ಬೆಂಗಳೂರು,ಜು.1-ರಾಜ್ಯದಲ್ಲಿ ನಡೆಯುತ್ತಿರುವ ರೈತರ ಸರಣಿ ಆತ್ಮಹತ್ಯೆ ಪ್ರಕರಣಗಳು ,ಕಬ್ಬು ಬೆಳೆಗಾರರ ಸಂಕಷ್ಟ, ಸರ್ಕಾರ ಹಾಗೂ ಪಕ್ಷ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರಿಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ.
ಕಬ್ಬು ಬೆಳೆಗಾರರಿಗೆ ಬಾಕಿ ನೀಡದೆ ಬೆಳೆಗಾರರು ಸಂಕಷ್ಟಕ್ಕೀಡಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ರಾಜ್ಯದಲ್ಲಿ ಕಳೆದ 6 ತಿಂಗಳಲ್ಲಿ 40ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಸಂಕಷ್ಟಕ್ಕೆ ಪಕ್ಷ ಹಾಗೂ ಸರ್ಕಾರ ಕೈಗೊಂಡಿರುವ ಕ್ರಮ ಏನು ಎಂಬ ಮಾಹಿತಿ ನೀಡಬೇಕೆಂದು ರಾಹುಲ್ ಗಾಂಧಿ ತಿಳಿಸಿದ್ದಾರೆ ಎಂದು ಹೇಳಲಾಗಿದೆ. ಮಂಡ್ಯ, ಗುಲ್ಬರ್ಗ, ಶಿವಮೊಗ್ಗ, ಹಾಸನ ಸೇರಿದಂತೆ ಹಲವೆಡೆ ಸಂಕಷ್ಟಕ್ಕೀಡಾದ ಹಾಗೂ ಸಾಲಬಾಧೆ ತಾಳಲಾರದ ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವುದು ಆತಂಕದ ವಿಷಯವಾಗಿದೆ. ಕಾಂಗ್ರೆಸ್ ಪಕ್ಷದ ಸರ್ಕಾರ ರೈತರ ನೆರವಿಗೆ ಧಾವಿಸಬೇಕು ಈ ಸಂಬಂಧ ಕೈಗೊಂಡಿರುವ ಕಾರ್ಯಕ್ರಮಗಳೇನು ಎಂಬ ಮಾಹಿತಿಯನ್ನು ನೀಡಬೇಕೆಂದು ಅವರು ಸೂಚನೆ ನೀಡಿದ್ದಾರೆ. ರಾಜ್ಯಾದ್ಯಂತ ರೈತರ ಆತ್ಮಹತ್ಯೆ ಬಗ್ಗೆ ಹೋರಾಟಗಳು ನಡೆಯುತ್ತಿವೆ. ವಿಪಕ್ಷಗಳಿಗೆ ಅಸ್ತ್ರವಾಗದಂತೆ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ. ರೈತರ ಆತ್ಮಹತ್ಯೆ ನಿಯಂತ್ರಣ ಮಾಡಬೇಕು ಎಂದು ಅವರು ಸಲಹೆ ಮಾಡಿದ್ದಾರೆ.