ಬೆಂಗಳೂರು, ಜೂ.8: ತಲೆಮರೆಸಿಕೊಂಡಿದ್ದ ರೌಡಿ ಶೀಟರ್ನನ್ನು ಕಳೆದ ರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ಜೆಸಿ ರಸ್ತೆಯಲ್ಲಿ ಕಲಾಸಿಪಾಳ್ಯ ಠಾಣೆ ಇನ್ಸ್ಪೆಕ್ಟರ್ ಅನಿಲ್ಕುಮಾರ್ ಮತ್ತವರ ತಂಡ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಕುಖ್ಯಾತ ರೌಡಿ ಸಲೀಂನನ್ನು ಬಂಧಿಸಿದ್ದಾರೆ.
ಕೊಲೆ, ಅಪಹರಣ, ಸುಲಿಗೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ತೊಡಗಿ ತಲೆ ಮರೆಸಿಕೊಂಡಿದ್ದ ಸಲೀಂ ನಿನ್ನೆ ಜೆಸಿ ರಸ್ತೆಯಲ್ಲಿ ಅಡ್ಡಾಡುತ್ತಿದ್ದ ಬಗ್ಗೆ ಮಫ್ತಿಯಲ್ಲಿದ್ದ ಪೊಲೀಸರು ಕಲಾಸಿಪಾಳ್ಯ ಠಾಣೆ ಇನ್ಸ್ಪೆಕ್ಟರ್ಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪ್ರತ್ಯೇಕ ಮೂರು ತಂಡಗಳನ್ನು ರಚಿಸಿ ರಾತ್ರಿ 10.30ರಲ್ಲಿ ಕಾರ್ಯಾಚರಣೆ ಆರಂಭಿಸಿದೆ. ಅನಿಲ್ಕುಮಾರ್ ಮತ್ತವರ ಸಿಬ್ಬಂದಿಗಳು ಜೆಸಿ ರಸ್ತೆ ಬಳಿ ಹೋಗುವಾಗ ಸಲೀಂ ಕಣ್ಣಿಗೆ ಬಿದ್ದಿದ್ದಾನೆ. ತಕ್ಷಣ ಆತನನ್ನು ಹಿಡಿಯಲು ಹೋದಾಗ ಕೈಲಿದ್ದ ಡ್ರ್ಯಾಗರ್ ತೆಗೆದು ಪೊಲೀಸರ ಮೇಲೆ ಹಲ್ಲೆ ಮಾಡಿ ದ್ವಿಚಕ್ರ ವಾಹನದಲ್ಲಿ ಪರಾರಿಯಾಗಲು ಪ್ರಯತ್ನಿಸಿದ್ದಾನೆ.
ತಕ್ಷಣ ಎಚ್ಚೆತ್ತುಕೊಂಡ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ಘಟನೆಯಲ್ಲಿ ಅನಿಲ್ಕುಮಾರ್ ಅವರ ಎಡಗೈ ಹಾಗೂ ಕಾನ್ಸ್ಟೆಬಲ್ ರೆಹಮಾನ್ಖಾನ್ ಅವರ ಕೈಗೆ ಗಾಯಗಳಾಗಿವೆ. ಬಂಧಿತ ಸಲೀಂನನ್ನು ಕೂಡ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸಿಟಿ ಮಾರ್ಕೆಟ್, ಕಲಾಸಿಪಾಳ್ಯ, ಜೆಜೆ ನಗರ ಸೇರಿದಂತೆ ಹಲವು ಠಾಣೆಗಳಲ್ಲಿ ಈತ ಅಪರಾಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಎಂದು ಹೇಳಲಾಗಿದೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಆಯುಕ್ತ ಬಿ.ಎನ್.ಎಸ್.ರೆಡ್ಡಿ, ಡಿಸಿಪಿ ಹೇಮಂತ್ ನಿಂಬಾಳ್ಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸಿದರು.