ಹುಬ್ಬಳ್ಳಿ, ಸೆ.8 ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಹಾಗೂ ಪೋಷಕರು ನಗರದ ಕೆಎಲ್ಇ ಸಂಸ್ಥೆಯ ಬಿ.ಬಿ.ಎ ಕಾಲೇಜಿನ ಪ್ರಿನ್ಸಿಪಾಲರಿಗೆ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ನಡೆದಿದೆ.
ಆನಂದ್ ಒಡ್ಡಿಮ್ ಎಂಬುವವರೇ ವಿದ್ಯಾರ್ಥಿಗಳ ಆಕ್ರೋಶಕ್ಕೆ ಗುರಿಯಾದ ಪ್ರಿನ್ಸಿಪಾಲ್ರಾಗಿದ್ದಾರೆ. ಇವರು ಇಂಡಸ್ಟ್ರಿಯಲ್ ಟೂರ್ ನೆಪದಲ್ಲಿ ವಿದ್ಯಾರ್ಥಿಗಳನ್ನು ಗೋವಾಕ್ಕೆ ಕರೆದೊಯ್ದಿದ್ದರು. ಆ ಸಂದರ್ಭದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಸುದ್ದಿ ತಿಳಿದ ತಕ್ಷಣ ಆಕ್ರೋಶಗೊಂಡ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರಿನ್ಸಿಪಾಲ್ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಇಷ್ಟಕ್ಕೆ ನಿಲ್ಲದ ವಿದ್ಯಾರ್ಥಿಗಳು ಹಾಗೂ ಪೋಷಕರ ಆಕ್ರೋಶ ಕಾಲೇಜಿಗೆ ಮುತ್ತಿಗೆ ಹಾಕಿ ಅಲ್ಲಿದ್ದ ಸಿ.ಸಿ ಕ್ಯಾಮೆರಾ ಹಾಗೂ ಪೀಠೋಪಕರಣಗಳನ್ನು ಧ್ವಂಸಗೊಳಿಸಿ ಪ್ರಿನ್ಸಿಪಾಲ್ ವಿರುದ್ಧ ಘೋಷಣೆ ಕೂಗಿದರಲ್ಲದೆ ಕಾಲೇಜಿನ ಆವರಣದಲ್ಲಿ ನಿಲ್ಲಿಸಲಾಗಿದ್ದ ಪ್ರಿನ್ಸಿಪಾಲರ ಕಾರನ್ನು ಜಖಂಗೊಳಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥ ಗೋಪಾಲ್ ಬಿರಾದಾರ್ ಅವರನ್ನು ಥಳಿಸಿದರು.
ಸುದ್ದಿ ತಿಳಿದ ತಕ್ಷಣ ವಿದ್ಯಾನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರ ಮನವೊಲಿಸಲು ಪ್ರಯತ್ನಿಸಿದರೂ ಆಕ್ರೋಶ ಕಡಿಮೆಯಾಗಲಿಲ್ಲ. ಕೊನೆಗೆ ಪೊಲೀಸರು ಪ್ರಿನ್ಸಿಪಾಲ್ ಅವರನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ.