ಕರ್ನಾಟಕ

ಮಹಾದಾಯಿ-ಕಳಸ-ಬಂಡೂರಿ ನಾಲಾ ಯೋಜನೆ ಅನುಷ್ಠಾನ : ಮತ್ತೆ ಕೇಂದ್ರಕ್ಕೆ ಮೊರೆ

Pinterest LinkedIn Tumblr

cm

ಬೆಂಗಳೂರು, ಸೆ.28: ಮಹದಾಯಿ ಹಾಗೂ ಕಳಸ-ಬಂಡೂರಿ ನಾಲಾ ಯೋಜನೆ ಅನುಷ್ಠಾನ ವಿಚಾರದಲ್ಲಿ ಮುಂದೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲು ಮತ್ತೊಮ್ಮೆ ಸರ್ವಪಕ್ಷಗಳ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದಿಲ್ಲಿ ತಿಳಿಸಿದರು.

ವಿವಾದ ಬಗೆಹರಿಸಲು ಮಧ್ಯ ಪ್ರವೇಶ ಮಾಡಬೇಕು ಎಂದು ಈಗಾಗಲೇ ಪ್ರಧಾನಿ ಬಳಿಗೆ ಸರ್ವಪಕ್ಷಗಳ ನಿಯೋಗವನ್ನು ಕೊಂಡೊಯ್ದು ಮನವಿ ಮಾಡಲಾಗಿದೆ. ನಿಯೋಗ ತೆರಳಿ ಒಂದು ತಿಂಗಳಾಯ್ತು, ಇದುವರೆಗೂ ಪ್ರಧಾನಿ ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಕ್ರಮ ಕೈಗೊಳ್ಳಬಹುದೆಂಬ ಭರವಸೆಯಲ್ಲಿ ನಾವಿದ್ದೇವೆ ಎಂದು ಅವರು ಹೇಳಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿ-2011 ರ ದತ್ತಾಂಶ ಮತ್ತು ವರದಿಗಳನ್ನು ಬಿಡುಗಡೆ ಮಾಡಿದ ನಂತರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ನ್ಯಾಯಾಧೀಕರಣದ ಹೊರಗೆ ವಿವಾದಕ್ಕೆ ಪರಿಹಾರ ಕಂಡುಕೊಳ್ಳಬೇಕು. ಗೋವಾ, ಮಹಾರಾಷ್ಟ್ರ ಹಾಗೂ ಕರ್ನಾಟಕ ಮುಖ್ಯಮಂತ್ರಿಗಳ ಸಭೆ ಕರೆದು ಚರ್ಚಿಸಬೇಕು ಎಂದು ಪ್ರಧಾನಿಗೆ ಮನವಿ ಮಾಡಲಾಗಿದೆ. ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಈ ವಿಚಾರದಲ್ಲಿ ಮುಂದೇನು ಮಾಡಬೇಕು ಎಂಬ ಎಂಬ ಬಗ್ಗೆ ಅಭಿಪ್ರಾಯ ತಿಳಿಯಲು ಮತ್ತೊಮ್ಮೆ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದರು.

ಬಿಎಸ್‌ವೈ ಹೇಳಿಕೆಗೆ ಟೀಕೆ

ಈ ವಿವಾದದಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಬಳಿಗೆ ನಿಯೋಗ ಕರೆದೊಯ್ಯಬೇಕು ಎಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಸೋನಿಯಾ ಅವರೇನು ಪ್ರಧಾನಿ ಅಲ್ಲ. ಮೋದಿ ಅವರ ಬಳಿಗೆ ಹೋಗಿ ಅವರು ಮಧ್ಯ ಪ್ರವೇಶಿಸುವಂತೆ ಮನವೊಲಿಸುವುದನ್ನು ಬಿಟ್ಟು ಸರ್ಕಾರದ ವಿರುದ್ಧ ಇಲ್ಲ-ಸಲ್ಲದ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದರು.

17 ಜನ ಬಿಜೆಪಿ ಸಂಸದರಿದ್ದಾರೆ. ನಾಲ್ಕು ಜನ ಕೇಂದ್ರ ಸಚಿವರಿದ್ದಾರೆ. ಅವರೆಲ್ಲಾ ಪ್ರಧಾನಿ ಅವರ ಮೇಲೆ ಒತ್ತಡ ಹೇರಿ ವಿವಾದ ಬಗೆಹರಿಸುವಂತೆ ಮನವಿ ಮಾಡಿಕೊಡಬೇಕು ಎಂದು ಅವರು ಹೇಳಿದರು.

ನಾವೆಂದೂ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಿಲ್ಲ. ಬಿಜೆಪಿಯವರು ಅನಗತ್ಯವಾಗಿ ಈ ವಿಚಾರದಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ಆಕ್ಷೇಪಿಸಿದರು.

ನೆಲ-ಜಲ-ಗಡಿ ವಿಚಾರದಲ್ಲಿ ಮೊದಲಿನಿಂದಲೂ ಒಂದೇ ನಿಲುವು ತಾಳಿದ್ದು, ಮುಂದೆಯೂ ಅದೇ ನಿಲುವು ಮುಂದುವರೆಸಲಾಗುವುದು ಎಂದರು.

ಸಂಪುಟ ವಿಸ್ತರಣೆ

ತಾವು ಇತ್ತೀಚೆಗೆ ದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‌ಗಾಂಧಿ, ರಾಜ್ಯ ಉಸ್ತುವಾರಿ ದಿಗ್ವಿಜಯಸಿಂಗ್ ಅವರು ವಿದೇಶ ಪ್ರವಾಸದಲ್ಲಿದ್ದರಿಂದ ಸಂಪುಟ ವಿಸ್ತರಣೆ ಕುರಿತು ಚರ್ಚೆ ಮಾಡಲು ಸಾಧ್ಯವಾಗಲಿಲ್ಲ. ಅವರು ಬಂದ ನಂತರ ಮತ್ತೊಮ್ಮೆ ದೆಹಲಿಗೆ ತೆರಳಿ ಚರ್ಚೆ ಮಾಡಲಾಗುವುದು ಎಂದು ಸಿದ್ಧರಾಮಯ್ಯ ಸ್ಪಷ್ಟಪಡಿಸಿದರು.

Write A Comment