ಬಿಜೆಪಿ ಮುಕ್ತ ರಾಜ್ಯ ಮಾಡಲು ಕನಸು ಕಾಣುತ್ತಿರುವ ಸಿದ್ದರಾಮಯ್ಯನವರಿಗೆ ಎಂದಿಗೂ ಆ ಉದ್ದೇಶ ಸಫಲವಾಗುವುದಿಲ್ಲ, ಬದಲಾಗಿ ಅವರೇ ಕಾಂಗ್ರೆಸ್ ಮುಕ್ತ ರಾಜ್ಯವನ್ನಾಗಿ ಮಾಡುವುದು ಖಚಿತ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅಪಹಾಸ್ಯ ಮಾಡಿದ್ದಾರೆ.
ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ರಾಜ್ಯ ಸರ್ಕಾರ ಎಲ್ಲಾ ರಂಗಗಳಲ್ಲಿಯೂ ವಿಫಲವಾಗಿದ್ದು ಸಿದ್ದರಾಮಯ್ಯ ಸರ್ಕಾರದಲ್ಲಿ ಪೊಲೀಸರೂ ಸಹ ಭ್ರಷ್ಟರಾಗಿದ್ದಾರೆ. ಹಾಗಾಗಿ ಕಾನೂನು ಕಾಯುವವರೇ ಭ್ರಷ್ಟರಾದರೆ ರಾಜ್ಯಕ್ಕೆ ಉಳಿಗಾಲವೆಲ್ಲಿ ಎಂದು ಪ್ರಶ್ನಿಸಿದರು.
ಸಚಿವರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಹೊಂದಾಣಿಕೆಯ ಕೊರತೆ ಎದ್ದು ಕಾಣುತ್ತಿದ್ದು ಅಲ್ಲದೇ ಕಾಂಗ್ರೆಸ್ ಸರ್ಕಾರದಲ್ಲಿ ಬಿಜೆಪಿ ಜಾರಿಗೊಳಿಸಿದ್ದ ಅಭಿವೃದ್ಧಿ ಕಾರ್ಯ ಕುಂಠಿತವಾಗಿವೆ ಎಂದ ಯಡಿಯೂರಪ್ಪ, ಕಾಂಗ್ರೆಸ್ ಸರ್ಕಾರ ಮಾಡಿದ್ದೇನು ಎಂದು ಪ್ರಶ್ನಿಸಿದರು.