ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತೀವ್ರ ಅಸ್ವಸ್ಥಗೊಂಡಿದ್ದು, ಇಲ್ಲಿಯ ವಿವೇಕಾನಂದ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜ್ವರ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ಅವರು ಬುಧವಾರ ಬೆಳಗಿನ ಜಾವ ರಕ್ತದೊತ್ತಡದಲ್ಲಿ ಏರುಪೇರಾಗಿ ಮನೆಯಲ್ಲಿಯೇ ಕುಸಿದು ಬಿದ್ದರು. ಬಳಿಕ ಆಸ್ಪತ್ರೆಗೆ ಸೇರಿಸಲಾಗಿದೆ.
ಹೃದಯಾಘಾತ ಆಗಿರಬೇಕು ಎಂದು ಭಾವಿಸಿ ಬೆಂಬಲಿಗರು ಹಾಗೂ ಕುಟುಂಬಸ್ಥರು ಅತ್ತುಬಿಟ್ಟಿದ್ದರು. ಅವರ ಗರಡಿಯಲ್ಲಿ ಬೆಳೆದ ಶಾಸಕ ಎನ್. ಎಚ್. ಕೋನರಡ್ಡಿ ಅವರೂ ಬಿಕ್ಕಿ-ಬಿಕ್ಕಿ ಅತ್ತರು.
ವೈದ್ಯರು ಸ್ಕ್ಯಾನಿಂಗ್ ಮೂಲಕ ತಪಾಸಣೆ ನಡೆಸಿ ಹೃದಯದ ತೊಂದರೆಯಿಲ್ಲ. ಎಲ್ಲವೂ ಸಾಮಾನ್ಯವಾಗಿದೆ ಎಂದು ತಿಳಿಸಿದ ಬಳಿಕ ಎಲ್ಲರೂ ನಿರುಮ್ಮಳರಾದರು.