ಕೋಲಾರ : ಬೆಂಗಳೂರಿನಲ್ಲಿ ನೀರು ಕೇಳಲು ಬಂದ ರೈತರ ಮೇಲೆ ಪೊಲೀಸರು ಗುರುವಾರ ನಡೆಸಿದ ಲಾಠಿ ಚಾರ್ಜ್ ಖಂಡಿಸಿ ಇಂದು ಶುಕ್ರವಾರ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯಾದ್ಯಂತ ಬಂದ್ ಆಚರಿಸಲಾಗುತ್ತಿದೆ.
ಶಾಶ್ವತ ನೀರಾವರಿ ಹೋರಾಟ ಸಮಿತಿ ಕರೆ ನೀಡಿದ್ದು ವಿವಿಧ ಸಂಘಟನೆಗಳು ಬಂದ್ಗೆ ಬೆಂಬಲ ಸೂಚಿಸಿವೆ.ಉಭಯ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಎರ್ಪಡಿಸಲಾಗಿದೆ. ಕೋಲಾರದ ಕೆಲವೆಡೆ ಸರ್ಕಾರಿ ಬಸ್ಗಳ ಮೇಲೆ ಕಲ್ಲುತೂರಾಟ ನಡೆಸಲಾಗಿದೆ.
ರಸ್ತೆ ಮಧ್ಯದಲ್ಲೇ ಪ್ರತಿಭಟನಾ ನಿರತರು ಟಯರ್ಗಳಿಗೆ ಬೆಂಕಿ ಹಚ್ಚಿರುವುದರಿಂದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಸಿದ್ದರಾಮಯ್ಯ ಪೃತಿಕೃತಿ ಶವಯಾತ್ರೆ
ಚಿಕ್ಕಬಳ್ಳಾಪುರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪೃತಿಕೃತಿ ನಿರ್ಮಿಸಿ ಶವಯಾತ್ರೆ ಮಾಡಿ ರೈತರು ಆಕ್ರೋಶ ಹೊರಹಾಕಿದರು.
ಶಾಶ್ವತ ನೀರಾವರಿಗೆ ಆಗ್ರಹಿಸಿ ಗುರುವಾರ ಕೋಲಾರ, ಚಿಕ್ಕಾಬಳ್ಳಾಪುರದ ರೈತರು ಟ್ರಾಕ್ಟರ್ ಮತ್ತಿತರ ವಾಹನಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದರಿಂದಾಗಿ ರಾಜಧಾನಿ ಬೆಂಗಳೂರಿನ ಉತ್ತರ ಭಾಗದ ರಸ್ತೆಗಳಲ್ಲಿ ಸಂಚಾರ ಸ್ತಬ್ಧಗೊಂಡಿತ್ತು. ಈ ವೇಳೆ ಪೊಲೀಸರು ನಡೆಸಿದ ಲಾಠಿ ಚಾರ್ಜ್ಗೆ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
-ಉದಯವಾಣಿ