ಮೈಸೂರು, ಜು.27: ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂಬಂತೆ ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾಯುಕ್ತ ಕಚೇರಿಯಲ್ಲಿ ನಡೆದಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಅವರ ಬಂಧನದ ವಿಚಾರ ನನಗೆ ಅಧಿಕೃತವಾಗಿ ತಿಳಿದು ಬಂದಿಲ್ಲ. ಯಾರೇ ಆಗಲಿ ಮಾಡಿದ್ದುಣ್ಣೋ ಮಾರಾಯ ಎಂಬಂತೆ ಅವರವರು ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸಲೇಬೇಕೆಂದು ಅವರು ಹೇಳಿದ್ದಾರೆ.
ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಲೋಕಾಯುಕ್ತದಲ್ಲಿ ನಡೆದಿರುವ ಸತ್ಯಾಸತ್ಯತೆ ಹೊರಬರಬೇಕೆಂಬ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡ ರಚಿಸಲಾಯಿತು. ತನಿಖೆಯಲ್ಲಿ ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್ ಮಾತನಾಡಿ, ಅಶ್ವಿನ್ ರಾವ್ ಬಂಧನ ಒಳ್ಳೆಯ ಬೆಳವಣಿಗೆ. ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್ ರಾವ್ ಅವರ ರಾಜೀನಾಮೆಗೆ ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಸೇರಿದಂತೆ ಹಲವರು ಒತ್ತಾಯಿಸಿದ್ದಾರೆ. ಆಗಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿತ್ತು ಎಂದು ಹೇಳಿದರು.