಾಜೀನಾಮೆ ಕೊಡಿಸಲಾಗುವುದು’ ಎಂದು ಅವರು ಎಚ್ಚರಿಸಿದರು.