ಹುಬ್ಬಳ್ಳಿ, ಜೂ.14: ರಾಜ್ಯದಲ್ಲಿ ನಡೆಯುತ್ತಿರುವ ಕ್ರಿಕೆಟ್ ಬೆಟ್ಟಿಂಗ್ ದಂಧೆಯ ನ್ಯಾಯಯುತ ತನಿಖೆಗೆ ಸರ್ಕಾರ ಸಿಬಿಐಗೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಇಂದಿಲ್ಲಿ ಒತ್ತಾಯಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಒಂದಂಕಿ ಲಾಟರಿಯಂತೆ ಕ್ರಿಕೆಟ್ ಬೆಟ್ಟಿಂಗ್ ದಂಧೆಯು ಪ್ರಭಾವಿಗಳ ಕೈವಾಡದಿಂದ ಎಗ್ಗಿಲ್ಲದೆ ನಡೆಯುತ್ತಿದೆ. ಇದರ ನ್ಯಾಯಯುತ ತನಿಖೆ ನಡೆಸಲು ಸರ್ಕಾರ ಸಿಬಿಐಗೆ ವಹಿಸಬೇಕು ಎಂದರು. ರಾಜ್ಯದ ಎಲ್ಲಾ ಭಾಗದಲ್ಲೂ ಕ್ರಿಕೆಟ್ ಬೆಟ್ಟಿಂಗ್ ದಂಧೆಯ ಜಾಲ ವಿಸ್ತರಣೆಗೊಂಡಿದೆ. ಇದರಲ್ಲಿ ಪ್ರಭಾವಿ ವ್ಯಕ್ತಿಗಳ ಕೈವಾಡವಿದೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತುಘಲಕ್ ದರ್ಬಾರು ನಡೆಸುತ್ತಿದೆ. ಬೆಳಗಾವಿಯಲ್ಲಿ ಹತ್ತು ದಿನ ಮತ್ತು ಬೆಂಗಳೂರಿನಲ್ಲಿ 10 ದಿನಗಳ ಕಾಲ ಅಧಿವೇಶನ ನಡೆಸುವುದು ಬೇಡ. 20 ದಿನಗಳ ಕಾಲವೂ ಒಂದೇ ಕಡೆ ಅಧಿವೇಶನ ನಡೆಸಬೇಕು. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಹೇಳಿದರು.