ಬೆಂಗಳೂರು, ನ.23: ಡೆಂಘೀ ಕಾಯಿಲೆಯಿಂದ ರಾಜ್ಯದಲ್ಲಿ ಕಳೆದ 10 ತಿಂಗಳಲ್ಲಿ 9 ಮಂದಿ ಮೃತಪಟ್ಟಿದ್ದು, ಚಿಕೂನ್ಗುನ್ಯಾದಿಂದ ಯಾರೂ ಸಾವನ್ನಪ್ಪಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ .ಟಿ.ಖಾದರ್ ವಿಧಾನಪರಿಷತ್ತಿಗೆ ತಿಳಿಸಿದರು.
ಕ್ಯಾಪ್ಟನ್ ಗಣೇಶ್ಕಾರ್ಣಿಕ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಡೆಂಘೀ ಮತ್ತು ಚಿಕೂನ್ಗುನ್ಯಾ ಮಂಗಳೂರು ಮತ್ತು ಬೆಂಗಳೂರಿನಲ್ಲಿ ಹೆಚ್ಚಾಗಿದ್ದು, ಇದರ ನಿಯಂತ್ರಣಕ್ಕೆ ಜಿಲ್ಲಾ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಸಭೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಡೆಂಘೀ, ಚಿಕೂನ್ಗುನ್ಯಾ ಪೀಡಿತರ ಪ್ರಮಾಣ, ಆಸ್ಪತ್ರೆಗಳಲ್ಲಿ ರೋಗಿಗಳ ಒತ್ತಡ ಮತ್ತು ಅವರಿಗೆ ಸಿಗುವ ಸವಲತ್ತುಗಳ ಬಗ್ಗೆ ಪರಿವೀಕ್ಷಣೆ ಮಾಡಲು ವೈದ್ಯರ ತಂಡ ರಚಿಸಲಾಗಿದೆ. ರೋಗದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.