ಬೆಂಗಳೂರು, ಜೂ.1: ಕೆಂಗೇರಿಯಲ್ಲಿ ತಾವು ಆಸ್ತಿ ಮಾಡಿರುವ ದಾಖಲೆ ತೋರಿಸಿದರೆ ನಾನು ಕುಮಾರಸ್ವಾಮಿಯವರಿಗೆ ಅದನ್ನು ಬರೆದುಕೊಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ ಮುಖ್ಯಮಂತ್ರಿ ಸ್ಥಾನದಲ್ಲಿದ್ದವರು ಜವಾಬ್ದಾರಿ ಅರಿತು ಮಾತನಾಡಬೇಕು. ಆಧಾರವಿಲ್ಲದೆ ಆರೋಪ ಮಾಡಬಾರದು. ಈಗಾಗಲೇ ಅಕ್ರಮ ಲಾಟರಿ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದೆ. ಅದನ್ನು ಪದೇ ಪದೇ ಪ್ರಸ್ತಾಪಿಸುವುದು ಸರಿಯಲ್ಲ ಎಂದರು.
ತನಿಖೆ ನಂತರ ಸತ್ಯಾಸತ್ಯತೆ ಹೊರಬೀಳುತ್ತದೆ. ತನಿಖೆಯ ವರದಿ ಬರುವವರೆಗೂ ಕಾದು ನೋಡಬೇಕು ಎಂದರು. ನೀರಿನಿಂದ ಹೊರಬಿದ್ದ ಮೀನಿನಂತೆ ಕುಮಾರಸ್ವಾಮಿ ಅಧಿಕಾರವಿಲ್ಲದೆ ಪರಿತಪಿಸುತ್ತಿದ್ದಾರೆ. ಮುಖ್ಯಮಂತ್ರಿಯಾಗುವ ಹಗಲುಗನಸು ಕಾಣುತ್ತಿದ್ದಾರೆ. ಮೊದಲು ಪಕ್ಷ ಸಂಘಟನೆಗೆ ಒತ್ತು ನೀಡಲಿ ಎಂದು ಟೀಕಿಸಿದರು.