ಚಿಕ್ಕಬಳ್ಳಾಪುರ, ನ.4- ಗೋಮಾಂಸ ಸೇವನೆ ಕುರಿತ ಸಿಎಂ ಹೇಳಿಕೆ ಸಂಬಂಧ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ಆರೋಗ್ಯ ಸಚಿವ ಯು.ಟಿ.ಖಾದರ್ ಸವಾಲು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ ಗೃಹ ಸಚಿವ ರಿಜಿಜು ಅವರು ಗೋಮಾಂಸ ತಿನ್ನುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ಧೈರ್ಯವಿದ್ದರೆ ಬಿಜೆಪಿ ನಾಯಕರು ಅವರ ವಿರುದ್ಧ ಮಾತನಾಡಲಿ ಎಂದು ಹೇಳಿದರು.
ಬಿಜೆಪಿ ನಾಯಕರಿಗೆ ದೇಶದ ಸಂಸ್ಕೃತಿ ಬಗ್ಗೆ ಗೊತ್ತಿಲ್ಲ. ದೇಶಭಕ್ತಿ ಹೆಸರಲ್ಲಿ ರಾಜ್ಯ, ದೇಶ ಒಡೆಯುವ ಯತ್ನ ನಡೆಸಿದ್ದಾರೆ ಎಂದು ವಾಗ್ದಾಳಿ ಮಾಡಿದರು. ಜಿಪಂ, ತಾಪಂ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯವರು ವೋಟ್ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.