ಬೆಂಗಳೂರು, ಜ.22- ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಗಳಿಗೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸಮಾರಂಭಗಳಲ್ಲಿ ಪಾಲ್ಗೊಳ್ಳಲು ಸಚಿವರು ಹಾಗೂ ಅಧಿಕಾರಿಗಳಿಗೆ ರಾಜ್ಯ ಚುನಾವಣಾ ಆಯೋಗ ಅನುಮತಿ ನೀಡಿದೆ.
ಗಣರಾಜ್ಯೋತ್ಸವ, ರಾಜ್ಯ ಸರ್ಕಾರ ಘೋಷಿಸಿರುವ ಜಯಂತಿ ಹಾಗೂ ಸಮಾರಂಭಗಳಲ್ಲಿ ಸಚಿವರು, ಅಧಿಕಾರಿಗಳು ಪಾಲ್ಗೊಳ್ಳ ಬಹುದು ಎಂದು ಆಯೋಗದ ಅಧೀನ ಕಾರ್ಯದರ್ಶಿ ಆರ್.ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ. ಗಣರಾಜ್ಯೋತ್ಸವದಲ್ಲಿ ಸಚಿವರು, ರಾಜಕಾರಣಿಗಳು ಭಾಗವಹಿಸಬಹುದು.
ಆದರೆ ಸಮಾರಂಭದ ವೇದಿಕೆಯನ್ನು ಚುನಾವಣಾ ಪ್ರಚಾರಕ್ಕೆ ಬಳಸುವುದು, ರಾಜಕೀಯ ಪ್ರೇರಿತ ಭಾಷಣ ಮಾಡುವುದು, ನೀತಿ ಸಂಹಿತೆಗೆ ಬಾಧಕವಾಗುವ, ಮತದಾರರ ಮೇಲೆ ಪ್ರಭಾವ ಬೀರುವ ಹೇಳಿಕೆ, ಘೋಷಣೆ, ಆಶ್ವಾಸನೆ ನೀಡದಂತೆ ಎಚ್ಚರಿಸಿದ್ದಾರೆ. ಈ ಬಗ್ಗೆ ಹಲವು ಜಿಲ್ಲಾಧಿಕಾರಿಗಳು ಸ್ಪಷ್ಟನೆ ಕೋರಿ ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಈ ಆದೇಶ ಹೊರಡಿಸಿದೆ.