ಬೆಂಗಳೂರು, ಸೆ.2: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಬುಧವಾರ ಬೆಳಗ್ಗೆ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿದ ಪರಮೇಶ್ವರ್ ಪಾಲಿಕೆಯಲ್ಲಿ ಉಭಯ ಪಕ್ಷಗಳ ನಡುವೆ ಅಧಿಕಾರ ಹಂಚಿಕೆ, ಮೈತ್ರಿಗೆ ಸಂಬಂಧಿಸಿದ ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ಶಾಸಕ ಝಮೀರ್ಅಹ್ಮದ್ಖಾನ್ ಉಪಸ್ಥಿತರಿದ್ದರು. ಇದಕ್ಕೂ ಮುಂಚಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ನಿವಾಸ ಕಾವೇರಿಯಲ್ಲಿ ಡಾ.ಜಿ.ಪರಮೇಶ್ವರ್, ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್, ಎಐಸಿಸಿ ಕಾರ್ಯದರ್ಶಿ ಡಾ.ಚೆಲ್ಲಕುಮಾರ್ ಜೊತೆ ಮೈತ್ರಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಿದರು.
ಅಲ್ಲದೆ, ಸಚಿವರಾದ ರೋಷನ್ಬೇಗ್, ಎಚ್.ಎಸ್.ಮಹದೇವಪ್ರಸಾದ್, ಶಿವರಾಜ ತಂಗಡಗಿ, ಉಮಾಶ್ರೀ, ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಸಚಿವ ಸಂಪುಟದ ಸಹದ್ಯೋಗಿಗಳಿಂದ ಬಿಬಿಎಂಪಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಿಂದ ಆಗಬಹುದಾದ ಸಾಧಕ-ಬಾಧಕಗಳ ಕುರಿತು ಪ್ರತ್ಯೇಕವಾಗಿ ಅಭಿಪ್ರಾಯಗಳನ್ನು ಸಂಗ್ರಹಿಸಿದರು.
ಕರ್ನಾಟಕ