ಬೆಂಗಳೂರು, ಅ.2: ರಾಜ್ಯದಲ್ಲಿ ಹಾಗೂ ಬೆಂಗಳೂರು ನಗರದಲ್ಲಿ ಸಮರ್ಪಕ ಶೌಚಾಲಯಗಳ ನಿರ್ಮಾಣಕ್ಕೆ ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ನಾಗರಾಜ್ ಇಂದು ಕೆಂಪೇಗೌಡ ಬಸ್ ನಿಲ್ದಾಣದ ಬಳಿ ಶೌಚಾಲಯ ಉಪಕರಣಗಳ ಪ್ರದರ್ಶನದ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.
ಗಾಂಧೀಜಿಯವರು ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಿದ್ದರು. ಅವರ ಜಯಂತಿ ದಿನವಾದ ಇಂದು ನಾವು ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಬೇಕು. ಶೌಚಾಲಯಗಳ ನಿರ್ಮಾಣಕ್ಕಾಗಿ ಕಳೆದ ಎರಡು ದಶಕಗಳಿಂದಲೂ ಹೋರಾಟ ನಡೆಸುತ್ತ ಬಂದಿದ್ದೇವೆ. ಆದರೂ ಆಳುವ ಸರ್ಕಾರಗಳು ಆದ್ಯತೆ ನೀಡಿಲ್ಲ ಎಂದು ಆರೋಪಿಸಿದರು.
ಬೆಂಗಳೂರು ನಗರದ ವಿಧಾನಸೌಧ, ರಾಜಭವನ, ವಿಕಾಸಸೌಧ, ಬಹುಮಹಡಿ ಕಟ್ಟಡ, ಕೆಂಪೇಗೌಡ ಬಸ್ ನಿಲ್ದಾಣ, ಲಾಲ್ಬಾಗ್, ಕಬ್ಬನ್ಪಾರ್ಕ್ ಮುಂತಾದೆಡೆ ಸಾರ್ವಜನಿಕ ಚಾಲಯಗಳಿಲ್ಲದೆ ಜನತೆ ಯಾತನೆ ಪಡಬೇಕಾಗಿದೆ. ಬೆಂಗಳೂರು ನಗರದಲ್ಲಿ ಕನಿಷ್ಟ 15 ಸಾವಿರ ಶೌಚಾಲಯಗಳನ್ನು ನಿರ್ಮಾಣ ಮಾಡಬೇಕು ಎಂದು ಅವರು ಹೇಳಿದರು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೌಚಾಲಯಗಳನ್ನು ನಿರ್ಮಾಣ ಮಾಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಶೌಚಾಲಯಗಳಿಲ್ಲದೆ ಮಹಿಳೆಯರು ಯಮಯಾತನೆ ಪಡುತ್ತಿದ್ದಾರೆ. ಪ್ರತಿ ಗ್ರಾಮಗಳಲ್ಲಿ ಹತ್ತು ಸುಸಜ್ಜಿತ ಶೌಚಾಲಯಗಳನ್ನು ನಿರ್ಮಾಣ ಮಾಡುವ ಮೂಲಕ ಗಾಂಧೀಜಿಯವರ ಸ್ವಚ್ಛತೆಯ ಕನಸನ್ನು ನನಸು ಮಾಡಬೇಕೆಂದು ಹೇಳಿದರು.