ಬೆಂಗಳೂರು, ಜೂ.9: ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಂಬಂಧ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರನ್ನು ಖುಲಾಸೆಗೊಳಿಸಿರುವ ಹೈಕೋರ್ಟ್ ತೀರ್ಪಿನ ವಿರುದ್ಧ ಒಂದು ವಾರದೊಳಗೆ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಕಾನೂನು ಸಚಿವ ಟಿ.ಬಿ. ಜಯಚಂದ್ರ ಅವರು ತಿಳಿಸಿದ್ದಾರೆ.
ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ಸಂಬಂಧ ಈಗಾಗಲೇ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಿದ್ದೇವೆ. ಪ್ರಕರಣದ ಪ್ರಾಸಿಕ್ಯೂಟರ್ (ಎಸ್ಪಿಪಿ)ಯಾಗಿ ನೇಮಕಗೊಂಡಿರುವ ಬಿ.ವಿ. ಆಚಾರ್ಯ ಅವರು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ಸಿದ್ಧತೆಯಲ್ಲಿ ತೊಡಗಿದ್ದು, ಇನ್ನೊಂದು ವಾರದೊಳಗೆ ಮೇಲ್ಮನವಿ ಸಲ್ಲಿಸಲಿದ್ದಾರೆ ಎಂದರು.
ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಅಹವಾಲುಗಳನ್ನು ಸ್ವೀಕರಿಸಿದ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಜಯಲಲಿತಾ ಅವರ ವಿರುದ್ಧ ಮೇಲ್ಮನವಿ ಸಲ್ಲಿಸುವ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸ್ಪಷ್ಟಪಡಿಸಿದರು.
ವಿಧಾನ ಮಂಡಲದ ಅಧಿವೇಶನ ನಡೆಸುವ ಸಂಬಂಧ ಇದೇ ತಿಂಗಳ 11 ರಂದು ನಡೆಯುವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಬೆಂಗಳೂರು ಇಲ್ಲವೇ, ಬೆಳಗಾವಿಯಲ್ಲಿ ಯಾವಾಗ ನಡೆಸಬೇಕೆಂಬುದರ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದರು.
ಬೆಳಗಾವಿಯಲ್ಲಿ ಇಲ್ಲವೇ, ಬೆಂಗಳೂರಿನಲ್ಲಿ ಅಧಿವೇಶನ ನಡೆಸಬೇಕೆನ್ನುವ ಗೊಂದಲವನ್ನು ಬಿಜೆಪಿಯವರು ಮೊದಲು ಬಗೆಹರಿಸಿಕೊಳ್ಳಲಿ ಎಂದು ವ್ಯಂಗ್ಯವಾಡಿದರು.