ಬೆಂಗಳೂರು: ಅದಿರು ಕಳ್ಳಸಾಗಣೆ ಆರೋಪದ ಮೇಲೆ ಮತ್ತೆ ನ್ಯಾಯಾಂಗ ಬಂಧನದಲ್ಲಿರುವ ಹೊಸಪೇಟೆಯ (ವಿಜಯನಗರ) ಬಿಜೆಪಿ ಶಾಸಕ ಆನಂದ್ ಸಿಂಗ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬಂಧನದಲ್ಲಿ ಇದ್ದುಕೊಂಡು ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ನಿರ್ವಹಿಸಲು ಸಾಧ್ಯವಿಲ್ಲ ಎಂಬ ಕಾರಣ ನೀಡಿರುವ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿಗಳ ಮೂಲಕ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದಾರೆ. ರಾಜೀ
ನಾಮೆ ಅಂಗೀಕರಿಸಿ, ಜವಾಬ್ದಾರಿಯಿಂದ ಬಿಡುಗಡೆ ಮಾಡುವಂತೆ ಕೋರಿದ್ದಾರೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಅವರನ್ನು ಸಿಬಿಐ ಅಧಿಕಾರಿಗಳು 2013ರ ಅಕ್ಟೋಬರ್ನಲ್ಲಿ ಬಂಧಿಸಿದ್ದರು. ಆದರೆ 2015ರ ಜನವರಿಯಲ್ಲಿ ಅವರು ಜಾಮೀನು ಪಡೆದು ಬಿಡುಗಡೆ ಆಗಿದ್ದರು. ಅಕ್ರಮ ಗಣಿಗಾರಿಕೆ, ಅದಿರು ಕಳ್ಳಸಾಗಣೆಗೆ ಸಂಬಂಧಿಸಿದಂತೆ ಬಾಕಿ ಇದ್ದ ಪ್ರಕರಣಗಳ ಬಗ್ಗೆ ಲೋಕಾಯುಕ್ತದ ವಿಶೇಷ ತನಿಖಾ ದಳ ದಾಖಲಿಸಿದ ಹೊಸ ಪ್ರಕರಣದಲ್ಲಿ ಆನಂದ್ ಸಿಂಗ್ ಅವರನ್ನು ಗುರುವಾರ ಬಂಧಿಸಿ ಇದೇ 17ರ ವರೆಗೆ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.