ಬೆಂಗಳೂರು: ಟಿವಿಗಳಲ್ಲಿ ಜ್ಯೋತಿಷ್ಯ ಕಾರ್ಯಕ್ರಮ ಪ್ರಸಾರ ನಿರ್ಬಂಧಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಡಿ.ಜಿ.ಸಾಗರ್ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಎಲ್ಲಾ ಟಿವಿಗಳಲ್ಲೂ ಪ್ರತಿದಿನ ಜ್ಯೋತಿಷ್ಯ ಪ್ರಸಾರವಾಗುತ್ತದೆ. ಮಾಧ್ಯಮಗಳಲ್ಲಿ ಪ್ರಸಾರವಾಗುವ ಜ್ಯೋತಿಷ್ಯ ಕಾರ್ಯಕ್ರಮಗಳು ಮೌಢ್ಯವನ್ನು ಬಿತ್ತುತ್ತಿವೆ ಎಂದರು. ನಮ್ಮ ಮನೆಯ ಹೆಣ್ಣು ಮಕ್ಕಳು ಸಹ ಇದನ್ನೇ ನೋಡುತ್ತಾರೆ. ಮೊದಲ ಇದರ ಬಗ್ಗೆ ಜನ ಎಚ್ಚೆತ್ತುಕೋಳ್ಳಬೇಕು. ಹೀಗಾಗಿ ಜ್ಯೋತಿಷ್ಯ ಕಾರ್ಯಕ್ರಮ ನಿರ್ಬಂಧಕ್ಕೆ ಚಿಂತನೆ ನಡೆದಿದೆ ಎಂದರು.
ಸಮಾಜದಲ್ಲಿ ಮೌಢ್ಯ ಹಾಗೂ ಕಂದಾಚಾರಗಳ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯ ಇದೆ ಎಂದು ಸಿಎಂ ಹೇಳಿದರು.