ಬೆಂಗಳೂರು, ನ.20: ಬಳ್ಳಾರಿ ಜಿಲ್ಲೆಯ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿಯನ್ನು ನ.23ರವರೆಗೆ ವಿಶೇಷ ತನಿಖಾ ತಂಡ (ಎಸ್ಐಟಿ)ದ ವಶಕ್ಕೆ ನೀಡಿ ಲೋಕಾಯುಕ್ತ ವಿಶೇಷ ನ್ಯಾಯಾಲಯವು ಆದೇಶ ನೀಡಿದೆ.
ಅಕ್ರಮ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಶುಕ್ರವಾರ ಬೆಳಗ್ಗೆ 11:15ಕ್ಕೆ ಸಿಬಿಐ ಕಚೇರಿಗೆ ಆಗಮಿಸಿದ ಜನಾರ್ದನ ರೆಡ್ಡಿಯನ್ನು ಎಸ್ಐಟಿ ಅಧಿ ಕಾರಿಗಳು ಪ್ರಶ್ನಾವಳಿಗಳನ್ನು ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ಅಲ್ಲದೆ, ಈ ಹೊಸ ಪ್ರಕರಣದ ಕುರಿತು ದಾಖಲೆಗಳನ್ನು ಒದಗಿಸುವಂತೆ ಸೂಚನೆ ನೀಡಿದ್ದಾರೆ.
ಅಕ್ರಮ ಗಣಿ, ಗಡಿ ನಾಶ, ಬೇಲೆಕೇರಿ ಅದಿರು ರಫ್ತು ಸೇರಿದಂತೆ ಜನಾರ್ದನ ರೆಡ್ಡಿ ವಿರುದ್ಧ ದಾಖಲಾಗಿದ್ದ 13 ಪ್ರಕರಣಗಳಲ್ಲಿ ಇತ್ತೀಚೆಗಷ್ಟೇ ಅವರು ಶರತ್ತುಬದ್ಧ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದರು. ಇಂದು ವಿಚಾರಣೆಗೆ ಹಾಜರಾಗಿದ್ದ ವೇಳೆ ಅವರನ್ನು ವಶಕ್ಕೆ ಪಡೆದ ಎಸ್ಐಟಿ ಅಧಿಕಾರಿಗಳು ನ್ಯಾಯಾಲಯದ ಎದುರು ಹಾಜರು ಪಡಿಸಿದರು.
ಎಸ್ಐಟಿ ಅಧಿಕಾರಿಗಳ ಮನವಿಯನ್ನು ಪುರಸ್ಕರಿಸಿದ ಲೋಕಾಯುಕ್ತ ವಿಶೇಷ ನ್ಯಾಯಾಲಯವು ಹೆಚ್ಚಿನ ವಿಚಾರಣೆಗೆ ಅನುಕೂಲವಾಗುವಂತೆ ನ.23ರವರೆಗೆ ಜನಾರ್ದನರೆಡ್ಡಿಯನ್ನು ವಶಕ್ಕೆ ಒಪ್ಪಿಸಿ ಆದೇಶ ಹೊರಡಿಸಿತು.