ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ವಿರುದ್ಧದ ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸುತ್ತಿದ್ದ ಲೋಕಾಯುಕ್ತ ಎಸ್ಪಿ ಸೋನಿಯಾ ನಾರಂಗ್ ನೇತೃತ್ವದ ತನಿಖೆಗೆ ಹೈಕೋರ್ಟ್ ಬುಧವಾರ ತಡೆಯಾಜ್ಞೆ ವಿಧಿಸಿದೆ.
ಲೋಕಾಯುಕ್ತ ಪೊಲೀಸರ ವಿಚಾರಣೆ ಭೀತಿ ಎದುರಿಸುತ್ತಿದ್ದ ಅಶ್ವಿನ್ ರಾವ್ ಇಂದು ತಮ್ಮ ವಿರುದ್ಧದ ಲೋಕಾಯುಕ್ತ ಪೊಲೀಸ್ ತನಿಖೆಗೆ ತಡೆ ಕೋರಿ ವಿಭಾಗೀಯ ಪೀಠದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ರಾಜ್ಯ ಸರ್ಕಾರ ಎಸ್ ಐಟಿ ತನಿಖೆಗೆ ಆದೇಶಿಸಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸ್ ತನಿಖೆಗೆ ತಡೆ ನೀಡಿದೆ.
ಈಗಾಗಲೇ ಲೋಕಾಯುಕ್ತರು ಪ್ರಕರಣವನ್ನು ವಿಶೇಷ ತನಿಖಾ ತಂಡ(ಎಸ್ಐಟಿ)ಕ್ಕೆ ಶಿಫಾರಸು ಮಾಡಿದ್ದು, ಸರ್ಕಾರ ಸಹ ಎಸ್ ಐಟಿ ರಚನೆ ಮಾಡಿದೆ. ಹೀಗಾಗಿ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುವ ಅಗತ್ಯವಿಲ್ಲ, ಈ ಕೂಡಲೇ ಸೋನಿಯಾ ನಾರಂಗ್ ನೇತೃತ್ವದ ತನಿಖೆಗೆ ತಡೆ ನೀಡಬೇಕು ಎಂದು ಅಶ್ವಿನ್ ರಾವ್ ಮನವಿ ಮಾಡಿದ್ದರು.
ಉಪ ಲೋಕಾಯುಕ್ತ ಸುಭಾಷ್ ಬಿ.ಅಡಿ ತನಿಖೆ ಮುಂದುವರಿಸುವಂತೆ ಲೋಕಾಯುಕ್ತ ಎಸ್ಪಿ ಸೋನಿಯಾ ನಾರಂಗ್ ಅವರಿಗೆ ನಿರ್ದೇಶನ ನೀಡಿ ಮತ್ತೂಮ್ಮೆ ಆದೇಶ ಹೊರಡಿಸಿದ್ದರು. ಆದರೆ ಉಪ ಲೋಕಾಯುಕ್ತರ ಆದೇಶವನ್ನು ಪ್ರಶ್ನಿಸಿ ಅಶ್ವಿನ್ ರಾವ್ ರಿಟ್ ಅರ್ಜಿ ಸಲ್ಲಿಸಿದ್ದರು.
ಲೋಕಾಯುಕ್ತ ಸಂಸ್ಥೆಯಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾದ ವರದಿ ಆಧರಿಸಿ ಈ ಕುರಿತು ತನಿಖೆ ನಡೆಸಲು ಎಡಿಜಿಪಿ ಶ್ರೇಣಿಗಿಂತ ಕಡಿಮೆ ಇಲ್ಲದ ಅಧಿಕಾರಿ ನೇತೃತ್ವದ ತನಿಖಾ ತಂಡ ರಚಿಸುವಂತೆ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಸರ್ಕಾರಕ್ಕೆ ಪತ್ರ ಬರೆದಿದ್ದರು. ಅದರಂತೆ ಸರ್ಕಾರ ಹೆಚ್ಚುವರಿ ಪೊಲೀಸ್ ಆಯುಕ್ತ ಕಮಲ್ ಪಂಥ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದೆ.